ರಾಯಚೂರು | ಬೀದಿಬದಿಯ ವ್ಯಾಪಾರಿಗಳ ಅಂಗಡಿ ತೆರವು ಖಂಡಿಸಿ ಪ್ರತಿಭಟನೆ

ರಾಯಚೂರು : ಮಹಾನಗರ ಪಾಲಿಕೆ ರಸ್ತೆ ಬದಿಯ ಡಬ್ಬಾ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ಖಂಡಿಸಿ ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಸಂಘದ ನೇತೃತ್ವದಲ್ಲಿ ವ್ಯಾಪಾರಿಗಳು ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಧರಣಿ ನಡೆಸಿದರು.
ರಾಜ್ಯ ಹಾಗೂ ಹೆದ್ದಾರಿ ವಿಸ್ತರಣೆ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಬೀದಿ ವ್ಯಾಪಾರಿಗಳನ್ನು ಬೀದಿ ಪಾಲು ಮಾಡಿರುವುದಕ್ಕೆ ನಮ್ಮ ವಿರೋಧವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂವಿಧಾನದ ಅನುಚ್ಚೇದ 19(1)ಜೆ ಪ್ರಕಾರ ದೇಶದ ಪ್ರತಿಯೊಬ್ಬ ನಾಗರಿಕರಿಗೂ ವ್ಯಾಪಾರ ನಡೆಸುವ ಹಕ್ಕಿದೆ. ಆತ್ಮನಿರ್ಭರ ಯೋಜನೆ, ಕೌಶಲ್ಯ ಅಭಿವೃದ್ಧಿ ಯೋಜನೆ ನಮ್ಮ ಬದುಕನ್ನು ಹಸನು ಮಾಡುವ ಬದಲು ನಮ್ಮ ನಾಶಕ್ಕೆ ಬಳಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಮಹಾನಗರ ಪಾಲಿಕೆ ಅಧಿಕಾರಿಗಳು ವ್ಯಾಪಾರಿಗಳ ಶೆಡ್ಗಳನ್ನು ಜೆಸಿಬಿಯಿಂದ ಧ್ವಂಸ ಮಾಡಿ ನಮಗೆ ನಷ್ಟ ಉಂಟು ಮಾಡಿದ್ದಾರೆ. ವ್ಯಾಪಾರ ನಡೆಸಲು ಯಾವುದೇ ರೀತಿಯ ಅನುಕೂಲವಾಗದಂತೆ ಮಾಡಿದ್ದಾರೆ. ಜಿಲ್ಲಾಡಳಿತ ತಕ್ಷಣ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು.
ಬೀದಿ ಬದಿಗೆ ವ್ಯಾಪಾರ ಮಾಡಲು ಅವಕಾಶ ಕೊಡಬೇಕು ಎಂದು ಮನವಿ ಮಾಡಿದರು. ಧರಣಿಯಲ್ಲಿ ಗಂಗಾಧರ, ಜಿ.ಅಮರೇಶ, ಪಾಷಾ ಮತ್ತಿತರರು ಇದ್ದರು.







