Shivamogga | ಮಳೆ ಮಾಪನ ಕೇಂದ್ರಗಳನ್ನು ಸರಿಪಡಿಸಲು ಸೂಚನೆ: ಸಚಿವ ಎಸ್. ಮಧು ಬಂಗಾರಪ್ಪ

ಶಿವಮೊಗ್ಗ: ಕಳೆದ ಸಾಲಿನಲ್ಲಿ ಬೆಳೆ ಹಾನಿಗೊಳಗಾದ ಸಂತ್ರಸ್ಥ ರೈತರಿಗೆ ನ್ಯಾಯೋಚಿತವಾಗಿ ದೊರೆಯಬೇಕಾದ ಬೆಳೆ ವಿಮಾ ಮೊತ್ತ ದೊರೆಯಬೇಕು. ರೈತರಿಗೆ ಭರವಸೆ ಮೂಡುವ ಕೆಲಸ ಅಧಿಕಾರಿಗಳು ಮಾಡಬೇಕು. ದುರಸ್ತಿಗೊಳ್ಳದೆ ಉಳಿದಿರುವ ಮಳೆ ಮಾಪನ ಕೇಂದ್ರಗಳನ್ನು ದುರಸ್ತಿ ಮಾಡಿಸುವಂತೆ ಸಚಿವ ಎಸ್.ಮಧು ಬಂಗಾರಪ್ಪ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಸೊರಬದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬರ ಮತ್ತು ಅತಿವೃಷ್ಟಿ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಳೆದ ಸಾಲಿನಲ್ಲಿ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಾಗಿರುವ ತಪ್ಪಾದ ಅಂಕಿ-ಅಂಶಗಳಿಂದಾಗಿ ಪ್ರಸಕ್ತ ಸಾಲಿನ ಬೆಳೆಹಾನಿ ಪರಿಹಾರ ದೊರೆಯುವಲ್ಲಿ ಯಾವುದೇ ವ್ಯತ್ಯಾಸಗಳಾಗದಂತೆ ಸಂಬಂಧಿಸಿದ ಅಧಿಕಾರಿಗಳು ವಿಶೇಷ ಗಮನಹರಿಸಬೇಕು. ಪ್ರಸಕ್ತ ಸಾಲಿನ ಎಪ್ರಿಲ್-ಮೇ ಮಾಹೆಯಲ್ಲಿ ಬಿದ್ದ ಮಳೆಯಿಂದಾಗಿ ಭಾರೀ ಪ್ರಮಾಣದ ತೋಟಗಾರಿಕೆ ಬೆಳೆ ಹಾನಿಗೊಳಗಾಗಿದೆ. ಈ ವಿಷಯದ ಕುರಿತ ವಿಸ್ತೃತ ವರದಿಯನ್ನು ತಯಾರಿಸಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ ಅವರು ಶೀಘ್ರದಲ್ಲಿ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು.
ಪ್ರಸಕ್ತ ಸಾಲಿನ ಮುಂಗಾರು ಕ್ಷೀಣವಾಗಿದ್ದರಿಂದ ಸೊರಬ ತಾಲೂಕಿನಲ್ಲಿ ಶೇ. 32ರಷ್ಟು ಮಳೆ ಕೊರತೆ ಉಂಟಾಗಿದ್ದು, ಕೆರೆ – ಕಟ್ಟೆ - ಕಾಲುವೆಗಳಲ್ಲಿ ಸಾಮಾನ್ಯದಿಂದ ಭಾರಿ ಪ್ರಮಾಣದ ನೀರಿನ ಸಂಗ್ರಹದಲ್ಲಿ ಇಳಿಕೆಯಾಗಿದೆ ಅಲ್ಲದೆ ತಾಲೂಕಿನಲ್ಲಿ ಪ್ರಧಾನ ಬೆಳೆ ಮೆಕ್ಕೆಜೋಳ ಬಿತ್ತನೆಯಲ್ಲಿ ಹಿನ್ನೆಡೆಯಾಗಿರುವುದನ್ನು ಗಮನಿಸಲಾಗಿದೆ. ಸಕಾಲದಲ್ಲಿ ಮಳೆ ಬಾರದ ಕಾರಣದಿಂದಾಗಿ ಬೆಳೆ ಹುಲುಸಾಗಿ ಬೆಳೆಯದೆ ನಿರೀಕ್ಷಿತ ಪ್ರಮಾಣದ ಇಳುವರಿ ಬರುವುದು ಕಷ್ಟಸಾಧ್ಯವಾಗಿದೆ. ಅಲ್ಲದೆ ಭತ್ತದ ಬೆಳೆ ಬಿತ್ತನೆ ಕಾರ್ಯ ಮಂದಗತಿಯಲ್ಲಿ ಸಾಗಿದ್ದು, ಆಗಸ್ಟ್ ಎರಡನೇ ವಾರದಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸುವ ಆಶಯ ಹೊಂದಲಾಗಿದೆ ಎಂದು ಹೇಳಿದರು.
