Raichur | ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಅಭಿವೃದ್ಧಿ ಆಗಲಿ : ಪ್ರೊ.ಶಿವಾನಂದ ಕೆಳಗಿನಮನಿ

ರಾಯಚೂರು : ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಗುಣಮಟ್ಟವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಜೊತೆಗೆ, ಈ ಭಾಗದ ಸಾಮಾಜಿಕ ಸಮಸ್ಯೆಗಳಿಗೆ ಸಂಶೋಧನಾತ್ಮಕ ಪರಿಹಾರ ಕಂಡುಕೊಳ್ಳಲು ಆದಿಕವಿ ಮಹರ್ಷಿ ಶ್ರೀ ವಾಲ್ಮೀಕಿ ವಿಶ್ವವಿದ್ಯಾಲಯ ನಿರಂತರವಾಗಿ ಕಾರ್ಯನಿರ್ವಹಿಸಲಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ ಹೇಳಿದರು.
ನಗರದ ರಂಗಮಂದಿರದಲ್ಲಿ ಕಲಾ ಸಂಕುಲ ಸಂಸ್ಥೆ ಹಾಗೂ ಲೋಹಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ. ಈ ಭಾಗದ ಸಮಸ್ಯೆಗಳಿಗೆ ಸಂಶೋಧನೆಯ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳಲು ವಿಶ್ವವಿದ್ಯಾಲಯ ಬದ್ಧವಾಗಿದೆ ಎಂದು ತಿಳಿಸಿದರು.
ತಮ್ಮ ಒಂದು ವರ್ಷದ ಕಾರ್ಯವೈಖರಿಯನ್ನು ಗುರುತಿಸಿ ಅಭಿನಂದಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ವಿಶ್ವವಿದ್ಯಾಲಯವನ್ನು ರಾಜ್ಯದ ಮಾದರಿ ಶಿಕ್ಷಣ ಸಂಸ್ಥೆಯಾಗಿ ರೂಪಿಸಲು ಜನಪ್ರತಿನಿಧಿಗಳು, ಸಾಹಿತಿಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಹೇಳಿದರು.
ಕಾರ್ಯಕ್ರಮವನ್ನು ಡಾ. ಬಸುಪ್ರಭು ಪಾಟೀಲ್ ಬೆಟ್ಟದೂರು ಉದ್ಘಾಟಿಸಿದರು. ಸಾಹಿತಿ ವೀರಹನುಮಾನ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಲೋಹಿಯಾ ಪ್ರತಿಷ್ಠಾನದ ಜೆ.ಎಲ್. ಈರಣ್ಣ, ಭೀಮನಗೌಡ ಪಾಟೀಲ್ ಇಟಗಿ, ಕುಲಸಚಿವ ಜ್ಯೋತಿ ದಮ್ಮ ಪ್ರಕಾಶ್, ಮೌಲ್ಯಮಾಪನ ವಿಭಾಗದ ಉಪಕುಲಸಚಿವ ಪಲ್ಲವ ಕೆ. ವೆಂಕಟೇಶ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣ ಶಾವಂತಗೇರ, ಕಲಾ ಸಂಕುಲ ಸಂಸ್ಥೆಯ ಅಧ್ಯಕ್ಷೆ ರೇಖಾ ಬಡಿಗೇರ್ ಹಾಗೂ ಸಮಾಜಸೇವಕ ಡಿ. ಶ್ರೀನಿವಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕನಕಶ್ರೀ ಪ್ರಶಸ್ತಿಯನ್ನು ಬಿ. ಜಗದೀಶ್ ಅವರಿಗೆ, ಮಾಧ್ಯಮ ರತ್ನ ಪ್ರಶಸ್ತಿಯನ್ನು ಸಯ್ಯದ್ ಅಬ್ದುಲ್ ಗಯಾಸ್ (ಮಾನ್ವಿ) ಅವರಿಗೆ ಹಾಗೂ ವಾಲ್ಮೀಕಿ ಶ್ರೀ ಪ್ರಶಸ್ತಿಯನ್ನು ರಾಮುಲು ನಾಯಕ ಅವರಿಗೆ ಪ್ರದಾನ ಮಾಡಲಾಯಿತು.
ಬೆಂಗಳೂರಿನ ಜೀ ಕನ್ನಡದ ಸರಿಗಮಪ ಕಲಾವಿದರು ಕನ್ನಡದ ಹಳೆಯ ಗೀತೆಗಳನ್ನು ಗಾಯನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು. ಕಾರ್ಯಕ್ರಮವನ್ನು ಡಾ. ಶಿವಲೀಲಾ ಬಸವರಾಜ್ ನಿರೂಪಿಸಿದರು. ಪತ್ರಕರ್ತ ಮಾರುತಿ ಬಡಿಗೇರ್ ಸ್ವಾಗತಿಸಿದರು.






