ಸಂಪೂರ್ಣ ಸ್ತಬ್ಧವಾದ ಸಿಲಿಕಾನ್ ಸಿಟಿ, ಕೆಲವೆಡೆ ತಟ್ಟದ ಬಂದ್ ಬಿಸಿ..!
ಪ್ರತಿಭಟನಾಕಾರರ ಬಂಧನ, ಬಿಎಂಟಿಸಿ ಬಸ್ಸಿಗೆ ಹಾನಿ ► ʼಕರ್ನಾಟಕ ಬಂದ್ʼ ಸಂಪೂರ್ಣ ಚಿತ್ರಣ ಇಲ್ಲಿದೆ...

ಬೆಂಗಳೂರು, ಸೆ.29: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ಕನ್ನಡ ಒಕ್ಕೂಟ ಶುಕ್ರವಾರ ಕರೆ ನೀಡಿದ್ದ ಅಖಂಡ ಕರ್ನಾಟಕ ಬಂದ್ ಹೋರಾಟವೂ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ.
ಮಂಗಳವಾರವಷ್ಟೇ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಬಂದ್ಗೆ ಕರೆ ಕೊಟ್ಟಾಗ ವಿವಿಧ ಸಂಘಟನೆಗಳ ಮುಖಂಡರಿಗೆ, ರಾಜಕೀಯ ಪಕ್ಷಗಳ ಮುಖಂಡರಿಗೆ, ಸಾರ್ವಜನಿಕರಿಗೆ ಅಖಂಡ ಕರ್ನಾಟಕ ಬಂದ್ ಯಶಸ್ವಿಯಾಗುವ ವಿಶ್ವಾಸ ಇರಲಿಲ್ಲ. ಆದರೆ, ಕಡಿಮೆ ಅವಧಿಯಲ್ಲಿ ಆಯೋಜನೆಗೊಂಡ ಶುಕ್ರವಾರ ಬಂದ್ಗೆ ರಾಜಧಾನಿ ಬೆಂಗಳೂರು ಒಳಗೊಂಡತೆ ಬಹುತೇಕ ಜಿಲ್ಲೆಗಳಲ್ಲೂ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಯಿತು.
ವರ್ತಕರು, ಸಂಘಟನೆಗಳು, ಆಟೊ, ಖಾಸಗಿ ಬಸ್ ಚಾಲಕರು, ವಕೀಲರು, ವಿದ್ಯಾರ್ಥಿಗಳು ತೋರಿದ ಪ್ರತಿಕ್ರಿಯೆ ರೈತ ಹಿತರಕ್ಷಣಾ ಸಮಿತಿಯ ನಿರೀಕ್ಷೆಯನ್ನೂ ಮೀರಿಸಿತು. ಇಡೀ ಬಂದ್ನಲ್ಲಿ ತಮಿಳುನಾಡಿಗೆ ನೀರು ಹರಿಸುತ್ತಿರುವ ಕೇಂದ್ರ ಹಾಗೂ ರಾಜ್ಯ ಸರಕಾರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಯಿತು.
ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ಕೆಲ ಭಾಗ, ಅಂತರರಾಜ್ಯ ಮಾರ್ಗದ ಸರಕಾರಿ ಬಸ್ ಸಂಚಾರ ಇಲ್ಲದೆ ಪ್ರಯಾಣಿಕರು ಪರದಾಡಿದರು. ನಗರದ ಬಸ್ ನಿಲ್ದಾಣದಿಂದ ಬೆಳಿಗ್ಗೆ ಸಂಚಾರ ಆರಂಭಿಸಿದ್ದವು. ಆದರೆ ಹೋರಾಟದ ತೀವ್ರತೆ ಹೆಚ್ಚಾದಾಗ ಬಸ್ಗಳು ಸಂಚಾರ ಸ್ಥಗಿತಗೊಳಿಸಿದವು. ಸಾರಿಗೆ ಬಸ್ ನಿಲ್ದಾಣಕ್ಕೆ ಬಸ್ಗಳು ಬಾರದ ಹಿನ್ನೆಲೆಯಲ್ಲಿ ನಿಲ್ದಾಣ ಬಿಕೋ ಎನ್ನುತ್ತಿತ್ತು. ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರದಿಂದ ಇತರೆ ಪಟ್ಟಣ, ಗ್ರಾಮೀಣ ಪ್ರದೇಶಕ್ಕೆ ತೆರಳಬೇಕಾದ ಪ್ರಯಾಣಿಕರು ಬಸ್ಗಾಗಿ ಕಾದು ಪರದಾಡಿದರು.