ಕಳೆದ ಒಂದು ವಾರದಿಂದ ಜಿಲ್ಲೆಯಾದ್ಯಂತ ಬರುತ್ತಿರುವ ಸಾಧಾರಣ ಪ್ರಮಾಣದ ಮಳೆಯಿಂದಾಗಿ ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ಅಡಿಕೆ ಬೆಳೆಯಲ್ಲಿ ಚೇತರಿಕೆ ಕಂಡುಬಂದಿದೆ. ಮುಂದಿನ 40ವಾರಗಳಿಗೆ ಜಾನುವಾರುಗಳಿಗೆ ಮೇವಿನ ಕೊರತೆ ಇರುವುದಿಲ್ಲ ಎಂಬ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡರು.
ಜಿಲ್ಲೆಯ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಯಾವುದೇ ಬೀಜ ರಸಗೊಬ್ಬರದ ಕೊರತೆ ಇರುವುದಿಲ್ಲ. ಸರ್ಕಾರದ ಮಾರ್ಗಸೂಚಿಯಂತೆ ಗೊಬ್ಬರ ವಿತರಣೆಗೆ ಕ್ರಮ ವಹಿಸಲಾಗಿದೆ. ತುಂಗಾ ಜಲಾಶಯದಲ್ಲಿ ನೀರಿನ ಒಳಹರಿವನ್ನು ಗಮನಿಸಿ, ಹೊರಕ್ಕೆ ಬಿಡಲಾಗುತ್ತಿದೆ. ಅಂತೆಯೇ ಕೆರೆಗಳಿಗೆ ನೀರು ತುಂಬುವ ಕಾರ್ಯ ಪ್ರಗತಿಯಲ್ಲಿದೆ. ಸೊರಬ ತಾಲೂಕಿನ ಒಂದು ಗ್ರಾಮದಲ್ಲಿ ಟ್ಯಾಂಕರ್ ಮೂಲಕ ಅಲ್ಲಿನ ನಿವಾಸಿಗಳಿಗೆ ನೀರನ್ನು ಒದಗಿಸಲಾಗುತ್ತಿದೆ. ಕೆಲವೆಡೆ ಬೋರ್ ವೆಲ್ಗಳನ್ನು ಬಾಡಿಗೆ ಪಡೆದು ನೀರನ್ನು ಒದಗಿಸಲಾಗುತ್ತಿದೆ ಎಂದರು.
ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪ ಅವರ ಅಧಿಕಾರಾವಧಿಯಲ್ಲಿ ರೈತರಿಗೆ ಉಚಿತವಾಗಿ ನೀಡಲಾದ ವಿದ್ಯುತ್ ಯೋಜನೆಯ ಪರಿಣಾಮವಾಗಿ ಜಿಲ್ಲೆ ಮಾತ್ರವಲ್ಲದೆ ರಾಜ್ಯದಾದ್ಯಂತ ಭಾರೀ ಪ್ರಮಾಣದಲ್ಲಿ ಅಡಿಕೆ ಬೆಳೆ ಕ್ಷೇತ್ರ ವ್ಯಾಪ್ತಿ ವಿಸ್ತಾರಗೊಂಡಿದೆ. ಈ ಕುರಿತ ತುಲನಾತ್ಮಕ ವರದಿ ನೀಡುವಂತೆ ಅವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು ಅಡಿಕೆ ಬೆಳೆಗೆ ಆಗಾಗ್ಗೆ ಕಂಡುಬರುವ ಹಿಡಿಮುಂಡಿಗೆ ರೋಗದ ಬಗ್ಗೆ ರೈತರಿಗೆ ಅರಿವು ಮೂಡಿಸುವಂತೆಯೂ ಅವರು ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಳ್ಳುವ ರಸ್ತೆ, ಸೇತುವೆ, ಕಟ್ಟಡ ಮತ್ತಿತರ ಕಾಮಗಾರಿಗಳು ಗುಣಮಟ್ಟದ್ದಾಗಿರುವಂತೆ ನೋಡಿಕೊಳ್ಳಬೇಕು. ಅಲ್ಲದೇ ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ಪೂರ್ಣಗೊಳಿಸುವಂತೆಯೂ ಸಚಿವರು ಅಧಿಕಾರಿಗಳಿಗೆ ಸೂಚಿಸಿದ ಅವರು ತುರ್ತು ಕೈಗೊಳ್ಳಬಹುದಾದ ಕಾಮಗಾರಿಗಳ ಕ್ರಿಯಾಯೋಜನೆ ಸಿದ್ಧಪಡಿಸಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆಯೂ ಅವರು ಸೂಚಿಸಿದರು.
