Shivamogga | 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಚಿವ ಮಧುಬಂಗಾರಪ್ಪ

ಶಿವಮೊಗ್ಗ: ಇಂದು ಇಡೀ ದೇಶವೇ ಹೆಮ್ಮೆಯಿಂದ, ದೇಶಭಕ್ತಿಯ ಭಾವನೆಯೊಂದಿಗೆ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ. ಅಸಂಖ್ಯಾತ ದೇಶಭಕ್ತರ ತ್ಯಾಗ, ಹೋರಾಟ ಹಾಗೂ ಬಲಿದಾನ ಫಲದಿಂದ ಭಾರತವು ಶತಮಾನಗಳ ಶೋಷಣೆಯಿಂದ ಮುಕ್ತಿ ಪಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹೇಳಿದರು.
ಜಿಲ್ಲಾಡಳಿತದ ವತಿಯಿಂದ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಮಹಾತ್ಮ ಗಾಂಧೀಜಿ, ಬಾಲಗಂಗಾಧರ ತಿಲಕ್, ಬಿಪಿನ್ ಚಂದ್ರಪಾಲ್, ಜವಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಅನೇಕ ಮಹನೀಯರ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತಿದೆ. ಅವರೆಲ್ಲರಿಗೂ ಇಂದು ಕೋಟಿ ಕೋಟಿ ನಮನಗಳು ಎಂದ ಅವರು, ನಾವು ನಿಂತಿರುವ ಶಿವಮೊಗ್ಗ ನೆಲ ಸಾಮಾನ್ಯವಲ್ಲ. ಇದು ಹೋರಾಟದ ನೆಲ. ಸ್ವಾಭಿಮಾನದ ನೆಲ. ಸ್ವತಂತ್ರ್ಯ ಹೋರಾಟದಲ್ಲಿ ನಮ್ಮ ಜಿಲ್ಲೆಯ ಅನೇಕರು ಭಾಗವಹಿಸಿದ್ದರು. ವಿಶೇಷವಾಗಿ ಶಾಂತವೇರಿ ಗೋಪಾಲಗೌಡರು, ಕಡಿದಾಳ್ ಮಂಜಪ್ಪನವರು ಹಾಗೂ ಬ್ರಿಟಿಷರ ವಿರುದ್ಧ ಹೋರಾಡಿದ ಈಸೂರಿನ ಸ್ವಾತಂತ್ರ್ಯ ಹೋರಾಟಗಾರರ ನೆನಪು ನಮ್ಮಲ್ಲಿ ಸದಾ ಹಸಿರಾಗಿದೆ. ಈಸೂರು ಕೇವಲ ಒಂದು ಗ್ರಾಮವಲ್ಲ. ಗ್ರಾಮೀಣ ಭಾರತದ ಸ್ವಾತಂತ್ರ್ಯ ಹೋರಾಟದ ಬಹುದೊಡ್ಡ ತ್ಯಾಗದ ಸಂಕೇತವಾಗಿದೆ ಎಂದರು.
ಸ್ವಾತಂತ್ರ್ಯ ಎಂದರೆ ಕೇವಲ ಧ್ವಜ ಹಾರಿಸುವುದಲ್ಲ. ಪ್ರತಿಯೊಬ್ಬ ಮನುಷ್ಯ ಗೌರವದಿಂದ ಬದುಕುವ ಪರಿಸ್ಥಿತಿ ನಿರ್ಮಿಸುವುದೇ ನಿಜವಾದ ಸ್ವಾತಂತ್ರ್ಯ. ಬಡತನದಿಂದ ಯಾವ ಮಗುವೂ ತನ್ನ ಕನಸನ್ನು ಕಳೆದುಕೊಳ್ಳಬಾರದು. ಯಾರೂ ಹಸಿವಿನಿಂದ ಮಲಗಬಾರದು. ಮಹಿಳೆಯರು ಗೌರವದಿಂದ ಬದುಕಬೇಕು. ರೈತನ ಶ್ರಮಕ್ಕೆ ಗೌರವ, ಕಾರ್ಮಿಕನ ದುಡಿಮೆಗೆ ನ್ಯಾಯ ಸಿಗಬೇಕು. ಜಾತಿ, ಧರ್ಮ, ಭಾಷೆಯ ಹೆಸರಿನಲ್ಲಿ ಬೇಧ-ಭಾವ ಮಾಡಬಾರದು. ಇದೇ ಸಂವಿಧಾನದ ಕನಸು ಎಂದರು.
ನಮ್ಮ ಸರಕಾರ ಯುವಕರಿಗಾಗಿ ರಾಜ್ಯಾದ್ಯಂತ 10,000 'ಭಾರತ್ ಜೋಡೋ ಯುವಕ ಸಂಘ'ಗಳನ್ನು ಸ್ಥಾಪಿಸಲು ಮಾರ್ಗಸೂಚಿ ಹೊರಡಿಸಲಾಗಿದೆ. ಪ್ರತಿ ಸಂಘಕ್ಕೆ ಸರ್ಕಾರ ವಾರ್ಷಿಕ 10 ಲಕ್ಷ ಅನುದಾನವನ್ನು ಮೂರು ಕಂತುಗಳಲ್ಲಿ ನೀಡಲಿದೆ. ಯುವಕರು ಸಮಾಜ ನಿರ್ಮಾಣದ ಭಾಗವಾಗಬೇಕು ಎಂಬುದು ಇದರ ಉದ್ದೇಶ ಎಂದರು.