ಅದರಲ್ಲೂ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರು, ತುಮಕೂರು, ಹಾಸನ, ಚಿತ್ರದುರ್ಗ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಕರ್ನಾಟಕ ಬಂದ್ಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಉತ್ತರ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿಯೂ ಬಂದ್ ಬಿಸಿ ಜನರಿಗೆ ತಟ್ಟಿದ್ದ, ಇಲ್ಲಿನ ಯಾದಗಿರಿ ಜಿಲ್ಲೆಯ ಶಹಾಪುರದ ಬಸವೇಶ್ವರ ವೃತ್ತದಲ್ಲಿ ಉರುಳು ಸೇವೆ ಮಾಡುವ ಮೂಲಕ ಕನ್ನಡ ಪರ ಹಾಗೂ ರೈತ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಹಾಗೇ, ರಾಮನಗರದಲ್ಲಿ ಕೆಂಪೇಗೌಡ ಸರ್ಕಲ್ನಿಂದ ಐಜೂರು ವೃತ್ತದವರೆಗೆ ಎಮ್ಮೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರ ಅಂಟಿಸಿ ಮೆರವಣಿಗೆ ನಡೆಸಲಾಯಿತು. ಚಾಮರಾಜನಗರದ ಸಿದ್ಧಾರ್ಥ ಚಿತ್ರಮಂದಿರದಲ್ಲಿ ನಿನ್ನೆ ತೆರೆ ಕಂಡಿದ್ದ ತಮಿಳು ಚಿತ್ರ ಚಂದ್ರಮುಖಿ-2 ಚಿತ್ರದ ಪೋಸ್ಟರ್ ಹರಿದು ಕನ್ನಡಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಬಂದ್ ಆಗದ ಕೊಡಗು ಜಿಲ್ಲೆ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಪ್ರತಿಭಟಿಸಿ ಕನ್ನಡ ಪರ ಹಾಗೂ ರೈತ ಸಂಘಟನೆಗಳು ಕರ್ನಾಟಕ ಬಂದ್ ಆಚರಣೆಗೆ ಕರೆ ನೀಡಿದ್ದರೂ, ಕಾವೇರಿ ನದಿಯ ಉಗಮ ಸ್ಥಾನ ಕೊಡಗು ಜಿಲ್ಲೆಯಲ್ಲಿ ಮಾತ್ರ ಬಂದ್ ವಾತಾವರಣ ಇಲ್ಲವಾಗಿತ್ತು. ಇಡೀ ಜಿಲ್ಲೆಯಲ್ಲಿ ಜನಜೀವನ ಸಹಜವಾಗಿತ್ತು. ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ಶಾಲಾ, ಕಾಲೇಜುಗಳಿಗೆ ರಜೆ ಇರಲಿಲ್ಲ. ಸಂಚಾರ ವ್ಯವಸ್ಥೆಯಲ್ಲಿಯೂ ಯಾವುದೆ ವ್ಯತ್ಯಯವಾಗಿರಲಿಲ್ಲ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ, ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲೂ ಬಂದ್ಗೆ ನೀರಸ ಪ್ರತಿಕ್ರಿಯೆಯಿತ್ತು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಹಾಗೂ ಚಿಕ್ಕೋಡಿಯಲ್ಲಿ ಬಂದ್ ಕೇವಲ ಪ್ರತಿಭಟನೆ ಹಾಗೂ ಮನವಿ ಸಲ್ಲಿಕೆಗೆ ಸೀಮಿತವಾಗಿತ್ತು.
ಬಹುತೇಕ ಕಡೆಗಳಲ್ಲಿ ಕಾವೇರಿ ಹೋರಾಟ ಹತ್ತಿಕ್ಕಲು ಪೊಲೀಸರು ಯತ್ನಿಸಿದ್ದಾರೆ ಎಂದು ಹೋರಾಟಗಾರರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಂದ್ ಹಿನ್ನೆಲೆಯಲ್ಲಿ ಪ್ರತಿಭಟನೆಯ ಕೇಂದ್ರ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಪೊಲೀಸರೇ ಬಂದ್ ಮಾಡಿದ್ದರು.ಆಯಾ ಜಿಲ್ಲಾ ಕೇಂದ್ರಗಳಲ್ಲಿನ ವೃತ್ತದ ಕಡೆಗೆ ನಾಲ್ಕು ದಿಕ್ಕಿನಲ್ಲೂ ಯಾವುದೇ ವಾಹನ ಸಂಚಾರ ಮಾಡದಂತೆ ಕಾವೇರಿ ಹೋರಾಟ ಹತ್ತಿಕ್ಕಲು ಪೆÇಲೀಸರು ಯತ್ನಿಸಿದ್ದಾರೆ ಎಂದು ಹೋರಾಟಗಾರರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರಮುಖವಾಗಿ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸ ಕ್ರಮ ಕಾವೇರಿ ಹೋರಾಟಗಾರರನ್ನು ರೊಚ್ಚಿಗೆಬ್ಬಿಸಿತು. ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ಪೊಲೀಸರು ರಸ್ತೆ ಬಂದ್ ಮಾಡಿದಲ್ಲದೆ, ಉದ್ದೇಶಪೂಕರವಾಗಿ ನೂರಾರು ಹೋರಾಟಗಾರರನ್ನು ಬಂಧಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ʼಜನ, ಜಾನುವಾರುಗಳಿಗೆ ಕುಡಿಯಲು ನೀರಿಲ್ಲದ ಸ್ಥಿತಿಯಲ್ಲಿ ನಾವಿದ್ದರೆ, ತಮಿಳುನಾಡಿನವರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲು ನೀರು ಕೇಳುತ್ತಿದ್ದಾರೆ. ಜಲಾಶಯಗಳಲ್ಲಿ ನೀರು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದರೆ ಕೊಡೋಣ, ಅವರೇನೂ ನಮ್ಮ ವೈರಿಗಳಲ್ಲ. ಆದರೆ, ನಮ್ಮ ಸಂಕಷ್ಟದ ಪರಿಸ್ಥಿತಿಯನ್ನು ಅವರು ಅರ್ಥ ಮಾಡಿಕೊಳ್ಳಬೇಕಲ್ಲವೇ?ʼ
-ದರ್ಶನ್ ಪುಟ್ಟಣ್ಣಯ್ಯ, ರೈತ ಮುಖಂಡ ಹಾಗೂ ಶಾಸಕ
ಬಿಎಂಟಿಸಿ ಬಸ್ಸಿಗೆ ಹಾನಿ..!
