ರಾಯಚೂರು | ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016ರ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ
ಅಂಗವಿಕಲ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳಿಗೆ ನೇರ ಪ್ರವೇಶ : ಆಯುಕ್ತ ಸೂರ್ಯವಂಶಿ

ರಾಯಚೂರು | ಮುಂದಿನ ದಿನಗಳಲ್ಲಿ ಅಂಗವಿಕಲ ವಿದ್ಯಾರ್ಥಿಗಳಿಗೆ ರಾಜ್ಯದ ಎಲ್ಲಾ ವಸತಿ ಶಾಲೆಗಳಲ್ಲಿ ಪ್ರವೇಶ ಪರೀಕ್ಷೆಗಳಿಲ್ಲದೇ ನೇರವಾಗಿ ಪ್ರವೇಶ ಕಲ್ಪಿಸಿ, ಉಚಿತ ಶಿಕ್ಷಣದ ಅವಕಾಶವನ್ನು ನೀಡಲಾಗುವುದೆಂದು ಅಂಗವಿಕಲರ ಅಧಿನಿಯಮ ಅನುಷ್ಠಾನ ರಾಜ್ಯ ಆಯುಕ್ತರಾದ ಶ್ರೀ ದಾಸ್ ಸೂರ್ಯವಂಶಿ ಅವರು ಹೇಳಿದರು.
ಫೆ.14ರ ಶುಕ್ರವಾರದಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಏರ್ಪಡಿಸಿದ್ದ ʼಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016ರ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆʼಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ರಾಜ್ಯ ಸರ್ಕಾರ ಅಧೀನದಲ್ಲಿರುವ ಸುಮಾರು 900 ವಸತಿ ಶಾಲೆಗಳಲ್ಲಿ ಶೇ.25 ಪ್ರತಿಶತ ಅಂಗವಿಕಲತೆ ಹೊಂದಿದ ಮಕ್ಕಳಿಗೆ ಯಾವುದೇ ಪ್ರವೇಶಾತಿ ಪರೀಕ್ಷೆಗಳಿಲ್ಲದೇ 12ನೇ ತರಗತಿವರೆಗೆ ಉಚಿತ ಶಿಕ್ಷಣ ನೀಡಲು ಅವಕಾಶವಿದೆ. ಶಾಲಾ ಶಿಕ್ಷಣ ಇಲಾಖೆ ಅಂಧ ಮತ್ತು ಕಿವುಡ ಮಕ್ಕಳಿಗೆ ಶಿಕ್ಷಣದಿಂದ ವಂಚಿತರಾಗದಿರಲು ಹಾಗೂ ಬ್ರೈಲ್ ಲಿಪಿ ಅಳವಡಿಸಿ ಶಿಕ್ಷಣ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕಿದೆ. ಬ್ರೈಲ್ ಲಿಪಿ ಕಲಿತ ಅಂಧರು ಸುಮಾರು 12 ಜನ ಐಎಎಸ್ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಅಂಗವಿಕಲರಿಗಾಗಿಯೇ ಇರುವ ಶೇ.4 ರಿಂದ 5ರಷ್ಟು ಮೀಸಲಾತಿ ಇದ್ದು, ಅದರ ಪರಿಶೀಲನೆಗಾಗಿ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016 ಅನುಷ್ಠಾನಗೊಳಿಸುವಲ್ಲಿ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಸೇವೆ ನೀಡಬೇಕಿದೆ ಎಂದರು.
ವಿಕಲಚೇತನರ ಸ್ನೇಹಿ ವಾತಾವಾರಣ ಸೃಷ್ಟಿಸಿ :
ವಿಕಲಚೇತನರಿಗೆ ಯಾವುದೇ ಅಭಿವೃದ್ಧಿ ಯೋಜನೆಗಳಲ್ಲಿ ವಂಚಿತರಾಗದಂತೆ ಕಡ್ಡಾಯವಾಗಿ ಶೇ.5ರಷ್ಟು ಮೀಸಲು ನಿಗದಿಪಡಿಸಿ ಫಲಾನುಭವಿಗಳನ್ನಾಗಿಸಬೇಕು. ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಿಕಲಚೇತನರ ಸ್ನೇಹಿ ವಾತಾವಾರಣ ಸೃಷ್ಟಿಸಬೇಕಿದೆ. ಆಯಾ ಸ್ಥಳಗಳಲ್ಲಿ ಅಂಗವಿಕಲರ ಓಡಾಟಕ್ಕೆ ಸುಲಭ ದಾರಿ, ವ್ಹೀಲ್ಚೇರ್ ವ್ಯವಸ್ಥೆ, ಶೌಚಾಲಯ ಸೇರಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದರು.
