ರಾಯಚೂರು | ನಗರದ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಸಹಕಾರ ಅಗತ್ಯ; ಆಯುಕ್ತ ಜುಬಿನ್

ರಾಯಚೂರು : ರಾಷ್ಟ್ರೀಯ ಜೀವನೋಪಾಯ ಅಭಿಯಾನದ ದೀನದಯಾಳ್ ಜನ ಆಜೀವಿಕ ಯೋಜನೆಯಡಿ ರಾಯಚೂರು ನಗರದಲ್ಲಿ ಹೊಸ ಉದ್ಯೋಗ ಸೃಷ್ಟಿಗೆ ನೂತನ ವಿಚಾರಗಳ ಮಾಹಿತಿಯನ್ನು ಒದಗಿಸಬೇಕು. ಅಲ್ಲದೆ ನಗರದ ಅಭಿವೃದ್ಧಿಗೆ ವಿವಿಧ ಇಲಾಖೆಗಳು ಒಗ್ಗಟಿನಿಂದ ಕೆಲಸ ಮಾಡುವ ಮೂಲಕ ಸಹಕಾರ ನೀಡಬೇಕೆಂದು ರಾಯಚೂರು ಮಹಾನಗರ ಪಾಲಿಕೆ ಆಯುಕ್ತರಾದ ಜುಬಿನ್ ಮೂಹಪಾತ್ರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಫೆ.27ರ ಗುರುವಾರ ದಂದು ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಅವರ ಹೊಸ ಯೋಜನೆಯಾದ ದೀನ್ದಯಾಳ್ ಜನ ಅಜೀವಿಕ ಯೋಜನೆಗೆ ಪ್ರಾಯೋಗಿಕವಾಗಿ ರಾಯಚೂರು ಮಹಾನಗರ ಪಾಲಿಕೆ ಆಯ್ಕೆಯಾಗಿದ್ದು, ಕ್ರಿಯಾ ಯೋಜನೆಯನ್ನು ತಯಾರಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಮುಂದಿನ ಐದು ವರ್ಷಗಳಲ್ಲಿ ನಗರದ ಎಲ್ಲಾ ನಿರುದ್ಯೋಗಿ ಯುವಕರಿಗೆ ಹಾಗೂ ಉದ್ಯೋಗ ರಹಿತರಿಗೆ ಸ್ವಯಂ ಉದ್ಯೋಗವನ್ನು ಒದಗಿಸುವ ಉದ್ದೇಶವನ್ನು ಹೊಂದಲಾಗಿದೆ. ಕಟ್ಟಡ ಕಾರ್ಮಿಕರು, ಸಾಗಾಣಿಕೆ ಕಾರ್ಮಿಕರು, ಗಿಗ್ ಕಾರ್ಮಿಕರು, ಆರೈಕೆ ಕಾರ್ಯಕರ್ತರು, ತ್ಯಾಜ್ಯ ಕೆಲಸಗಾರರು ಹಾಗೂ ಮನೆಗೆಲಸ ಎಂಬ ಆರು ದುರ್ಬಲ ವಲಯಗಳಲ್ಲಿ ಉದ್ಯೋಗ ಸೃಷ್ಟಿಸಲು ಎಲ್ಲಾ ಅಧಿಕಾರಿಗಳು ಕ್ರಮ ವಹಿಸಬೇಕು. ಜೊತೆಗೆ ಈ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಆದಾಯವನ್ನು ಹೇಗೆ ಹೆಚ್ಚಳ ಮಾಡಬೇಕೆಂಬ ವಿಚಾರದ ಬಗ್ಗೆ ಅಧಿಕಾರಿಗಳು ತಮ್ಮ ವಿಚಾರಗಳನ್ನು ತಿಳಿಸಬಹುದಾಗಿದೆ ಎಂದರು.
ಮೂರು ದಿನದಲ್ಲಿ ಮಾಹಿತಿ ಸಲ್ಲಿಸಿ :
ತಯಾರಿಕೆ ಮತ್ತು ಸೇವೆಗಳನ್ನು ಒದಗಿಸುವ ಸ್ವಯಂ ಉದ್ಯೋಗ ಸೃಷ್ಟಿಗೂ ಅಧಿಕಾರಿಗಳು ಮುಂದಾಗಬೇಕಿದೆ. ಈ ಎಲ್ಲಾ ಮಾಹಿತಿಗಳನ್ನು ಸರ್ಕಾರಕ್ಕೆ ತಲುಪಿಸಲು 15 ದಿನಗಳ ಕಾಲಾವಕಾಶವಿದ್ದು, ಅಧಿಕಾರಿಗಳು ತಮ್ಮ ಇಲಾಖಾ ವ್ಯಾಪ್ತಿಯಲ್ಲಿರುವ ಯೋಜನೆಗಳ ಮಾಹಿತಿ ಹಾಗೂ ಇತರೆ ಮಾಹಿತಿಗಳನ್ನು ಮೂರು ದಿನದಲ್ಲಿ ಸಲ್ಲಿಸಬೇಕು ಎಂದು ಸೂಚಿಸಿದರು.
