Raichur | ಆಶಾ ಕಾರ್ಯಕರ್ತೆಯರ ಗೌರವಧನ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

ರಾಯಚೂರು: ಆಶಾ ಕಾರ್ಯಕರ್ತೆಯರ ಬಾಕಿ ಇರುವ ಕೇಂದ್ರದ ಪ್ರೋತ್ಸಾಹಧನ ಹಾಗೂ ಗೌರವಧನವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳು ಸೋಮವಾರ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಮಾತನಾಡಿ, ಆಶಾ ನಿಧಿ ತಂತ್ರಾಂಶದಲ್ಲಿ ನಿಷ್ಕ್ರಿಯಗೊಳಿಸಿರುವ 9 ಸೇವೆಗಳನ್ನು ಪುನಃ ಆರಂಭಿಸಬೇಕು ಎಂದು ಆಗ್ರಹಿಸಿದರು. ಟಿಬಿ, ಟಿಬಿಐ, ಎನ್ಸಿಡಿ ಸೇರಿದಂತೆ ವಿವಿಧ ಯೋಜನೆಗಳ ಬಾಕಿ ಹಣವನ್ನು ಬಿಡುಗಡೆ ಮಾಡಬೇಕು ಹಾಗೂ ಕಡಿತಗೊಂಡ ಗೌರವಧನ ಮತ್ತು ಪ್ರೋತ್ಸಾಹಧನವನ್ನು ಆಶಾ ಕಾರ್ಯಕರ್ತೆಯರಿಗೆ ನೀಡಬೇಕು ಎಂದು ಒತ್ತಾಯಿಸಿದರು.
‘ಸಮಸ್ತ’ ಆ್ಯಪ್ ಮೂಲಕ ದಾಖಲೆ ನಿರ್ವಹಿಸುವ ವ್ಯವಸ್ಥೆಯನ್ನು ಕೈಬಿಡಬೇಕು. ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಇಡಿಗಂಟು ಸೌಲಭ್ಯ ಕಲ್ಪಿಸಬೇಕು. ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರಿಸಬೇಕು ಎಂದು ಅವರು ಆಗ್ರಹಿಸಿದರು.
ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ 10 ಸಾವಿರ ರೂ. ಮಾಸಿಕ ಗೌರವಧನ ನಿಗದಿಪಡಿಸಬೇಕು. ಜೊತೆಗೆ ಪ್ರಸ್ತುತ ಗೌರವಧನದಲ್ಲಿ 1,000 ರೂ. ಹೆಚ್ಚಳ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಗೌರಮ್ಮ ಹೊಸಮನಿ, ಕಾರ್ಯದರ್ಶಿ ಶೋಭಾ, ಈರಮ್ಮ ದೇವದುರ್ಗ, ಪ್ರಭಾವತಿ, ಮಲ್ಲಮ್ಮ, ಲವೀನಾ, ದೇವಮ್ಮ, ಸುಜಾತಾ, ಭೀಮಮ್ಮ, ಲಕ್ಷ್ಮೀ ರಾಗಿಮಾನಗಡ್ಡ, ಚೈತ್ರಾ ಹಾಗೂ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.






