ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಕ್ಷೇತ್ರಕ್ಕೆ 850 ಕೋಟಿ ರೂ. ಬಿಡುಗಡೆ : ಸಚಿವ ಭೋಸರಾಜು

ರಾಯಚೂರು : ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆಗಾಗಿ ಮತ್ತು ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ 850 ಕೋಟಿ ರೂ. ವೆಚ್ಚದಲ್ಲಿ ವಿಶೇಷ ಅನುದಾನ ನೀಡಲಾಗಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಭೋಸರಾಜು ಹೇಳಿದರು.
ಸಿರವಾರ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಕುಟುಂಬ ಕಲ್ಯಾಣ ಇಲಾಖೆಯಿಂದ 2 ಕೋಟಿ ರೂ ವೆಚ್ಚದಲ್ಲಿ ವಸತಿ ಗೃಹ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಚಿವ ಎನ್ ಎಸ್ ಭೋಸರಾಜು ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಂಪಯ್ಯ ನಾಯಕ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಕಲ್ಯಾಣ ಕರ್ನಾಟಕದಲ್ಲಿ ಆರೋಗ್ಯ ಕೇಂದ್ರದ ಕೊರತೆ ನೀಗಿಸಿ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚುವರಿ ವೈದ್ಯರನ್ನು ನೇಮಿಸುವ ಮೂಲಕ ಉನ್ನತ ಮಟ್ಟದ ಚಿಕಿತ್ಸೆ ದೊರಕಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಕ್ಷೇತ್ರಕ್ಕೆ 850 ಕೋಟಿ ರೂ. ಅನುದಾನ ನೀಡಿ, ಆರೋಗ್ಯ ಸುಧಾರಣೆಗೆ ಆದ್ಯತೆ ನೀಡಿದ್ದೇವೆ. ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳು ಸಮಯ ನೋಡದೆ ತುರ್ತು ಸಂದರ್ಭದಲ್ಲಿಯೂ ಜನರ ಸೇವೆ ಮಾಡಬೇಕು. ವೈದ್ಯಕೀಯ ಸೇವೆ ಮಾಡುವುದರಿಂದ ಪುಣ್ಯ ಬರಲಿದೆ. ಸಿಬ್ಬಂದಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕೆಂದು ಭೋಸರಾಜು ತಿಳಿಸಿದರು.
ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಾದ ಡಾ. ಸುರೇಂದ್ರ ಬಾಬು, ತಾಲೂಕು ವೈದ್ಯಾಧಿಕಾರಿಗಳು, ತಹಶೀಲ್ದಾರರಾದ ಅಶೋಕ ಪವಾರ್, ಇಓ ಶಶಿಧರ್ ಸ್ವಾಮಿ, ತಾಲೂಕು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಅಬ್ದುಲ್ ಗಪೂರು ಸಾಬ್, ಮುಖಂಡರಾದ ಚುಕ್ಕಿ ಸೂಗಪ್ಪ, ಶರಣಯ್ಯ ನಾಯಕ್, ಚುಕ್ಕಿ ಶಿವುಕುಮಾರ್, ಭೂಪನಗೌಡ, ಅರಕೇರಾ ಶಿವಕುಮಾರ್, ಖಾದ್ರಿ ಸಿರವಾರ್, ಶಿವಾನಂದ, ಬಸವರಾಜ, ರಮೇಶ ದರ್ಶನಕರ್, ನಾಗಪ್ಪ ನವಲಕಲ್, ಜಿ ಶಿವಮೂರ್ತಿ, ರುದ್ರಪ್ಪ ಅಂಗಡಿ, ಅಮರೇಗೌಡ ಹಂಚಿನಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.