ಆರೈಕೆದಾರರರಿಗೆ ಮಾಸಾಶನ :
ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ವಿಶೇಷ ಚೇತನರ ಆರೈಕೆದಾರರರಿಗೆ ಮಾಸಾಶನ ನೀಡಲು ಕ್ರಮ ವಹಿಸಲಾಗಿದ್ದು, ಮುಂದಿನ ದಿನಗಳಲ್ಲಿ ಆರಂಭಿಸಲು ಚಿಂತನೆ ನಡೆಸಲಾಗಿದೆ. ಇದರಿಂದ ಅಂಗವಿಕಲರ ಆರೈಕೆ ಮಾಡುವ ಪಾಲಕರಿಗೆ ಪ್ರೋತ್ಸಾಹ ನೀಡಿದಂತಾಗಲಿದೆ. ವಿವಿಧ ಯೋಜನೆಗಳ ಫಲಾನುಭವಿಗಳ ಆಯ್ಕೆಗೆ ನಿಗದಿತ ಯ್ಯಾಪ್ಗಳನ್ನು ರಚಿಸಲಾಗಿದ್ದು, ಯ್ಯಾಪ್ ಮೂಲಕ ಸಮಗ್ರ ಮಾಹಿತಿಯನ್ನು ಪಡೆಯಬಹುದಾಗಿದೆ.
ರಾಜ್ಯಕ್ಕೆ ರಾಯಚೂರು ಜಿಲ್ಲೆ ಮಾದರಿ :
ರಾಯಚೂರು ಜಿಲ್ಲೆಯಲ್ಲಿ ಅಂಗವಿಕಲರಿಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಿರುವ ಹಿನ್ನಲೆಯಲ್ಲಿ ಇಡೀ ರಾಜ್ಯಕ್ಕೆ ರಾಯಚೂರು ಜಿಲ್ಲೆ ಮಾದರಿಯಾಗಿದೆ. ರಾಜ್ಯದಲ್ಲಿ 7 ಸಾವಿರ ಅಂಗವಿಕಲರು ರಾಜ್ಯ ಸರ್ಕಾರದ ಸ್ಥಳೀಯ ಸಂಸ್ಥೆಗಳಲ್ಲಿ ಯುಆರ್ಡಬ್ಲೂ, ಎಆರ್ಡಬ್ಲೂ, ಎಂಆರ್ಡಬ್ಲೂಗಳಾಗಿ ನೇಮಕ ಮಾಡಿ ಸರ್ಕಾರಿ ಸೇವೆಗಳನ್ನು ಪಡೆಯಲು ಅನುಕೂಲ ಕಲ್ಪಿಸಲಾಗಿದೆ.
50 ಲಕ್ಷ ರೂ. ವರೆಗೆ ಸಾಲ ಸೌಲಭ್ಯ :
ದೇಶದಲ್ಲೇ ಕರ್ನಾಟಕ ರಾಜ್ಯ ಅಂಗವಿಕಲರಿಗೆ ಪುನರ್ವಸತಿ ಕಲ್ಪಿಸುವಲ್ಲಿ ಮಾದರಿಯಾಗಿದೆ. ರಾಷ್ಟ್ರೀಯ ಅಂಗವಿಕಲರ ಅಭಿವೃದ್ಧಿ ಹಣಕಾಸು ಸಂಸ್ಥೆಯ ಮೂಲಕ ಪ್ರತಿ ವರ್ಷ ರಾಜ್ಯಕ್ಕೆ 100 ಕೋಟಿ ರೂ. ಅನುದಾನ ತರಬಹುದಾಗಿದ್ದು, ಅಂಗವಿಕಲರಿಗೆ 50 ಲಕ್ಷ ರೂ.ವರೆಗೆ ಸಾಲಸೌಲಭ್ಯ ಹಾಗೂ ಇತರೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಹುದಾಗಿದೆ. ವಿಕಲಚೇತನ ವ್ಯಕ್ತಿಗಳಿಗೆ ಅಗತ್ಯವಿರುವ ಆರೋಗ್ಯ, ಶೈಕ್ಷಣಿಕ, ಉದ್ಯೋಗ ಮತ್ತು ತರಬೇತಿ ಹಾಗೂ ಸಾಮಾಜಿಕ ಭದ್ರತೆಗಳಂತಹ ಪುನರ್ವಸತಿ ಸೇವೆಗಳನ್ನು ಕಲ್ಪಿಸುವುದರ ಮೂಲಕ ಅವರಿಗೆ ಸಮಾನ ಅವಕಾಶ ಕಲ್ಪಿಸಿ ಅವರನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಕೇಂದ್ರ ಸರ್ಕಾರವು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016ನ್ನು ಜಾರಿಗೆ ತಂದಿದ್ದು, ಈ ಅಧಿನಿಯಮವನ್ನು ಕರ್ನಾಟಕ ರಾಜ್ಯದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಅಂಗವಿಕಲ ವ್ಯಕ್ತಿಗಳ ನಿಯಮಗಳು-2019ನ್ನು ರೂಪಿಸಿದೆ.
ವಿಕಲಚೇತನ ವ್ಯಕ್ತಿಗಳನ್ನು ಸಬಲೀಕರಣಗೊಳಿಸುವುದರ ಮೂಲಕ ಅವರ ಹಕ್ಕುಗಳನ್ನು ಸಂರಕ್ಷಿಸಲು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016 ರಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನವೀನ್ ಕುಮಾರ್, ಜಿಲ್ಲಾ ಅಂಗವಿಲಕರ ಕಲ್ಯಾಣಾಧಿಕಾರಿ ಶ್ರೀದೇವಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಇದ್ದರು.