ಕರ್ನಾಟಕ ಬಂದ್ ಹಿನ್ನೆಲೆ, ನಗರದ ಪುರಭವನ(ಟೌನ್ಹಾಲ್) ಎದುರು ಜಮಾಯಿಸಿ ಮೆರವಣಿಗೆ ನಡೆಸಲು ಮುಂದಾಗಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಬಿಎಂಟಿಸಿ ಬಸ್ ಮೂಲಕ ಫ್ರೀಡಂ ಪಾರ್ಕ್ವರೆಗೆ ಕರೆದೊಯ್ಯುವ ವೇಳೆಯಲ್ಲಿ ಸಿಟ್ಟಿಗೆದ್ದ ಕೆಲ ಪ್ರತಿಭಟನಾಕಾರರು ಕಲ್ಲಿನಲ್ಲಿ ಬಸ್ಸಿನ ಗಾಜು ಒಡೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ವರದಿಯಾಗಿದೆ.
ಕೆಲವೆಡೆ ತಟ್ಟದ ಬಂದ್ ಬಿಸಿ..!
ಕರ್ನಾಟಕ ಬಂದ್ಗೆ ಯಾದಗಿರಿ, ರಾಯಚೂರು, ಕಲಬುರ್ಗಿ, ಬೀದರ್ ಸೇರಿದಂತೆ ಇನ್ನಿತರೆ ನಗರದಲ್ಲಿ ಬಂದ್ ಬಿಸಿ ತಟ್ಟಲಿಲ್ಲ. ಎಂದಿನಂತೆ ಅಂಗಡಿ ಮುಂಗಟ್ಟುಗಳು ವ್ಯಾಪಾರ ತೆರೆದಿವು. ಖಾಸಗಿ ವಾಹನ, ಆಟೊ ಸಂಚಾರ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಖಾಸಗಿ ವಾಹನಗಳ ಸಂಚಾರ ಯಥಾಸ್ಥಿತಿಯಿದ್ದು, ಜನರು ಎಂದಿನಂತೆ ತಮ್ಮ ಕೆಲಸದಲ್ಲಿ ತೊಡಗಿರುವ ದೃಶ್ಯ ಕಂಡಬಂದಿತು.
.ಸಂಪೂರ್ಣ ಸ್ತಬ್ಧವಾದ ಸಿಲಿಕಾನ್ ಸಿಟಿ..!
ಅಖಂಡ ಕರ್ನಾಟಕ ಬಂದ್ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದ್ದು, ಇಡೀ ದಿನ ಸ್ತಬ್ಧವಾಗಿತ್ತು. ಮಾರುಕಟ್ಟೆ, ಮಾಲ್ಗಳು ಸೇರಿದಂತೆ ವಾಣಿಜ್ಯ ಚಟುವಟಿಕೆಗಳು ಸಹ ನಿಂತಿದ್ದವು.
ಅಲ್ಲಲ್ಲಿ ಬಿಎಂಟಿಸಿ ಬಸ್ಗಳ ಓಡಾಟ ಕಂಡಬಂದರೂ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು. ಇನ್ನೂ, ಬಹುತೇಕರು ಬಸ್ಗಳಿಗೆ ಕಾದು ಕಾಲ್ನಾಡಿಯಲ್ಲಿಯೇ ಪ್ರಯಾಣ ಬೆಳೆಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಪುರಭವನ, ವಿಧಾನಸೌಧ, ರಾಜಭವನ, ಬಿಬಿಎಂಪಿ, ಸರಕಾರಿ ಕಚೇರಿಗಳ ಬಳಿ ಪೊಲೀಸ್ ಬಂದೋಬಸ್ತ್ ಹೆಚ್ಚಾಗಿತ್ತು.







