T20 ವಿಶ್ವಕಪ್ ವಿಜಯೋತ್ಸವದ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಹಾರ್ದಿಕ್ ಪಾಂಡ್ಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ದೂರು

ಪುಣೆ, ಮಾ.12 : ಅಹಮದಾಬಾದ್ ನ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ವಿಜಯೋತ್ಸವದ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ವಕೀಲರು ಪುಣೆ ಪೊಲೀಸರಿಗೆ ದೂರು ನೀಡಿದ್ದಾರೆ.
ಪುಣೆಯ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ವಕೀಲ ವಾಜಿದ್ ಖಾನ್ ಬುಧವಾರ ದೂರು ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಆದರೆ ಪ್ರಕರಣದ ಕುರಿತು ಹೆಚ್ಚಿನ ವಿವರಗಳನ್ನು ನೀಡಲು ಅವರು ನಿರಾಕರಿಸಿದ್ದಾರೆ. ರವಿವಾರ ನ್ಯೂಜಿಲೆಂಡ್ ವಿರುದ್ಧ ಭಾರತ ಸಾಧಿಸಿದ ಗೆಲುವಿನ ಸಂಭ್ರಮಾಚರಣೆಯ ವೇಳೆ ಪಾಂಡ್ಯ ತಮ್ಮ ದೇಹದ ಸುತ್ತ ತ್ರಿವರ್ಣ ಧ್ವಜವನ್ನು ಸುತ್ತಿಕೊಂಡು ಅಶ್ಲೀಲ ವರ್ತನೆ ತೋರಿದ್ದಾರೆ ಎಂದು ಖಾನ್ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ.
“ಈ ಕೃತ್ಯವು ಸಂಬಂಧಿತ ಕಾನೂನಿನ ಅಡಿಯಲ್ಲಿ ಅಪರಾಧವಾಗಿದೆ. ಆದ್ದರಿಂದ ಕಾನೂನು ಕ್ರಮ ಕೈಗೊಳ್ಳಬೇಕು. ರಾಷ್ಟ್ರಧ್ವಜದ ಘನತೆಯನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ” ಎಂದು ದೂರಿನ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.




