Raichur | ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಹೆಸರಿನಲ್ಲಿ ಸರ್ಕಾರಿ ಶಾಲೆಗಳ ವಿಲೀನಕ್ಕೆ ವಿರೋಧ

ರಾಯಚೂರು : ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಹೆಸರಿನಲ್ಲಿ ರಾಯಚೂರು ನಗರ ಹಾಗೂ ಗ್ರಾಮೀಣ ಭಾಗದ ಹಲವು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಪ್ರಕ್ರಿಯೆಯನ್ನು ಖಂಡಿಸಿ ಎಐಡಿಎಸ್ಒ ಹಾಗೂ ಸಾರ್ವಜನಿಕ ಶಾಲೆ ಉಳಿಸಿ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ಅನುಷ್ಠಾನದಿಂದ ಸರ್ಕಾರಿ ಶಾಲೆಗಳ ಅಸ್ತಿತ್ವಕ್ಕೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಆರೋಪಿಸಿದರು. ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಹೆಸರಿನಲ್ಲಿ ಶಾಲೆಗಳನ್ನು ವಿಲೀನಗೊಳಿಸುವುದು ಅಥವಾ ಮುಚ್ಚುವುದು ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಶಿಕ್ಷಣ ಹಕ್ಕಿಗೆ ಹೊಡೆತ ನೀಡಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಅಂದ್ರೂನ್ ಖಿಲ್ಲಾ, ಕೋಟೆಯ ಬಾಲಕಿಯರ ಉರ್ದು ಪ್ರೌಢಶಾಲೆ, ಅಸ್ಕಿಹಾಳ, ಆಶ್ರಯ ಕಾಲೋನಿ, ಶ್ರೀರಾಮನಗರ ಕ್ಯಾಂಪ್, ವಿಜಯನಗರ ಕ್ಯಾಂಪ್, ಗೋಲ್ ಮಾರ್ಕೆಟ್, ದೇವರ ಕಾಲೋನಿ, ಕುಲಸುಂಬಿ ಕಾಲೋನಿ ಹಾಗೂ ಮಲಿಯಾಬಾದ್ ಕ್ಯಾಂಪ್ ಸೇರಿದಂತೆ ವಿವಿಧ ಸರ್ಕಾರಿ ಶಾಲೆಗಳ ವಿಲೀನ ಪ್ರಸ್ತಾವನೆಗಳನ್ನು ತಕ್ಷಣ ಕೈಬಿಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಅಸ್ಕಿಹಾಳ ಸರ್ಕಾರಿ ಪ್ರಾಥಮಿಕ ಶಾಲೆಯ ಹೊಸ ಕಟ್ಟಡ ಕಾಮಗಾರಿ ಹಲವು ವರ್ಷಗಳಿಂದ ಬಾಕಿ ಉಳಿದಿದ್ದು, ಕೂಡಲೇ ಕಾಮಗಾರಿ ಆರಂಭಿಸಬೇಕು. ಅಲ್ಲಿಯವರೆಗೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯಾಗದಂತೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ವಿಜಯನಗರ ಕ್ಯಾಂಪ್ ಸರ್ಕಾರಿ ಶಾಲೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ವಿದ್ಯಾರ್ಥಿಗಳ ಸುರಕ್ಷತೆಗೆ ಅಪಾಯ ಎದುರಾಗಿದೆ. ಹಳೆಯ ಕಟ್ಟಡ ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಿಸಬೇಕು. ಹೊಸ ಕಟ್ಟಡ ನಿರ್ಮಾಣವಾಗುವವರೆಗೆ ಸುರಕ್ಷಿತ ಸ್ಥಳದಲ್ಲಿ ತರಗತಿಗಳನ್ನು ನಡೆಸಲು ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಖಾಲಿ ಇರುವ 5,624 ಶಿಕ್ಷಕರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಏಕೋಪಾಧ್ಯಾಯ ಶಾಲೆಗಳಿಗೆ ಹೆಚ್ಚುವರಿ ಶಿಕ್ಷಕರನ್ನು ನಿಯೋಜಿಸಿ ಶಿಕ್ಷಣದ ಗುಣಮಟ್ಟ ಕಾಪಾಡಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು.
ಶಾಲೆಗಳಲ್ಲಿನ ಮೂಲಸೌಕರ್ಯ ಕೊರತೆಯನ್ನೂ ಪ್ರಸ್ತಾಪಿಸಿದ ಪ್ರತಿಭಟನಾಕಾರರು, ದುಸ್ಥಿತಿಯಲ್ಲಿರುವ 874 ಶಾಲಾ ಶೌಚಾಲಯಗಳನ್ನು ತುರ್ತಾಗಿ ದುರಸ್ತಿಗೊಳಿಸಬೇಕು ಹಾಗೂ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಚನ್ನಬಸವ ಜಾನಕಲ್, ಮಹೇಶ್, ಸೂರ್ಯನಾರಾಯಣ, ಶಿವಪ್ಪ, ರವಿಕುಮಾರ್, ಬಸವರಾಜ್ ಸೇರಿದಂತೆ ವಿವಿಧ ಗ್ರಾಮಗಳ ಪೋಷಕರು, ಗ್ರಾಮಸ್ಥರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.






