ರಾಯಚೂರು | ವಸತಿ ನಿಲಯಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಕ್ರಮವಹಿಸಿ : ರಿತೇಶ್ ಕುಮಾರ್ ಸಿಂಗ್

ರಾಯಚೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ನಂತರ ಹಾಗೂ ಪದವಿ ಪೂರ್ವ ಮತ್ತು ನಂತರದ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಕಲ್ಪಿಸಲು ಕೂಡಲೇ ಅಗತ್ಯ ಕ್ರಮ ವಹಿಸಬೇಕು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಿತೇಶ್ ಕುಮಾರ್ ಸಿಂಗ್ ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ 2025-26ನೇ ಸಾಲಿನ ಜಿಲ್ಲಾ ಪಂಚಾಯತ್ ಜಿಲ್ಲಾ ವಲಯ ಕಾರ್ಯಕ್ರಮಗಳ ವಾರ್ಷಿಕ ಕ್ರಿಯಾ ಯೋಜನೆಗಳ ಪರಿಶೀಲನೆ ಮತ್ತು ಅನುಮೋದನೆ ನೀಡುವ ಕುರಿತು ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಮೇ 19ರಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವೃತ್ತಿಪರ ಕೋರ್ಸಗಳ ವಸತಿ ನಿಲಯಗಳು ಸೇರಿದಂತೆ ರಾಯಚೂರು ಜಿಲ್ಲೆಯಲ್ಲಿ ಇಲಾಖಾವಾರು ಇರುವ ವಸತಿ ನಿಲಯಗಳು, ಅಲ್ಲಿನ ವಿದ್ಯಾರ್ಥಿಗಳ ಸಂಖ್ಯೆ, ಮೂಲಭೂತ ಸೌಕರ್ಯದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಕಾರ್ಯದರ್ಶಿಗಳು, ಕ್ಷೇತ್ರ ಭೇಟಿ ವೇಳೆ ಬಿಸಿಎಂ ಇಲಾಖೆಯ ಅಧೀನದ ಕೆಲವು ವಸತಿ ನಿಲಯಗಳಲ್ಲಿ ಕಾಟ್ ಮತ್ತು ಬೆಡ್ ಇಲ್ಲದಿರುವುದರ ಬಗ್ಗೆ ಖುದ್ದು ವೀಕ್ಷಣೆ ಮಾಡಿ ಗಮನಿಸಿದ್ದೇನೆ. ಇದಕ್ಕಾಗಿ ಅನುದಾನ ಮೀಸಲಿರಿಸಿ ಟೆಂಡರ್ ಪ್ರಕ್ರಿಯೆ ನಡೆಸಿ ಕೂಡಲೇ ವ್ಯವಸ್ಥೆ ಮಾಡಬೇಕು. ಎಲ್ಲ ಮೂಲಸೌಕರ್ಯಗಳು ಲಭ್ಯವಾಗುವ ಹಾಗೆ ವಸತಿ ನಿಲಯಗಳ ಮೇಲೆ ಸೂಕ್ತ ಮೇಲ್ವಿಚಾರಣೆ ನಡೆಸಬೇಕು ಎಂದು ಬಿಸಿಎಂ, ಸಮಾಜ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಿಗೆ ಕಾರ್ಯದರ್ಶಿಗಳು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಮರಣ ಪ್ರಮಾಣ ಶೂನ್ಯಕ್ಕಿಳಿಯಲಿ :
ರಾಜ್ಯದ ಯಾವುದೇ ಕಡೆಗಳಲ್ಲಿ ಗರ್ಭಿಣಿಯರು ಮತ್ತು ಶಿಶುಗಳು ಮರಣ ಆಗದಂತೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂಬುದು ಮುಖ್ಯಮಂತ್ರಿಗಳು ಮತ್ತು ಮುಖ್ಯ ಕಾರ್ಯದರ್ಶಿಯವರ ಸೂಚನೆಯಾಗಿದೆ. ಹೀಗಾಗಿ ಜಿಲ್ಲೆಯ ಎಲ್ಲ ಪ್ರಾಥಮಿಕ, ಸಮುದಾಯ ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲಿ ಗರ್ಭೀಣಿಯರ ಮತ್ತು ಶಿಶು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಬೇಕು. ನಿರ್ಲಕ್ಷ್ಯ ಮಾಡಬಾರದು. ಜಿಲ್ಲೆಯ ಎಲ್ಲಾ ಕಡೆಗಳಲ್ಲಿ ಗರ್ಭಿಣಿಯರಿಗೆ ಸಕಾಲಕ್ಕೆ ಸೂಕ್ತ ಚಿಕಿತ್ಸೆ ಲಭ್ಯವಾಗುವಂತೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ಮಾಡಬೇಕು ಎಂದು ಕಾರ್ಯದರ್ಶಿಗಳು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಯಚೂರ ಜಿಲ್ಲೆಯಲ್ಲಿ ಗರ್ಭಿಣಿಯರ ಮರಣ ಪ್ರಕರಣಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಶೇಷ ತಜ್ಞವೈದ್ಯರ ತಂಡವೊಂದು ಈ ಬಗ್ಗೆ ನಿಗಾವಹಿಸಿ ಕಾರ್ಯನಿರ್ವಹಿಸುತ್ತಿದೆ. ತುರ್ತು ಚಿಕಿತ್ಸೆ ಅವಶ್ಯಕತೆ ಕಾಣಿಸುವ ಗರ್ಭಿಣಿಯರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಕ್ರಮವಹಿಸಲಾಗುತ್ತಿದೆ. ತಾಯಂದಿರ ಮರಣ ತಡೆಗೆ ಸಂಬಂಧಿಸಿದಂತೆ ನರ್ಸ್ಗಳಿಗೆ ತರಬೇತಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ತಿಳಿಸಿದರು.