ಅತ್ಯಂತ ಕನಿಷ್ಟ ಮೊತ್ತಕ್ಕೆ ಟೆಂಡರ್ ಪಡೆದು ಕಳಪೆ ಕಾಮಗಾರಿ ಮಾಡಿದಲ್ಲಿ ಅಂತಹ ಕಾಮಗಾರಿಗಳ ಕುರಿತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಎಸ್.ಎಸ್.ಎಲ್.ಸಿ. ಪರೀಕ್ಷಾ ಸುಧಾರಣೆಯಲ್ಲಿ ಹಲವು ಮಹತ್ವದ ಕ್ರಮ ವಹಿಸಲಾಗಿದೆ. ಶಿಕ್ಷಕರ ಕೊರತೆ ನೀಗಿಸುವಲ್ಲಿ ಸರ್ಕಾರ ಸಕಾಲದಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿ, ಫಲಿತಾಂಶ ಸುಧಾರಣೆಗೆ ಕ್ರಮ ಕೈಗೊಂಡಿದೆ ಎಂದರು.
ಮಕ್ಕಳಿಗೆ ವಿತರಿಸಲಾಗುವ ಶೂ, ಸಾಕ್ಸ್ಗಳ ಗುಣಮಟ್ಟದಲ್ಲಿ ಯಾವುದೇ ನ್ಯೂನತೆಗಳಿರದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ನೋಡಿಕೊಳ್ಳಬೇಕು. ಅಡುಗೆ ಕೋಣೆ/ಕೊಠಡಿಗಳ ದುರಸ್ತಿಗೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು. ಮೆಸ್ಕಾಂನ ಕಾರ್ಯನಿರತ ಅಧಿಕಾರಿ-ಸಿಬ್ಬಂಧಿಗಳ ಮೇಲೆ ದುರ್ವರ್ತನೆ ತೋರಿದ ವ್ಯಕ್ತಿಗಳ ಕ್ರಮವನ್ನು ಸಹಿಸಿಕೊಳ್ಳಲಾಗುವುದಿಲ್ಲ. ಎಂತಹ ಬಲಾಢ್ಯರಾಗಿದ್ದರೂ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದ ಅವರು, ಜಿಲ್ಲೆಯಲ್ಲಿ ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಇಲ್ಲಿನ ಜನರು ವಿದ್ಯುತ್ ಸಮಸ್ಯೆಯಿಂದ ಪರಿತಪಿಸುವುದು ಸಲ್ಲದು ಎಂದ ಅವರು, ವಿದ್ಯುತ್ ಸರಬರಾಜಿನಲ್ಲಿನ ನ್ಯೂನತೆಯನ್ನು ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಏತ ನೀರಾವರಿ ಯೋಜನೆಗಳಿಂದ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವಲ್ಲಿ ನೀರಾವರಿ ಇಲಾಖೆಯ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಅವರು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ 280ಮಳೆ ಮಾಪನ ಕೇಂದ್ರಗಳಿದ್ದು, ಅವುಗಳಲ್ಲಿ ಜನವರಿ ವೇಳೆಗೆ 72ಯಂತ್ರಗಳು ಮಾತ್ರ ಕ್ರಿಯಾಶೀಲವಾಗಿದ್ದವು. ಪ್ರಸ್ತುತ ಸಂದರ್ಭದಲ್ಲಿ ಬಹುತೇಕ ಮಳೆಮಾಪನ ಕೇಂದ್ರಗಳನ್ನು ದುರಸ್ತಿಗೊಳಿಸಲಾಗಿದೆ. ಇನ್ನೂ 22ಮಳೆ ಮಾಪನ ಕೇಂದ್ರಗಳು ಸರಿಪಡಿಸಬೇಕಾಗಿದ್ದು, ಮುಂದಿನ ಒಂದು ವಾರದೊಳಗಾಗಿ ಸರಿಪಡಿಸಲಾಗುವುದು.
- ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾಧಿಕಾರಿ






