ರಾಯಚೂರು | ಕುಡಿಯುವ ನೀರಿನ ಸಮಸ್ಯೆ : ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

ರಾಯಚೂರು : ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಕಸದ ವಾಹನಗಳ ಲೋಕಾರ್ಪಣೆಗೆ ಆಗಮಿಸಿದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಅವರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಪುರಸಭೆಯ ವ್ಯಾಪ್ತಿಯ ಕಸದ ವಾಹನಗಳ ಉದ್ಘಾಟನೆಗೆ ಬಿಜೆಪಿ ಶಾಸಕ ಮಾನಪ್ಪ ವಜ್ಜಲ ಆಗಮಿಸಿದ್ದರು. ಈ ವೇಳೆ ಜಮಾಯಿಸಿದ ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ ಕಾರ್ಯಕ್ರಮ ಉದ್ಘಾಟನೆ ಮಾಡಲು ಬಿಡುವುದಿಲ್ಲ ಎಂದು ಫೇರಾವ್ ಹಾಕಿದ್ದಾರೆ.
ಹಲವು ದಿನಗಳಿಂದ ನೀರಿನ ಸಮಸ್ಯೆ ಎದುರಾಗಿದ್ದು, ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಆದರೆ ತಮಗೆ ಸಂಬಂಧವೇ ಇಲ್ಲದಂತೆ ಇಲ್ಲಿನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಾಲ ಕಳೆಯುತ್ತಿದ್ದಾರೆ. ಇತ್ತೀಚೆಗೆ ಬಾವಿ, ಕೊಳವೆ ಬಾವಿಗಳು ಬತ್ತಿ ಹೋಗಿವೆ. ಪ್ರತಿ ದಿನ ನೀರು ತರಲು ಒಂದು ಕಿ.ಮೀ. ಹೋಗಬೇಕು. ಈ ಸಮಸ್ಯೆ ತಕ್ಷಣವೇ ಬಗೆಹರಿಸಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದರು.
'ನೀರಿನ ಸಮಸ್ಯೆಯ ಪರಿಹಾರಕ್ಕೆ ತಕ್ಷಣವೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತಿಳಿಸುವೆ. ಗ್ರಾಮಸ್ಥರ ಎಲ್ಲಾ ಸಮಸ್ಯೆಗಳಿಗೆ ಮುಕ್ತಿ ಸಿಗಲಿದೆ ಎಂದು ಎಂದು ಶಾಸಕ ಮಾನಪ ವಜ್ಜಲ್ ಈ ವೇಳೆ ಭರವಸೆ ನೀಡಿದರು.