ಫಲಿತಾಂಶ ಸುಧಾರಣೆಗೆ ಒತ್ತು ಕೊಡಿ :
2023-24 ಮತ್ತು 2024-25ನೇ ಸಾಲಿನ ಎರಡು ವರ್ಷದಲ್ಲಿ ದೇವದುರ್ಗ ತಾಲೂಕಿನಲ್ಲಿ ಶೇ.52.37., ಲಿಂಗಸೂರು ತಾಲೂಕಿನಲ್ಲಿ ಶೇ.48.37., ಮಾನ್ವಿ ತಾಲೂಕಿನಲ್ಲಿ ಶೇ.46.94ರಷ್ಟು, ರಾಯಚೂರು ತಾಲೂಕಿನಲ್ಲಿ ಶೇ.44.81 ರಷ್ಟು ಮತ್ತು ಸಿಂಧನೂರು ತಾಲೂಕಿನಲ್ಲಿ ಶೇ.64.43ರಷ್ಟು ಮಕ್ಕಳು ಎಸೆಸೆಲ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
20023-24ರಲ್ಲಿ ಜಿಲ್ಲೆಯ ಒಟ್ಟಾರೆ ಫಲಿತಾಂಶ ಶೇ.63.49ರಷ್ಟು ಇತ್ತು. 2024-25ನೇ ಸಾಲಿನಲ್ಲಿ ಶೇ.52.05ಕ್ಕೆ ಕುಸಿದಿದೆ. ಈ ಫಲಿತಾಂಶ ಕುಸಿತಕ್ಕೆ ಏನು ಕಾರಣ ಎಂಬುದನ್ನು ಪತ್ತೆ ಹಚ್ಚಬೇಕು. ಈ ವಿಷಯದ ಬಗ್ಗೆ ಎಲ್ಲ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ವಿಶೇಷ ಗಮನ ಹರಿಸಬೇಕು. ಇನ್ನುಳಿದ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕಾಳಜಿಯಿಂದ ಕಾರ್ಯನಿರ್ವಹಿಸಬೇಕು ಎಂದು ಕಾರ್ಯದರ್ಶಿಗಳು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ಮರುಪರೀಕ್ಷೆಗಾಗಿ ಈಗಾಗಲೇ ಶೇ.100 ರಷ್ಟು ನೋಂದಣಿ ಮಾಡಿದ್ದಾರೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ ಎಂದು ಡಿಡಿಪಿಐ ಬಡಿಗೇರ ಅವರು ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದರು.
ಕ್ರಿಯಾ ಯೋಜನೆ ಪರಿಶೀಲನೆ :
2025-26ನೇ ಸಾಲಿನ ಜಿಲ್ಲಾ ವಲಯ ಕಾರ್ಯಕ್ರಮಗಳ ವಿವಿಧ ಇಲಾಖೆಗಳ ಸಿವಿಲ್ ಕಾಮಗಾರಿಗಳ ಕ್ರಿಯಾ ಯೋಜನೆಯ ಬಗ್ಗೆ ಇದೆ ವೇಳೆ ಕಾರ್ಯದರ್ಶಿಗಳು ಆಯಾ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಕ್ರಿಯಾ ಯೋಜನೆಗೆ ಅನುಮೋದನೆ :
2025-26ನೇ ಸಾಲಿನ ಜಿಲ್ಲಾ ಪಂಚಾಯತ್ ಜಿಲ್ಲಾ ವಲಯ ಕಾರ್ಯಕ್ರಮಗಳ ವಾರ್ಷಿಕ ಕ್ರಿಯಾ ಯೋಜನೆಗಳ ಬಗ್ಗೆ ಈ ವೇಳೆ ಪರಿಶೀಲನೆ ನಡೆಸಿದ ಕಾರ್ಯದರ್ಶಿಗಳು ಸಭೆಯಲ್ಲಿ ಅನುಮೋದನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೋಹಪತ್ರ, ಸಹಾಯಕ ಆಯುಕ್ತರಾದ ಗಜಾನನ ಬಾಳೆ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.