ಬೇರೊಂದು ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆಗೆ ಕೋರಿ ಪ್ರಜ್ವಲ್ ಅರ್ಜಿ; ಪ್ರಾಸಿಕ್ಯೂಷನ್ಗೆ ನೋಟಿಸ್

ಬೆಂಗಳೂರು : ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ತಮ್ಮ ವಿರುದ್ಧದ ಅತ್ಯಾಚಾರ ಆರೋಪದ ಕ್ರಿಮಿನಲ್ ಪ್ರಕರಣಗಳನ್ನು ಮತ್ತೊಂದು ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿ ಸಂಬಂಧ ಪ್ರಾಸಿಕ್ಯೂಷನ್ಗೆ ನೋಟಿಸ್ ಜಾರಿಗೊಳಿಸಿ ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಗಳ ಪ್ರಧಾನ ನ್ಯಾಯಾಧೀಶರು ಆದೇಶಿಸಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ಪರ ಹಾಜರಾಗಿದ್ದ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಅವರ ಮನವಿಯನ್ನು ಶುಕ್ರವಾರ ಆಲಿಸಿದ ಪ್ರಧಾನ ನ್ಯಾಯಾಧೀಶ ಬಿ ಮುರಳೀಧರ ಪೈ ಅವರು ಪ್ರತಿವಾದಿ ಪ್ರಾಸಿಕ್ಯೂಷನ್ಗೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದರು.
ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಈಗಾಗಲೇ ತನ್ನ ವಿರುದ್ಧದ ಒಂದು ಪ್ರಕರಣದಲ್ಲಿ ನೀಡಿರುವ ತೀರ್ಪಿನಲ್ಲಿ ಪೂರ್ವಗ್ರಹ ಭಾವನೆ ಹೊಂದಿರುವ ಅಂಶಗಳಿವೆ. ಇದು ಅವರ ಅನ್ಯಾಯದ ಧೋರಣೆಯನ್ನು ಪ್ರತಿಬಿಂಬಿಸುತ್ತದೆ. ಆದ್ದರಿಂದ, ಅಪರಾಧ ದಂಡ ಪ್ರಕ್ರಿಯಾ ಸಂಹಿತೆ–1973ರ (ಸಿಆರ್ಪಿಸಿ) ಸೆಕ್ಷನ್ 408ರ ಅಡಿಯಲ್ಲಿ ಸದ್ಯ ನಡೆಯುತ್ತಿರುವ ಮತ್ತೆರಡು ಪ್ರಕರಣಗಳ ವಿಚಾರಣೆಯನ್ನು ನಗರದ ಮತ್ತೊಂದು ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲು ಆದೇಶಿಸಬೇಕು ಎಂದು ಪ್ರಜ್ವಲ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ಪರ ವಕೀಲ ಬಿ ಎಂ ಗಿರೀಶ್ ಕುಮಾರ್ ವಕಾಲತ್ತು ವಹಿಸಿದ್ದಾರೆ. ಮನೆಗೆಲಸದ ಮಧ್ಯವಯಸ್ಕ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ತೀರ್ಮಾನಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವನಪರ್ಯಂತ ಜೈಲು ಶಿಕ್ಷೆ ವಿಧಿಸಿದೆ.