ಈ ಯೋಜನೆಯಡಿ ಕಾರ್ಯಕ್ರಮಗಳನ್ನು ರಾಯಚೂರು ನಗರದಲ್ಲಿ ಅನುಷ್ಠಾನಗೊಳಿಸಲು ಟಾಸ್ಕ್ ಫೊರ್ಸ್ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯಿಂದ ಮುಂದಿನ ದಿನಗಳಲ್ಲಿ ಯೋಜನೆಯ ಕುರಿತು ಸಂಪೂರ್ಣ ಕ್ರಿಯಾ ಯೋಜನೆಯನ್ನು ರೂಪಿಸಲು ಸೂಕ್ತ ಕ್ರಮಕೈಗೊಳ್ಳಲಾಗುವುದು. ಟಾಸ್ಕ್ ಫೊರ್ಸ್ ಸಮಿತಿಯಿಂದ ಯೋಜನೆಗೆ ಸಂಬಂದಿಸಿದಂತೆ ಸಮೀಕ್ಷೆ, ಜಾಗೃತಿ ಕಾರ್ಯಕ್ರಮಗಳು ಹಾಗೂ ತರಬೇತಿ ಕಾರ್ಯಕ್ರಮಗಳನ್ನು ಉತ್ತಮವಾಗಿ ಅನುಷ್ಠಾನಗೊಳಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕೆಂದು ಸೂಚಿಸಿದರು.
ಪಾಲಿಕೆಯಿಂದಲೇ ನರ್ಸರಿಗಳ ನಿರ್ಮಾಣ :
ನಗರದಲ್ಲಿ ದೂಳಿನ ಸಮಸ್ಯೆ ಹೆಚ್ಚಿದ್ದು, ಪಾಲಿಕೆಯಿಂದಲೇ ನರ್ಸರಿ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ಅಲ್ಲದೆ ಅದೇ ನರ್ಸರಿಯ ಗಿಡಗಳನ್ನು ಉಪಯೋಗಿಸಿಕೊಂಡು ನಗರವನ್ನು ಹಸಿರೀಕರಣ ಮಾಡಿದಾಗ ನಗರ ಶೇ.50ರಷ್ಟು ದೂಳಿನ ಸಮಸ್ಯೆ ಬಗೆಹರಿಯುತ್ತದೆ. ಎಲ್ಲಾ ಯೋಜನೆಗಳನ್ನು ಗಂಭೀರವಾಗಿ ಪರಿಗಣಿಸಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಿದ್ದಲ್ಲಿ ಮುಂದಿನ ಆರು ತಿಂಗಳಲ್ಲಿ ನಗರದ ಎಲ್ಲರಿಗೂ ಉದ್ಯೋಗ ಸಿಗಲಿವೆ. ನಗರದಲ್ಲಿ 6 ತರಕಾರಿ ಹಾಗೂ ಹಣ್ಣು ಮಾರಾಟ ವಲಯಗಳನ್ನು ಸ್ಥಾಪಿಸಲಾಗುವುದು ಎಂದರು.
13 ರಾಜ್ಯಗಳು, 25 ನಗರಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ :
ಯೋಜನೆಯಡಿ ದೇಶದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಸ್ತರಿಸಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲು ಆದೇಶಿಸಲಾಗಿದೆ. ಈ ಹೊಸ ಯೋಜನೆಯು ಈಗಾಗಲೇ 13 ರಾಜ್ಯಗಳ 25 ನಗರಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಕರ್ನಾಟಕ ರಾಜ್ಯದ ರಾಯಚೂರು, ಕಲಬುರಗಿ ಹಾಗೂ ತುಮಕೂರು ಮಹಾನಗರ ಪಾಲಿಕೆಯಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಮಾರ್ಗಸೂಚಿಗಳ ಅನುಗುಣವಾಗಿ ಕ್ರಿಯಾ ಯೋಜನೆಯನ್ನು ನಿಗದಿತ ನಮೂನೆಯಲ್ಲಿ ಸಿದ್ಧಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿ ಡಾ.ಜಿ.ಯು.ಹುಡೇದ್, ಡಿವೈಎಸ್ಪಿ ಸತ್ಯನಾರಾಯಣ ರಾವ್, ಮಹಾನಗರ ಪಾಲಿಕೆ ಸಮುದಾಯ ಸಂಘಟನಾ ಅಧಿಕಾರಿ ಕೃಷ್ಣ ಕಟ್ಟಿಮನಿ, ಪಾಲಿಕೆ ಅಧಿಕಾರಿ ಸುರೇಶ, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಯಂಕಚಿ, ಸಿಪಿಐ ನಾಗರಾಜ ಮೇಕಾ, ಆಹಾರ ಇಲಾಖೆ ಉಪನಿರ್ದೇಶಕ ಕೃಷ್ಣ ಶಾವಂತಗೇರಾ, ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನವೀನ್ ಕುಮಾರ, ಡಿಡಿಪಿಐ ಕೆ.ಡಿ.ಬಡಿಗೇರ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಟಿ.ತಿರುಮಲೇಶ, ಜಿಲ್ಲಾ ಉದ್ಯೋಗಾಧಿಕಾರಿ ನವೀನ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.







