Raichur | ಸರ್ಕಾರಿ ಬಾಲಕರ ಪಿಯು ಕಾಲೇಜಿನಲ್ಲಿ ಮೇಲ್ಚಾವಣಿ ಕುಸಿತ; ತಪ್ಪಿದ ಅನಾಹುತ

ರಾಯಚೂರು: ನಗರದ ಸರ್ಕಾರಿ ಬಾಲಕರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ತರಗತಿ ನಡೆಯುತ್ತಿದ್ದ ವೇಳೆ ಬೆಳಿಗ್ಗೆ ಸುಮಾರು 10 ಗಂಟೆಗೆ ಮೇಲ್ಚಾವಣಿಯ ಪದರ ಉದುರಿ ಬಿದ್ದ ಪರಿಣಾಮ ವಿದ್ಯಾರ್ಥಿಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಗರದ ಹಳೆಯ ಡಿಡಿಪಿಐ ಕಚೇರಿ ಹಿಂಭಾಗದಲ್ಲಿರುವ ಕಾಲೇಜಿನ ವಾಣಿಜ್ಯ ವಿಭಾಗದ ತರಗತಿಯಲ್ಲಿ ಈ ಘಟನೆ ನಡೆದಿದೆ. ಪಾಠ ಕೇಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಮೇಲ್ಚಾವಣಿಯ ಪದರ ಏಕಾಏಕಿ ಉದುರಿ ಬಿದ್ದಿದ್ದು, ವಿದ್ಯಾರ್ಥಿಗಳು ತಕ್ಷಣ ತರಗತಿಯಿಂದ ಹೊರಗೆ ಓಡಿ ಬಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಿದ್ದರೂ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಆತಂಕಕ್ಕೊಳಗಾಗಿದ್ದಾರೆ.
ಸುಮಾರು 30 ವರ್ಷಗಳ ಹಿಂದೆ ಹೈದರಾಬಾದ್–ಕರ್ನಾಟಕ ಅಭಿವೃದ್ಧಿ ಯೋಜನೆಯಡಿ ನಿರ್ಮಿಸಲಾದ ಕಾಲೇಜಿನ ಕಟ್ಟಡ ಹಲವು ವರ್ಷಗಳಿಂದ ಶಿಥಿಲಾವಸ್ಥೆಯಲ್ಲಿದೆ. ಹೊಸ ಕಟ್ಟಡ ನಿರ್ಮಾಣಕ್ಕೆ ಕಾಲೇಜು ಆಡಳಿತವು ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಇದುವರೆಗೆ ಅನುಮೋದನೆ ದೊರೆತಿಲ್ಲ ಎಂದು ಆರೋಪಿಸಲಾಗಿದೆ.
ಘಟನೆಯನ್ನು ಖಂಡಿಸಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ್ದು, ಎಐಡಿಎಸ್ಒ ಸಂಘಟನೆಯ ಮುಖಂಡರು ಬೆಂಬಲ ವ್ಯಕ್ತಪಡಿಸಿದರು. ಕಾಲೇಜಿನಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಧರಣಿ ನಡೆಸಿದ ವಿದ್ಯಾರ್ಥಿಗಳು, ಹೊಸ ಕಟ್ಟಡ ನಿರ್ಮಾಣ ಹಾಗೂ ಶಿಥಿಲಗೊಂಡಿರುವ ಕೊಠಡಿಗಳ ತುರ್ತು ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಎಐಡಿಎಸ್ಒ ಜಿಲ್ಲಾ ಘಟಕದ ಕಾರ್ಯದರ್ಶಿ ಬಸವರಾಜ್ ಮಾತನಾಡಿ, 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಈ ಕಾಲೇಜಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ಜೀವ ಅಪಾಯದಲ್ಲಿದೆ. ಕೂಡಲೇ ಹೊಸ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಘಟನೆಯ ಮಾಹಿತಿ ತಿಳಿದು ತಹಶೀಲ್ದಾರ್ ಸುರೇಶ ವರ್ಮಾ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿಥಿಲಗೊಂಡಿರುವ ಕಟ್ಟಡಗಳ ಕುರಿತು ವರದಿ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ತಹಶೀಲ್ದಾರ್ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ವಿದ್ಯಾರ್ಥಿಗಳ ಮನವಿ ಆಲಿಸಿ, ಶಿಥಿಲಗೊಂಡಿರುವ ಕೊಠಡಿಗಳ ತುರ್ತು ದುರಸ್ತಿ ಹಾಗೂ ಹೊಸ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಲಿಖಿತ ಭರವಸೆ ನೀಡಿದರು. ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಹಿಂಪಡೆದರು.
ಪ್ರತಿಭಟನೆಯಲ್ಲಿ ಎಐಡಿಎಸ್ಒ ಜಿಲ್ಲಾ ಘಟಕದ ಕಾರ್ಯದರ್ಶಿ ಬಸವರಾಜ್, ಎಐಡಿವೈಒ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವ, ಮಲ್ಲಣಗೌಡ, ವಿದ್ಯಾರ್ಥಿಗಳಾದ ಶ್ರೀಕಾಂತ, ರವಿ, ಮಲ್ಲಿಕಾರ್ಜುನ, ಮೊಹಮ್ಮದ್ ಅಖ್ತರ್, ಇಮ್ತಿಯಾಜ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.






