ಶೀಘ್ರದಲ್ಲೇ ಖಾಯಂ ವೈದ್ಯರ ನೇಮಕ : ಸಚಿವ ಯು.ಟಿ.ಖಾದರ್

ಶಿವಮೊಗ್ಗ : ಖಾಯಂ ವೈದ್ಯರನ್ನು ನೇಮಕ ಮಾಡಲು ಸರಕಾರ ಅವಕಾಶ ನೀಡಿದ್ದು, ನೇಮಕ ಪ್ರಕ್ರಿಯೆ ಶೀಘ್ರದಲ್ಲೇ ಪ್ರಾರಂಭವಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ 19 ಪಿಎಸ್ಸಿ ಎಂಬಿಬಿಎಸ್ ವೈದ್ಯರು ಬೇಕಾಗಿದ್ದು, ಗುತ್ತಿಗೆ ಆಧಾರ ಮೇಲೆ ನೇಮಕ ಮಾಡಲು ಆದೇಶ ಮಾಡಲಾಗಿದೆ. ಹಾಗಾಗಿ ಆದಷ್ಟು ಬೇಗ ಅರ್ಜಿ ಕರೆದು ಅದನ್ನು ಸ್ವೀಕರಿಸಲಾಗುತ್ತದೆ. ಗುಡ್ಡ ಗಾಡು ಪ್ರದೇಶಗಳಲ್ಲಿ ಕೆಲಸ ಮಾಡುವ ವೈದ್ಯರಿಗೆ ಹೆಚ್ಚಿನ ವೇತನವನ್ನು ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಇಲಾಖೆಯ ಮೊದಲ ಆದ್ಯತೆ ಎಲ್ಲಾ ತಾಲೂಕು ಮತ್ತು ಜಿಲ್ಲೆಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ವೈದ್ಯರು, ಲ್ಯಾಬ್ ಟೆಕ್ನಿಷಿಯನ್, ನರ್ಸ್, ಫಾರ್ಮಾಸಿಸ್ಟ್ ಹಾಗೂ ಡಿ ವೃಂದ ನೌಕರರನ್ನು ಭರ್ತಿ ಮಾಡುವುದು. ಈ ಸಂಬಂಧ ಮುಖ್ಯಮಂತ್ರಿ ಜೊತೆ ಮಾತನಾಡಿದ್ದೇನೆ. ಅವರು ಒಪ್ಪಿಗೆ ನೀಡಿದ್ದು, ಕೂಡಲೇ ಭರ್ತಿ ಮಾಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.




