ರಾಯಚೂರು: ಕಲ್ಯಾಣ ಕರ್ನಾಟಕ ಉತ್ಸವ; ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಜಯಸಿಂಗ್

ರಾಯಚೂರು: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಜಯಸಿಂಗ್ ಅವರು ಧ್ವಜಾರೋಹಣ ನೆರವೇರಿಸಿದರು.
ಬಳಿಕ ಪೊಲೀಸರು ಹಾಗೂ ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ನಂತರ ಮಾತನಾಡಿದ ಅವರು, ಹೈದರಾಬಾದ್ ಕರ್ನಾಟಕ ಸ್ವಾತಂತ್ರ್ಯಕ್ಕೆ ಹೋರಾಡಿದ ಮಹನಿಯರಿಗೆ ನಾವು ಸ್ಮರಿಸಬೇಕಿದೆ. 371 ಜೆ ಕಾಯ್ದೆ ಜಾರಿಯಾಗಲು ಈ ಭಾಗದ ನಾಯಕ ಮಲ್ಲಿಕಾರ್ಜುನ ಖರ್ಗೆ, ಧರಂ ಸಿಂಗ್ ಹಾಗೂ ಅನೇಕರು ಹೋರಾಡಿದ ಫಲವಾಗಿ ವಿಶೇಷ ಕಾನೂನು ರಚನೆ ಮಾಡಿ ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ(ಕೆಕೆಆರ್ ಡಿಬಿ) ಸ್ಥಾಪನೆ ಮಾಡಿ ವಾರ್ಷಿಕ ₹5000 ಕೋಟಿ ನೀಡಲಾಗುತ್ತಿದೆ. ರಾಯಚೂರು ಜಿಲ್ಲೆಗೆ 2025-26ನೇ ಸಾಲಿನಲ್ಲಿ ಒಟ್ಟು 622 ಕೋಟಿ ಅನುದಾನಕ್ಕೆ 890 ಕಾಮಗಾರಿಗಳಿಗೆ ಕ್ರಿಯಾ ಯೋಜನೆ ಮಂಜೂರು ಮಾಡಲಾಗಿದೆ ಇದರಲ್ಲಿ 61 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. 394 ಕಾಮಗಾರಿ ಪ್ರಗತಿಯಲ್ಲಿದೆ, 435 ಕಾಮಗಾರಿಗಳು ಪ್ರಾರಂಭಿಸಬೇಕಿದೆ. ಒಟ್ಟು 178 ಕೋಟಿ ವೆಚ್ಚ ಮಾಡಲಾಗಿದೆ ಎಂದರು.
ಪಿಪಿಟಿ ವಿಭಾಗದ ಪಾಲಿಸಿ: ರಾಯಚೂರು ಜಿಲ್ಲೆ ಸೇರಿ ಕಲ್ಯಾಣ ಕರ್ನಾಟಕದ ಶೈಕ್ಷಣಿಕ, ಆರ್ಥಿಕ ಸುಧಾರಣೆಗೆ ರಾಜ್ಯ ಸರ್ಕಾರ ಒತ್ತು ನೀಡಿದೆ. ಶಿಕ್ಷಣ ಸುಧಾರಣೆಗೆ ಶಿಕ್ಷಣ ತಜ್ಞರ ಸಮಿತಿ ರಚನೆ ಮಾಡಲಾಗಿದೆ. ನೀತಿ ಯೋಜನೆ ಮತ್ತು ದತ್ತಾಂಶ ವಿಶ್ಲೇಷಣೆ (ಪಿಪಿಟಿ) ಮಾಡಲಾಗುತ್ತಿದೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ದೃಡ ಸಂಕಲ್ಪ ಕಾರ್ಯಕ್ರಮ ಮಾಡುತ್ತಿದ್ದೇವೆ, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಗಾಗಿ ನಮ್ಮ ಸರ್ಕಾರ ಯಾವಾಗಲು ಬದ್ಧವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಎನ್ ಎಸ್ ಬೋಸರಾಜು, ವಿಧಾನ ಪರಿಷತ್ ಸದಸ್ಯ ಎ.ವಸಂತ ಕುಮಾರ, ಜಿಲ್ಲಾಧಿಕಾರಿ ಪೂವಿತಾ ಎಸ್, ಜಿ.ಪಂ ಸಿಇಒ ಈಶ್ವರ್ ಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶುಗಿರಿ, ಕಾಂಗ್ರೆಸ್ ಮುಖಂಡ ಮೊಹಮ್ಮದ್ ಶಾಲಂ ಮತ್ತಿತರರು ಉಪಸ್ಥಿತರಿದ್ದರು.