ರೈತರ ಹಿತಾಸಕ್ತಿ ಕಾಪಾಡಲು ಮುಖ್ಯಮಂತ್ರಿಗಳ ರೈತ ಚೈತನ್ಯ ಹಾಗೂ ರೈತ ಮಿತ್ರ ಯೋಜನೆಯು ಸರ್ಕಾರ ಜಾರಿಗೆ ತಂದಿದೆ. ಮುಂಗಾರು ಮಳೆಯ ಏರುಪೇರು ಮತ್ತು ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ರೈತರು ಹಾಗೂ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು, ಬೆಳೆ ಹಾನಿಗೆ ತ್ವರಿತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ವಿಶೇಷ ಆದ್ಯತೆ ನೀಡಿದೆ. ರಾಜ್ಯದಲ್ಲಿ ಈಗಾಗಲೇ 1,000 ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದ್ದು, ಮುಂದಿನ ಹಂತದಲ್ಲಿ 1,000ಕ್ಕೂ ಹೆಚ್ಚು ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯಮಟ್ಟದ ಕೆಪಿಎಸ್ ಉದ್ಘಾಟನಾ ಕಾರ್ಯಕ್ರಮವನ್ನು ಶಿವಮೊಗ್ಗದಲ್ಲಿಯೇ ಆಯೋಜಿಸುವ ಉದ್ದೇಶವಿದೆ ಎಂದರು.
ಜಿಲ್ಲೆಯಲ್ಲಿ ಎಲ್ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಒಂದೇ ಸೂರಿನಡಿ ಶಿಕ್ಷಣ ನೀಡುವ 11 ಕೆಪಿಎಸ್ ಶಾಲೆಗಳು ನಡೆಯುತ್ತಿವೆ. ಈ ಶೈಕ್ಷಣಿಕ ಸಾಲಿನಲ್ಲಿ ಹೊಸದಾಗಿ 59 KPS ಶಾಲೆಗಳನ್ನು ಜಿಲ್ಲೆಗೆ ಮಂಜೂರು ಮಾಡಲಾಗಿದೆ. 222 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳು ನಡೆಯುತ್ತಿವೆ. ಶಾಲಾ ಕೊಠಡಿ ದುರಸ್ತಿಗೆ 319 ಲಕ್ಷ ರೂ. ಮತ್ತು ನೂತನ ಕೊಠಡಿಗಳಿಗೆ 1,180 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ ಎಂದರು.
ರಾಜ್ಯದ ಯುವ ಜನರ ಭದ್ರ ಭವಿಷ್ಯ ನಿರ್ಮಾಣಕ್ಕೆ ಬದ್ಧವಾಗಿರುವ ಸರ್ಕಾರ ನಮ್ಮದು, ಮುಂದಿನ ದಿನಗಳಲ್ಲಿ 72,000 ಸರ್ಕಾರಿ ಹುದ್ದೆಗಳ ಭರ್ತಿಗೆ ಮಹತ್ವದ ಹೆಜ್ಜೆ ಇಟ್ಟಿದೆ. ಇದರ ಭಾಗವಾಗಿ ಸರ್ಕಾರಿ ಶಾಲೆಗಳ ಗುಣಮಟ್ಟ ಬಲಪಡಿಸಲು 15,000 ಶಿಕ್ಷಕರ ನೇರ ನೇಮಕಾತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ ಎಂದರು.
ಮೆಗ್ಗಾನ್ ಆಸ್ಪತ್ರೆಯ ಮೇಲಿನ ಒತ್ತಡ ಕಡಿಮೆ ಮಾಡಲು ಸಿಮ್ಸ್ ಆಸ್ಪತ್ರೆಯನ್ನು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿ ಅಗತ್ಯ ಯಂತ್ರೋಪಕರಣ ಮತ್ತು ತಜ್ಞ ವೈದ್ಯಕೀಯ ಸಿಬ್ಬಂದಿ ಒದಗಿಸಲಾಗಿದೆ. ಕಿದ್ವಾಯಿ ಮಾದರಿಯ ಕ್ಯಾನ್ಸರ್ ಆಸ್ಪತ್ರೆ ಕಾಮಗಾರಿ ಈ ವರ್ಷದ ಅಂತ್ಯದೊಳಗೆ ಮುಕ್ತಾಯಗೊಳ್ಳಲಿದೆ ಎಂದರು.
ಸಮಾರಂಭದಲ್ಲಿ ಶಾಸಕರುಗಳಾದ ಎಸ್.ಎನ್ ಚನ್ನಬಸಪ್ಪ,ಡಾ.ಧನಂಜಯ ಸರ್ಜಿ, ಡಿ.ಎಸ್ ಅರುಣ್, ಬಲ್ಕೀಸ್ ಬಾನು ಹಾಗೂ ವಿವಿಧ ಅಭಿವೃದ್ಧಿ ನಿಗಮಗಳ ಅಧ್ಯಕ್ಷರುಗಳು, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಕಟ್ಟಿ, ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ, ಜಿಪಂ ಸಿಇಓ ಹೇಮಂತ್ ಕುಮಾರ್ ಸೇರಿದಂತೆ ಹಲವರಿದ್ದರು






