Raichur | ನವಜಾತ ಶಿಶುಗಳಲ್ಲಿ ಜನ್ಮಜಾತ ದೋಷಗಳ ಆರಂಭಿಕ ಪತ್ತೆ ಅತ್ಯಗತ್ಯ: ಡಾ. ಸುರೇಂದ್ರ ಬಾಬು

ರಾಯಚೂರು: ನವಜಾತ ಶಿಶುಗಳಲ್ಲಿ ಜನ್ಮಜಾತ ಚಯಾಪಚಯ ನ್ಯೂನ್ಯತೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚುವುದು ಮಗುವಿನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತ್ಯಂತ ಅವಶ್ಯಕವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಸುರೇಂದ್ರ ಬಾಬು ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೃಷ್ಣ ಸಭಾಂಗಣದಲ್ಲಿ ಜನ್ಮಜಾತ ಚಯಾಪಚಯ ನ್ಯೂನ್ಯತೆಗಳನ್ನು ಪತ್ತೆ ಹಚ್ಚುವ ವಿಧಾನಗಳ ಕುರಿತು ಆಯೋಜಿಸಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನವಜಾತ ಶಿಶುಗಳಲ್ಲಿ ಆರೋಗ್ಯದ ಜೈವಿಕ ಕ್ರಿಯೆ (ಚಯಾಪಚಯ) ಸಂಬಂಧಿತ ಕೆಲವು ಜನ್ಮಜಾತ ದೋಷಗಳನ್ನು ನಿರ್ಲಕ್ಷಿಸಿದರೆ ಮಗುವಿನ ಬೆಳವಣಿಗೆ ಕುಂಠಿತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಯೋಗಾಲಯ ಸೇವೆಗಳ ಮೂಲಕ ಇಂತಹ ಸಮಸ್ಯೆಗಳನ್ನು ಆರಂಭದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಹಾಗೂ ಗಣಿ ಪೀಡಿತ ಜಿಲ್ಲೆಗಳಿಗೆ ಮೊದಲ ಆದ್ಯತೆ ನೀಡಿ ಈ ಸೌಲಭ್ಯವನ್ನು ಆರಂಭಿಸಲಾಗಿದ್ದು, ಸಾರ್ವಜನಿಕರಲ್ಲಿ ಇದರ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.
ಈ ವೇಳೆ ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ನಂದಿತಾ ಎಂ.ಎನ್. ಮಾತನಾಡಿ, ಮಗು ಜನಿಸಿದ ತಕ್ಷಣ ನಡೆಸುವ ನವಜಾತ ಶಿಶು ತಪಾಸಣೆಯಿಂದ ಜನ್ಮಜಾತ ದೋಷಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಬಹುದು ಎಂದರು.
ವಿಶೇಷವಾಗಿ ಥೈರಾಯ್ಡ್ ಸಂಬಂಧಿತ ಸಮಸ್ಯೆಗಳನ್ನು ಆರಂಭದಲ್ಲೇ ಗುರುತಿಸಿದರೆ ಸೂಕ್ತ ಔಷಧಿ ಹಾಗೂ ಆಹಾರ ಪದ್ಧತಿಯ ಮೂಲಕ ಮಗುವಿನ ಸಾಮಾನ್ಯ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಬಹುದಾಗಿದೆ. ಪಾಲಕರು ತಮ್ಮ ಮಗುವಿನ ಆರೋಗ್ಯದ ಬಗ್ಗೆ ಯಾವುದೇ ಅನುಮಾನ ಕಂಡುಬಂದರೆ ತಕ್ಷಣ ಸರ್ಕಾರಿ ಆಸ್ಪತ್ರೆಗಳ ಮಕ್ಕಳ ತಜ್ಞರನ್ನು ಸಂಪರ್ಕಿಸಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮಹಮ್ಮದ್ ಶಾಕೀರ್, ಯುಎನ್ಡಿಪಿ ರಾಕೇಶ್, ಡಿಪಿಸಿ ಹಾಗೂ ಸಿಪಿಓ ಬಸವರಾಜಪ್ಪಗೌಡ, ಎಮ್ಎನ್ಡಿ ಜಿಲ್ಲಾ ವ್ಯವಸ್ಥಾಪಕ ಗುರುಗುಪ್ಪಾ ಸೇರಿದಂತೆ ಜಿಲ್ಲೆಯ ವಿವಿಧ ವೈದ್ಯಕೀಯ ಪ್ರಯೋಗ ಶಾಲಾ ತಂತ್ರಜ್ಞರು ತರಬೇತಿ ಕಾರ್ಯಾಗಾರದಲ್ಲಿ ಇದ್ದರು






