ರಾಯಚೂರು | ಜುಲೈ 28ರಂದು ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ

ರಾಯಚೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಸಂಯುಕ್ತ ಆಶ್ರಯದಲ್ಲಿ ಜುಲೈ 28ರಂದು ಬೆಳಿಗ್ಗೆ 10.30ಕ್ಕೆ ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್. ಗುರುನಾಥ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವೈದ್ಯಕೀಯ ಹಾಗೂ ಉನ್ನತ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆಶಯ ನುಡಿ ನೀಡಲಿದ್ದು, ಜಿಲ್ಲೆಯ ಶಾಸಕರು, ಸಂಸದರು, ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ
ಈ ಸಂದರ್ಭದಲ್ಲಿ ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಆಯುಕ್ತ ಬಿ. ವೆಂಕಟಸಿಂಗ್ ಅವರಿಗೆ ವಿಶೇಷ ಸನ್ಮಾನ ನೆರವೇರಲಿದ್ದು, ಹಿರಿಯ ಪತ್ರಕರ್ತರಾದ ರಂಗನಾಥ ಚಕ್ರವರ್ತಿ, ಶಿವಮೂರ್ತಿ ಹಿರೇಮಠ ಹಾಗೂ ವೀರೇಶ್ ಸೌದ್ರಿ ಅವರಿಗೆ ಜೀವಮಾನ ಸಾಧನೆ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ವಾರ್ಷಿಕ ಪ್ರಶಸ್ತಿಗೆ ರಾಮಕೃಷ್ಣ ದಾಸರಿ, ಚಂದಪ್ಪ ದೋರನಹಳ್ಳಿ, ಸುರೇಶಗೌಡ, ಹನುಮಂತ ಕನ್ನಾಳ, ರಾಜಶೇಖರ, ಆದೇಶ ನಗನೂರು, ಈಶಪ್ಪ ಬೈಲ್ ಮರ್ಚೆಡ್, ಬದ್ರಿನಾಥ, ಬೀರಪ್ಪ, ಶಿವಕುಮಾರ ಹಾಗೂ ಮಂಜುನಾಥ ಎತ್ತಿನಮಾಳಗಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.
ಅದೇ ದಿನ ಸಂಜೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ಸಮ್ಮೇಳನದ ಪೂರ್ವಭಾವಿ ಸಭೆಯೂ ನಡೆಯಲಿದೆ ಎಂದು ಹೇಳಿದರು.
ಬಳಿಕ ಮಾತನಾಡಿದ ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಅಧ್ಯಕ್ಷ ವಿಜಯಕುಮಾರ ಜಾಗಟಗಲ್, ಗಿಲ್ಡ್ನ ವಾರ್ಷಿಕ ಪ್ರಶಸ್ತಿಗೆ ಮಂಜುನಾಥ ಸಾಲಿ, ವಾಗೀಶ್ ಪಂಡಿತರಾಧ್ಯ ವಿ.ಪಾಟೀಲ, ಗೌಡಪ್ಪ ಗೌಡ, ಶಶಿಧರ ಅಂಗಡಿ, ಖಾಜಾ ಹುಸೇನ್, ದುರುಗೇಶ ಹಾಗೂ ವಾಸುದೇವ ಎಸ್.ಆಯ್ಕೆಯಾಗಿದ್ದು, ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯ ಸಮಿತಿ ಸದಸ್ಯ ಬಸವರಾಜ್ ನಾಗಡದಿನ್ನಿ, ಪ್ರಧಾನ ಕಾರ್ಯದರ್ಶಿ ಸಿದ್ದಯ್ಯ ಸ್ವಾಮಿ, ಉಪಾಧ್ಯಕ್ಷ ಮಹಾನಂದ, ಖಜಾಂಚಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಹೂಗಾರ್ ಉಪಸ್ಥಿತರಿದ್ದರು.






