ಲಿಂಗಸುಗೂರು| ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ ಪ್ರಕರಣ: ಪೊಲೀಸ್ ಠಾಣೆ ಎದುರು ಕುಟುಂಬಸ್ಥರಿಂದ ಪ್ರತಿಭಟನೆ

ಲಿಂಗಸುಗೂರು: ತಾಲೂಕಿನ ಹಟ್ಟಿ ಪಟ್ಟಣದ ಹೊರವಲಯದಲ್ಲಿ ಸೋಮವಾರ ಅನುಮಾನಾಸ್ಪದವಾಗಿ ಯುವತಿಯೋರ್ವಳ ಮೃತದೇಹ ಪತ್ತೆಯಾಗಿತ್ತು. ಇದೀಗ ಯುವತಿಯ ಕುಟುಂಬಸ್ಥರು ಕೊಲೆ ಆರೋಪ ಮಾಡಿದ್ದು, ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.
ಜ್ಯೋತಿ ಎಂಬ ಯುವತಿಯ ಮೃತದೇಹ ಸೋಮವಾರ ಅನುಮಾನಾಸ್ಪದವಾಗಿ ಪತ್ತೆಯಾಗಿತ್ತು. ಜ್ಞಾನಮೂರ್ತಿ ಹಾಗೂ ಅವರ ಕುಟುಂಬಸ್ಥರೇ ಕೊಲೆ ನಡೆಸಿದ್ದಾರೆ ಎಂದು ಯುವತಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಕುಟುಂಬದ ಸದಸ್ಯರು ಸೇರಿದಂತೆ ನೂರಾರು ಗ್ರಾಮಸ್ಥರು ಮಂಗಳವಾರ ಸಂಜೆ ಪೊಲೀಸ್ ಠಾಣೆ ಆವರಣದಲ್ಲಿ ಮೃತದೇಹವಿಟ್ಟು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾಕಾರರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು, ತಪ್ಪಿತಸ್ಥರನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು. ಇದರಿಂದಾಗಿ ಠಾಣೆ ಆವರಣದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಪೊಲೀಸರು ಕುಟುಂಬಸ್ಥರು ಹಾಗೂ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ, ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಪರಿಸ್ಥಿತಿ ಶಾಂತವಾಗಿದೆ. ಪೊಲೀಸರ ಭರವಸೆ ಬಳಿಕ ಮೃತದೇಹವನ್ನು ಠಾಣೆಯ ಆವರಣದಿಂದ ಹೊರತೆಗೆದು, ಕುಟುಂಬಸ್ಥರು ಅಂತ್ಯಸಂಸ್ಕಾರ ನಡೆಸಿದ್ದಾರೆ.







