Sindhanur | ಜೋಳದ ಹಣ ಪಾವತಿಗೆ ಆಗ್ರಹಿಸಿ ರೈತರಿಂದ ರಸ್ತೆ ತಡೆದು ಪ್ರತಿಭಟನೆ

ಸಿಂಧನೂರು : ಸರ್ಕಾರಕ್ಕೆ ಮಾರಾಟ ಮಾಡಿದ ಜೋಳದ ಹಣವನ್ನು ತಕ್ಷಣ ರೈತರ ಖಾತೆಗಳಿಗೆ ಜಮಾ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಸೋಮವಾರ ರಾಯಚೂರು ರಸ್ತೆಯ ಪೋತ್ನಾಳ–ಬಳಗಾನೂರು ಕ್ರಾಸ್ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಒಂದು ಗಂಟೆಗೂ ಅಧಿಕ ಕಾಲ ರಸ್ತೆ ತಡೆ ನಡೆದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಯಿತು. ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.
ಖರೀದಿ ಕೇಂದ್ರಗಳಿಗೆ ಜೋಳ ಮಾರಾಟ ಮಾಡಿ ಮೂರು ತಿಂಗಳು ಕಳೆದರೂ ರೈತರ ಖಾತೆಗಳಿಗೆ ಹಣ ಜಮಾ ಮಾಡಿಲ್ಲ. ಇದರಿಂದ ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯಗಳಿಗೆ ಅಗತ್ಯವಿರುವ ಹಣದ ಕೊರತೆ ಎದುರಾಗಿದ್ದು, ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಜೋಳ ಮಾರಾಟ ಮಾಡಿದ ರೈತರು ಹಣಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಬೆಳೆ ಬೆಳೆಯಲು ಮೂರು ತಿಂಗಳು ಹಾಗೂ ಫಸಲು ಮಾರಾಟ ಮಾಡಿ ಮೂರು ತಿಂಗಳು ಕಳೆದರೂ ರೈತರ ಕೈಗೆ ಇನ್ನೂ ಒಂದು ರೂಪಾಯಿಯೂ ಬಂದಿಲ್ಲ. ಕೃಷಿ ಚಟುವಟಿಕೆಗಳಿಗೆ ಹಣವಿಲ್ಲದೆ ರೈತರು ಖಾಸಗಿ ಸಾಲಗಾರರ ಮೊರೆ ಹೋಗುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಒಟ್ಟು ಆರು ತಿಂಗಳು ಕಳೆದರೂ ರೈತರಿಗೆ ಪಾವತಿ ಆಗದಿದ್ದರೆ ಅವರು ಕೃಷಿ ಹೇಗೆ ಮಾಡಬೇಕು?” ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು, ಸರ್ಕಾರ ತಕ್ಷಣ ಬಾಕಿ ಹಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಅರುಣ್ ಹೆಚ್. ದೇಸಾಯಿ ರೈತರಿಂದ ಮನವಿ ಸ್ವೀಕರಿಸಿ ಸಂಬಂಧಿತ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಸಿಪಿಐ ವಿನಾಯಕ ಹಾಗೂ ಪಿಎಸ್ಐ ಎರಿಯಪ್ಪ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಅಮೀನ್ ಪಾಷಾ ದಿದ್ದಗಿ, ಬಸವರಾಜ ಹಂಚಿನಾಳ, ಶಿವನಗೌಡ ತಿಡಿಗೋಳ, ಇಸೂಫ್ ಸಾಬ್, ಅಣ್ಣಪ್ಪ, ವೀರೇಶ, ಖಾದರ್, ಚೆನ್ನನಗೌಡ, ಚನ್ನಯ್ಯ, ಚೆನ್ನಬಸವ ರಾಗಲಪರ್ವಿ, ಬಸಣ್ಣ ಪುಲದಿನ್ನಿ, ನಾರಾಯಣಪ್ಪ, ಮಲ್ಲಿಕಾರ್ಜುನ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.






