ಸಾಗರ | ಮಹಿಳೆಯ ಕೊಲೆಗೈದು ಚಿನ್ನಾಭರಣ ದೋಚಿದ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಸಾಗರ: ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಿರವಂತೆ ಗ್ರಾಮದಲ್ಲಿ 2020ರಲ್ಲಿ ನಡೆದ ಮಹಿಳೆಯೊಬ್ಬರ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಶಿವಮೊಗ್ಗ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
ಸಾಗರ ನಗರ ನಿವಾಸಿಗಳಾದ ಅರುಣ್ ಅಲಿಯಾಸ್ ಗೆಂಡೆ ಅರುಣ್(27), ಅಭಿಜಿತ್(28) ಹಾಗೂ ಇರ್ಫಾನ್(20) ಶಿಕ್ಷೆಗೆ ಒಳಗಾದ ಆರೋಪಿಗಳು. ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 10,000 ರೂ. ದಂಡ ವಿಧಿಸಿ ನ್ಯಾಯಾಧೀಶೆ ಪ್ರಭಾವತಿ ಸೋಮವಾರ ತೀರ್ಪು ನೀಡಿದ್ದಾರೆ.
2020ರ ಆಗಸ್ಟ್ 12ರಂದು ಸಿರವಂತೆ ಗ್ರಾಮದ ಹಮೀದಾ ಬೇಗಂ(44) ಎಂಬವರನ್ನು ಬರ್ಬರವಾಗಿ ಹತ್ಯೆಗೈದು, ಅವರ ಬಳಿಯಿದ್ದ ಚಿನ್ನಾಭರಣಗಳನ್ನು ದೋಚಲಾಗಿತ್ತು. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ಅರುಣ್, ಅಭಿಜಿತ್ ಹಾಗೂ ಇರ್ಫಾನ್ ರನ್ನು ಬಂಧಿಸಿ ನ್ಯಾಯಾಲಯಕ್ಜೆ ಹಾಜರು ಪಡಿಸಿದ್ದರು.
ಪ್ರಕರಣದ ಆಗಿನ ತನಿಖಾಧಿಕಾರಿ ಸಾಗರ ಗ್ರಾಮಾಂತರ ಠಾಣೆಯ ಸಿಪಿಐ ಸುನೀಲ್ ಕುಮಾರ್ ಎಂ. ಪ್ರಕರಣದ ತನಿಖೆ ಪೂರೈಸಿ ಆರೋಪಿತರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಸರಕಾರದ ಪರವಾಗಿ ಅಣ್ಣಪ್ಪ ನಾಯಕ್ ಜಿ. ಪ್ರಕರಣದ ವಾದ ಮಂಡಿಸಿದ್ದರು.