ಗ್ರಾಮೀಣ ಪ್ರದೇಶದಲ್ಲಿ ಶೇ.90ರಷ್ಟು ಜನರು ಸಮೀಕ್ಷೆಗೆ ಸಹಕಾರ ನೀಡಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (Photo: X/@DKShivakumar)
ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಶೇ.90ರಷ್ಟು ಜನರು ಸಮೀಕ್ಷೆಗೆ ಸಹಕಾರ ನೀಡಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ತರಬೇತಿ ಹಾಗೂ ಚುನಾವಣಾ ಆಯೋಗದ ಕೆಲಸಗಳ ಹಿನ್ನೆಲೆಯಲ್ಲಿ ಸಮೀಕ್ಷೆಯನ್ನು ಸ್ವಲ್ಪ ತಡವಾಗಿ ಆರಂಭಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು, ಐದೂ ನಗರ ಪಾಲಿಕೆಗಳ ಆಯುಕ್ತರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜತೆಗೆ ಸಭೆ ಮಾಡಿ ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.
ರಾಜ್ಯದಲ್ಲಿರುವ ಎಲ್ಲ ಜನರಿಗೆ ನ್ಯಾಯ ಒದಗಿಸಿಕೊಡಲು ಸರಕಾರ ಸಮೀಕ್ಷೆ ನಡೆಸುತ್ತಿದೆ. ಬೆಂಗಳೂರು ನಗರದಲ್ಲಿರುವ ಜನರು ಈ ಸಮೀಕ್ಷೆಗೆ ಸಂಪೂರ್ಣ ಸಹಕಾರ ನೀಡಬೇಕು. ಈ ಸಮೀಕ್ಷೆಯಲ್ಲಿ ಆನ್ ಲೈನ್ ಮೂಲಕ ಭಾಗವಹಿಸಿಯೂ ಸಾರ್ವಜನಿಕರು ಮಾಹಿತಿ ಸಲ್ಲಿಸಬಹುದು. ನಿಮಗೆ ಇಚ್ಛೆಯಿರುವಷ್ಟು ಮಾಹಿತಿ ನೀಡಬಹುದು. ಇಲ್ಲಿ ಸರಕಾರ ಹೆಚ್ಚಿನ ಒತ್ತಡ ಹಾಕುವುದಿಲ್ಲ ಎಂದು ಅವರು ತಿಳಿಸಿದರು.
ಗ್ರಾಮೀಣ ಭಾಗದ ಜನರ ಬದುಕಿನ ಪ್ರಗತಿ ಬಗ್ಗೆ ಅರಿಯಲು ಕೆಲವು ಪ್ರಶ್ನೆಗಳನ್ನು ಸೇರಿಸಲಾಗಿದೆ. ಅನೇಕರು ಗ್ರಾಮೀಣ ಭಾಗದಿಂದ ಬಂದು ಇಲ್ಲಿ ವಾಸವಾಗಿದ್ದಾರೆ. ಇವರ ಜೀವನದಲ್ಲಿ ಶೈಕ್ಷಣಿಕ ಪರಿಸ್ಥಿತಿ, ಆರ್ಥಿಕ ಶಕ್ತಿ ಬಗ್ಗೆ ತಿಳಿಯಲು ಸರಕಾರ ಪ್ರಯತ್ನಿಸುತ್ತಿದೆ. ಇದಕ್ಕೆ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.
ನಾವು ಯಾರನ್ನೂ ವಿಭಜಿಸುವುದಿಲ್ಲ:
ಲಿಂಗಾಯತ ಧರ್ಮದ ವಿಚಾರವಾಗಿ ಕಾಂಗ್ರೆಸ್ ನಲ್ಲೇ ಭಿನ್ನಮತವಿದೆ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ಯಾರನ್ನೂ ವಿಭಜಿಸುವುದಿಲ್ಲ. ಈ ವಿಚಾರ ಆ ಸಮಾಜಕ್ಕೆ ಹಾಗೂ ಜನರಿಗೆ ಬಿಡುತ್ತೇವೆ. ಈ ಸಮುದಾಯದ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ನಾವು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವಿಚಾರವಾಗಿ ಮಾತ್ರ ಅವರ ಸಮುದಾಯದ ಗುರುತು ಕೇಳುತ್ತಿದ್ದೇವೆ. ಇದರ ಹೊರತಾಗಿ ನಮ್ಮ ಮುಂದೆ ಬೇರೆ ಯಾವುದೆ ಆಲೋಚನೆಗಳಿಲ್ಲ. ಅವುಗಳ ಬಗ್ಗೆ ನಾವು ಚಿಂತಿಸುವುದಿಲ್ಲ ಎಂದು ಹೇಳಿದರು.







