ರಾಯಚೂರು | ಸಕಾಲದಲ್ಲಿ ಮಾಹಿತಿ ನೀಡಿ, ದಂಡದಿಂದ ಮುಕ್ತರಾಗಿ : ಆಯುಕ್ತ ಬಿ.ವೆಂಕಟ್ ಸಿಂಗ್ ಸಲಹೆ

ರಾಯಚೂರು : ವೈಯಕ್ತಿಕ ಮಾಹಿತಿಯನ್ನು ಹೊರತುಪಡಿಸಿ ಸರ್ಕಾರದ ಯೋಜನೆಗಳು, ಸೌಲಭ್ಯಗಳು ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯುವುದು ಸಾರ್ವಜನಿಕರ ಮೂಲಭೂತ ಹಕ್ಕು ಆಗಿದ್ದು, ಅರ್ಜಿ ಸಲ್ಲಿಸಿದ ನಾಗರಿಕರಿಗೆ ನಿಗದಿತ ಕಾಲಮಿತಿಯೊಳಗೆ ಮಾಹಿತಿ ಒದಗಿಸುವ ಮೂಲಕ ಅಧಿಕಾರಿಗಳು ದಂಡದಿಂದ ತಪ್ಪಿಸಿಕೊಳ್ಳಬೇಕು ಎಂದು ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಬಿ. ವೆಂಕಟ್ ಸಿಂಗ್, ರುದ್ರಣ್ಣ ಹರತಿ ಕೋಟಿ ಹಾಗೂ ಎಸ್. ರಾಜಶೇಖರ್ ಅವರು ತಿಳಿಸಿದರು.
ಬಳ್ಳಾರಿ ಜಿಲ್ಲಾಡಳಿತದ ವತಿಯಿಂದ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಾಗಿ ಆಯೋಜಿಸಲಾಗಿದ್ದ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
2005ರಲ್ಲಿ ದೇಶದಲ್ಲೇ ಮೊಟ್ಟಮೊದಲಾಗಿ ಕರ್ನಾಟಕ ರಾಜ್ಯದಲ್ಲಿ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಿ, ಕರ್ನಾಟಕ ಮಾಹಿತಿ ಆಯೋಗವನ್ನು ರಚಿಸಲಾಯಿತು ಎಂದು ಅವರು ತಿಳಿಸಿದರು.
ಕಳೆದ ವರ್ಷ ಫೆಬ್ರವರಿಯಲ್ಲಿ ರಾಜ್ಯದ ವಿವಿಧ ಪೀಠಗಳಿಗೆ 6 ಮಾಹಿತಿ ಆಯುಕ್ತರನ್ನು ನೇಮಕ ಮಾಡಲಾಗಿದ್ದು, ಈವರೆಗೆ ಬಾಕಿ ಇದ್ದ 55 ಸಾವಿರ ಪ್ರಕರಣಗಳಲ್ಲಿ 20 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ 35 ಸಾವಿರ ಪ್ರಕರಣಗಳು ಬಾಕಿ ಇವೆ ಎಂದು ಆಯುಕ್ತ ಬಿ. ವೆಂಕಟ್ ಸಿಂಗ್ ವಿವರಿಸಿದರು.
ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ವ್ಯಾಪ್ತಿಗೆ ಕಲಬುರಗಿ ಪೀಠ ಕಾರ್ಯನಿರ್ವಹಿಸುತ್ತಿದ್ದು, 2010ರಿಂದ 2022ರವರೆಗೆ ಬಾಕಿ ಇದ್ದ 6,600 ಪ್ರಕರಣಗಳನ್ನು 2025ರ ಡಿ.31ರೊಳಗೆ ಇತ್ಯರ್ಥಪಡಿಸಲಾಗಿದೆ. 2023ರಿಂದ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಶೀಘ್ರ ಅಂತ್ಯಗೊಳಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಮಾಹಿತಿ ನೀಡಲು ನಿರ್ಲಕ್ಷ್ಯ ತೋರಿದರೆ ದಂಡ ಹಾಗೂ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಆಯೋಗಕ್ಕಿದ್ದು, ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಕಾಲಮಿತಿಯೊಳಗೆ ಮಾಹಿತಿ ನೀಡಬೇಕು ಎಂದು ಅವರು ಎಚ್ಚರಿಸಿದರು.
ರಾಜ್ಯ ಮಾಹಿತಿ ಆಯೋಗದ ಬೆಂಗಳೂರು ಪೀಠದ ಆಯುಕ್ತ ರುದ್ರಣ್ಣ ಹರತಿಕೋಟೆ ಮಾತನಾಡಿ, ಮಾಹಿತಿ ಹಕ್ಕು ಕಾಯ್ದೆಯು ಸಂವಿಧಾನದ 19(1)(ಎ) ಅಡಿಯಲ್ಲಿ ನಾಗರಿಕರ ಮೂಲಭೂತ ಹಕ್ಕು ಎಂದು ತಿಳಿಸಿದರು.
ರಾಜ್ಯದಲ್ಲಿ ಸುಮಾರು 80 ಸಾವಿರಕ್ಕೂ ಹೆಚ್ಚು ಸಾರ್ವಜನಿಕ ಮಾಹಿತಿ ಪ್ರಾಧಿಕಾರಗಳಿವೆ. ರಾಜ್ಯದಲ್ಲಿ ಈವರೆಗೆ 10,757 ಅಧಿಕಾರಿಗಳಿಗೆ 10.20 ಕೋಟಿ ರೂ. ದಂಡ ವಿಧಿಸಲಾಗಿದ್ದು, ಅದರಲ್ಲೂ 3,084 ಅಧಿಕಾರಿಗಳು 2.70 ಕೋಟಿ ರೂ. ದಂಡ ಪಾವತಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 769 ಪ್ರಕರಣಗಳು ಬಾಕಿ ಇದ್ದು, 163 ಅಧಿಕಾರಿಗಳಿಗೆ 15.45 ಲಕ್ಷ ರೂ. ದಂಡ ವಿಧಿಸಲಾಗಿದೆ. ಇದರಲ್ಲೂ 28 ಅಧಿಕಾರಿಗಳು 3.58 ಲಕ್ಷ ರೂ. ಪಾವತಿಸಿದ್ದಾರೆ. ಉಳಿದ ಮೊತ್ತ ವಸೂಲಿಗೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ ಎಂದರು.
ಎಸ್. ರಾಜಶೇಖರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್. ಝುಬೇರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.







