Raichur | ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ ವಿವಿಧೆಡೆ ಈಡಿ ದಾಳಿ

ರಾಯಚೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆದಿರುವ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಎಸ್ಸಿಯ ಅಮಾನತುಗೊಂಡ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ಸ್ವಗ್ರಾಮ ದೇವದುರ್ಗ ತಾಲೂಕಿನ ಹೇಮನಾಳ ಸೇರಿದಂತೆ ವಿವಿಧೆಡೆ ಜಾರಿ ನಿರ್ದೇಶನಾಲಯ (ಈಡಿ) ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ತಪಾಸಣೆ ನಡೆಸಿದರು.
ಬೆಂಗಳೂರಿನಿಂದ ಆಗಮಿಸಿದ ಈಡಿ ಅಧಿಕಾರಿಗಳ ತಂಡವು ದೇವದುರ್ಗ ತಾಲೂಕಿನ ಹೇಮನಾಳದಲ್ಲಿರುವ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸ ಹಾಗೂ ಕೆಪಿಎಸ್ಸಿ ನೇಮಕಾತಿಗೆ ಸಂಬಂಧಿಸಿದ ಶಾವಂತಗೇರಾ ಗ್ರಾಮದ ಸುಗೂರೇಶ ಅವರ ಮನೆ ಮೇಲೆ ಬೆಳಿಗ್ಗೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.
ದಾಳಿಯ ವೇಳೆ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಸೇರಿದ ಚರ ಮತ್ತು ಸ್ಥಿರಾಸ್ತಿಗಳ ವಿವರ, ಕುಟುಂಬದ ಸದಸ್ಯರ ಮಾಹಿತಿ, ಜಮೀನು ಹಾಗೂ ಬ್ಯಾಂಕ್ ಖಾತೆಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.
Next Story




