Raichur : ಜಾಲಹಳ್ಳಿಯಲ್ಲಿ ಸರಣಿ ರಸ್ತೆ ಅಪಘಾತ; ಇಬ್ಬರು ಮೃತ್ಯು

ರಾಯಚೂರು: ಬಸ್, ಆಟೋರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿಯಲ್ಲಿ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ.
ಮೃತರನ್ನು ಜಾಲಹಳ್ಳಿ ಗ್ರಾಮದ ಉದಯ (20) ಹಾಗೂ ವಿಜಯ್ (17) ಎಂದು ಗುರುತಿಸಲಾಗಿದೆ. ಇಬ್ಬರು ಯುವಕರು ಬೈಕ್ನಲ್ಲಿ ಜಾಲಹಳ್ಳಿಯಿಂದ ತಿಂಥಣಿ ಬ್ರಿಜ್ ಕಡೆಗೆ ತೆರಳುತ್ತಿದ್ದರು. ಇದೇ ವೇಳೆ ಅದೇ ಮಾರ್ಗದಲ್ಲಿ ಸಾರಿಗೆ ಬಸ್ ಸಂಚರಿಸುತ್ತಿದ್ದು, ಎದುರಿನಿಂದ ಆಟೋರಿಕ್ಷಾವೊಂದು ಜಾಲಹಳ್ಳಿ ಕಡೆಗೆ ಬರುತ್ತಿತ್ತು. ಈ ಸಂದರ್ಭದಲ್ಲಿ ಬಸ್, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.
ಅಪಘಾತದ ರಭಸಕ್ಕೆ ಬೈಕ್ ಸವಾರರಾದ ಉದಯ ಹಾಗೂ ವಿಜಯ್ ಸಾರಿಗೆ ಬಸ್ನ ಚಕ್ರದಡಿ ಸಿಲುಕಿದ್ದಾರೆ. ಬಸ್ ಇಬ್ಬರ ಮೇಲೆಯೂ ಹರಿದ ಪರಿಣಾಮ ಉದಯ ಸ್ಥಳದಲ್ಲೇ ಮೃತಪಟ್ಟರೆ, ವಿಜಯ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸಂಚಾರ ಅಸ್ತವ್ಯಸ್ತಗೊಂಡು ಟ್ರಾಫಿಕ್ ಜಾಮ್ ಉಂಟಾಗಿತ್ತು.
ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.






