ವಿದ್ಯಾರ್ಥಿ ವೇತನ ಪಾವತಿಗೆ ಬಜೆಟ್ ನಲ್ಲಿ 105 ಕೋಟಿ ರೂ.ಅನುದಾನ: ಸಚಿವ ಶಿವರಾಜ ತಂಗಡಗಿ

ಬೆಳಗಾವಿ: ‘ಪ್ರಸಕ್ತ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಕೇಂದ್ರದ ಪಾಲು 40 ಕೋಟಿ ರೂ.ಮತ್ತು ರಾಜ್ಯದ ಪಾಲು 65ಕೋಟಿ ರೂ.ಸೇರಿದಂತೆ 105 ಕೋಟಿ ರೂ. ಅನುದಾನವನ್ನು ಆಯವ್ಯಯದಲ್ಲಿ ನಿಗದಿಪಡಿಸಲಾಗಿದೆ. ಮಾರ್ಗಸೂಚಿಯನ್ವಯ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿಸಲು ಕ್ರಮ ವಹಿಸಲಾಗುತ್ತಿದೆ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ಬುಧವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ಎಚ್.ಡಿ. ತಮ್ಮಯ್ಯ ಕೇಳಿದ ಪ್ರಶ್ನೆಗೆ ಉತ್ತಿರಿಸಿದ ಅವರು, ‘ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ನಡೆಯುತ್ತಿರುವ ವಸತಿ ನಿಲಯಗಳ ಕಟ್ಟಡ ನಿರ್ವಹಣೆಗೆ ಅಗತ್ಯಕ್ಕೆ ತಕ್ಕಂತೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಬೇರೆ ಬೇರೆ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವ ಪ್ರಸ್ತಾವನೆಗಳ ಬಗ್ಗೆ ಪರಿಶೀಲಿಸಿ ಅನುದಾನ ಲಭ್ಯತೆಯ ಆಧಾರದ ಮೇಲೆ ಹಣ ಬಿಡುಗಡೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
2023-24ನೇ ಸಾಲಿನಲ್ಲಿ ಇಲಾಖೆಯ ಒಟ್ಟು 1,203 ವಿದ್ಯಾರ್ಥಿನಿಲಯಗಳ ಕಟ್ಟಡ ದುರಸ್ತಿ ಕಾಮಗಾರಿಗಳನ್ನು 150 ಕೋಟಿ ರೂ.ವೆಚ್ಚದಲ್ಲಿ ಕೈಗೊಳ್ಳಲು ಮಂಜೂರಾತಿ ನೀಡಿದ್ದು ಇವುಗಳಲ್ಲಿ ಬಂಗಾರಪೇಟೆಯ 3 ವಿದ್ಯಾರ್ಥಿ ನಿಲಯ ಕಟ್ಟಡಗಳ ದುರಸ್ತಿ ಕಾಮಗಾರಿಗಳು ಒಳಗೊಂಡಿರುತ್ತವೆ ಎಂದು ಉತ್ತರಿಸಿದರು.
175 ಕೋಟಿ ರೂ.ಅನುದಾನ: ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ 2023-24ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣ ಕಾರ್ಯಕ್ರಮದಡಿ 175 ಕೋಟಿ ರೂ.ಅನುದಾನ ಒದಗಿಸಲಾಗಿದೆ ಎಂದು ಅವರು ಸದಸ್ಯರ ಪ್ರಶ್ನೆಗೆ ಉತ್ತರಿಸಿದರು.







