ರಾಯಚೂರಿನಲ್ಲಿ ಕೃಷಿ ಮೇಳಕ್ಕೆ ಭರ್ಜರಿ ಸ್ಪಂದನೆ : ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಉದ್ಘಾಟನೆ

ರಾಯಚೂರು : ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಕೃಷಿ ಮೇಳಕ್ಕೆ ರೈತರಿಂದ ಅಭೂತಪೂರ್ವ ಸ್ಪಂದನೆ ದೊರೆತಿದೆ. ಕೃಷಿ ಮೇಳವನ್ನು ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರು ಗುರುವಾರ ಉದ್ಘಾಟಿಸಿದರು.
ಕೃಷಿ ಮೇಳಕ್ಕೆ ನಿರ್ಮಿಸಲಾದ ಸ್ವಾಗತ ಕಮಾನು ವಿಶಿಷ್ಟ ವಿನ್ಯಾಸದಲ್ಲಿದ್ದು, ರೈತರನ್ನು ಕೈಬೀಸಿ ಆಹ್ವಾನಿಸುವಂತಿತ್ತು. ಮೇಳದಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶುಪಾಲನೆ ಹಾಗೂ ಪಶುವೈದ್ಯಕೀಯ ಸೇವೆಗಳ ಇಲಾಖೆ ಸೇರಿದಂತೆ ರೈತಪರ ಹಲವಾರು ಇಲಾಖೆಗಳು ಮಳಿಗೆಗಳನ್ನು ಸ್ಥಾಪಿಸಿ ಅಗತ್ಯ ಮಾಹಿತಿಯನ್ನು ರೈತರಿಗೆ ಒದಗಿಸುತ್ತಿವೆ.
ಕೃಷಿ ವಿಶ್ವವಿದ್ಯಾಲಯವು ಮೇಳದ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡಿದ್ದು, ರೈತ ಕೇಂದ್ರೀಕೃತ ಚಟುವಟಿಕೆಗಳನ್ನು ವ್ಯಾಪಕವಾಗಿ ಪರಿಚಯಿಸುವಲ್ಲಿ ಯಶಸ್ವಿಯಾಗಿದೆ. ಜಲಾನಯನ ಅಭಿವೃದ್ಧಿ ಯೋಜನೆಯಡಿ ವಿವಿಧ ಬಗೆಯ ಮಣ್ಣುಗಳ ಮಾದರಿ ಪ್ರದರ್ಶನ ಹಾಗೂ ಮಣ್ಣಿಗೆ ಹೊಂದುವ ಬೆಳೆ ಪದ್ಧತಿಗಳನ್ನು ರೈತರಿಗೆ ಪರಿಚಯಿಸಲಾಗುತ್ತಿದೆ.
ಮಣ್ಣು ಮತ್ತು ನೀರು ಸಂರಕ್ಷಣಾ ವಿಭಾಗದ ವತಿಯಿಂದ ಸವಳು–ಜವಳು ಮಣ್ಣನ್ನು ಫಲವತ್ತುಗೊಳಿಸುವ ವಿಧಾನಗಳು, ನೀರಿನ ಸಮರ್ಪಕ ಬಳಕೆ ಕುರಿತ ಮಾಹಿತಿ ನೀಡಲಾಗುತ್ತಿದೆ. ಭತ್ತ, ಹತ್ತಿ, ಬೇಳೆಕಾಳು, ಎಣ್ಣೆಕಾಳು, ಸಿರಿಧಾನ್ಯಗಳ ವಿವಿಧ ತಳಿಗಳು, ಸೂರ್ಯಕಾಂತಿ ಬೆಳೆಯನ್ನು ಲಾಭದಾಯಕವಾಗಿ ಬೆಳೆಯುವ ಕೃಷಿ ಕ್ರಮಗಳ ಬಗ್ಗೆ ರೈತರಿಗೆ ಮಾರ್ಗದರ್ಶನ ನೀಡಲಾಗುತ್ತಿದೆ.
ನೈಸರ್ಗಿಕ ವಿಪತ್ತು ಹಾಗೂ ಕೃಷಿ ಹವಾಮಾನ ವಿಭಾಗದಿಂದ ವಿವಿಧ ಹವಾಮಾನ ಪರಿಸ್ಥಿತಿಗಳಲ್ಲಿ ಅನುಸರಿಸಬೇಕಾದ ಬೇಸಾಯ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದ್ದು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರವು ಕೃಷಿಗೆ ಸಂಬಂಧಿಸಿದ ನವೀನ ಮಾಹಿತಿಯನ್ನು ರೈತರಿಗೆ ತಲುಪಿಸುವ ಕಾರ್ಯದಲ್ಲಿ ತೊಡಗಿದೆ.
ಮೇಳದಲ್ಲಿ ವಿಸ್ಮಯಕಾರಿ ಕೀಟ ಪ್ರಪಂಚ ವಿಶೇಷ ಆಕರ್ಷಣೆಯಾಗಿದ್ದು, ಕೀಟಗಳ ಜೀವವಿಧಾನ ಹಾಗೂ ವೈವಿಧ್ಯಗಳ ಕುರಿತು ಅರಿವು ಮೂಡಿಸಲಾಗುತ್ತಿದೆ. ವಿವಿಧ ಬಗೆಯ ಉತ್ತಮ ಗುಣಮಟ್ಟದ ಬೀಜ ತಳಿಗಳು, ಕೀಟನಾಶಕಗಳು ಹಾಗೂ ಅತ್ಯಾಧುನಿಕ ಕೃಷಿ ಯಂತ್ರೋಪಕರಣಗಳ ಪ್ರದರ್ಶನವೂ ರೈತರ ಗಮನ ಸೆಳೆಯುತ್ತಿದೆ.
ಈ ಸಂದರ್ಭದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಅಧ್ಯಕ್ಷ ಬಸನಗೌಡ ದದ್ದಲ್, ರಾಯಚೂರು ನಗರ ಶಾಸಕ ಡಾ. ಶಿವರಾಜ ಪಾಟೀಲ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಪಾಮಯ್ಯ ಮುರಾರಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಜಿಲ್ಲಾಧಿಕಾರಿ ನಿತೀಶ್ ಕೆ., ಜಿ.ಪಂ. ಸಿಇಒ ಈಶ್ವರ ಕುಮಾರ್ ಕಾಂದು, ಎಸ್ಪಿ ಅರುಣಾಂಗ್ಷು ಗಿರಿ, ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ. ಹನುಮಂತಪ್ಪ, ಮಹಾನಗರಪಾಲಿಕೆ ಆಯುಕ್ತ ಜುಬಿನ್ ಮಹಾಪಾತ್ರ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಉಪಾಧ್ಯಕ್ಷ ಬಶೀರ್ ಅಹ್ಮದ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.






