ರಾಜ್ಯದಲ್ಲಿ 1.5 ಲಕ್ಷ ಕೋಟಿ ರೂ.ಹೆಚ್ಚುವರಿ ಬಂಡವಾಳ ಹೂಡಿಕೆ: ಸಿದ್ದರಾಮಯ್ಯ

Photo: X/@siddaramaiah
ಬೆಂಗಳೂರು: ಕರ್ನಾಟಕ ರಾಜ್ಯದ ವ್ಯಾಪಿಯಲ್ಲಿ ಸರಿ ಸುಮಾರು 1.5 ಲಕ್ಷ ಕೋಟಿ ರೂಪಾಯಿಗಳಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ವಿವಿಧ ಹಂತದಲ್ಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ವರ್ಷದ ಆರಂಭದಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 10.27 ಲಕ್ಷ ಕೋಟಿ ಹೂಡಿಕೆ ಆಕರ್ಷಿಸಲಾಗಿದ್ದು, ಈಗಾಗಲೇ ಶೇ.60ರಷ್ಟು ಹೂಡಿಕೆಗಳು ಅನುಷ್ಠಾನ ಹಂತದಲ್ಲಿವೆ. ಸುಮಾರು 1.5ಲಕ್ಷ ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ವಿವಿಧ ಹಂತದಲ್ಲಿವೆ ಎಂದರು.
ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಇದಕ್ಕಾಗಿ ಭೂ ಬಳಕೆ ಬದಲಾವಣೆ ಪ್ರಕ್ರಿಯೆ ಸೇರಿದಂತೆ ವಿವಿಧ ಎನ್ಒಸಿಗಳ ನೀಡಿಕೆಯ ಕಾಲಮಿತಿಯನ್ನು ಕಡಿಮೆ ಮಾಡಬೇಕು. ಕಾಲಮಿತಿಯನ್ನು ಕಡಿಮೆ ಮಾಡುವ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಅಗ್ನಿಶಾಮಕ ಇಲಾಖೆ ಅನುಮೋದನೆ ವಿಳಂಬವಾಗುತ್ತಿದ್ದು, ಇದನ್ನು ತ್ವರಿತಗೊಳಿಸಬೇಕು. ಇದಕ್ಕಾಗಿ ಮಂಡಳಿಯ ನಿಯಮಾವಳಿಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಬೇಕು ಎಂದ ಅವರು, ಕೈಗಾರಿಕೆಗಳಿಗೆ ರಸ್ತೆ, ನೀರು, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವ ಕುರಿತಾಗಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದೂ ಅವರು ಸೂಚಿಸಿದರು.
ಹಸಿರು ಇಂಧನ ಮೂಲಗಳಿಂದ ಕೈಗಾರಿಕೆಗಳಿಗೆ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಅಸಾಂಪ್ರದಾಯಿಕ ಇಂಧನ ಮೂಲಗಳಿಗೆ ಆದ್ಯತೆ ನೀಡಬೇಕು. ಇದಕ್ಕಾಗಿ ವ್ಯವಸ್ಥಿತ ಯೋಜನೆ ರೂಪಿಸಬೇಕು. ಏಕಗವಾಕ್ಷಿ ವ್ಯವಸ್ಥೆಯಡಿ ಅರ್ಜಿಗಳ ವಿಲೇವಾರಿ ಆಗುತ್ತಿಲ್ಲ ಎಂದು ದೂರುಗಳಿವೆ. ಎಲ್ಲ ಸೇವೆಗಳನ್ನು ನೀಡಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ 29 ಸೇವೆಗಳು ಏಕಗವಾಕ್ಷಿ ವ್ಯವಸ್ಥೆಯಿಂದ ಹೊರಗಿದ್ದು, ಅವುಗಳನ್ನು ಸಹ ಇದರಡಿ ತರಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಕರ್ನಾಟಕ ದೇಶದಲ್ಲೇ ಪ್ರಗತಿಪರ ರಾಜ್ಯವಾಗಿದ್ದು, ಬಂಡವಾಳ ಹೂಡಿಕೆಗೆ ಪೂರಕವಾದ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಯಾವುದೇ ಕಾರಣಕ್ಕೂ ಅನುಮೋದನೆಗಳ ನೀಡಿಕೆಯಲ್ಲಿ ವಿಳಂಬಕ್ಕೆ ಅವಕಾಶ ನೀಡಬಾರದು. ಈ ಕುರಿತು ಮುಖ್ಯ ಕಾರ್ಯದರ್ಶಿ ಎಲ್ಲ ಇಲಾಖೆಗಳಿಗೆ ಸೂಕ್ತ ನಿರ್ದೇಶನಗಳನ್ನು ಜಾರಿಗೊಳಿಸಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದರು.
ಕೈಗಾರಿಕಾ ಸ್ನೇಹಿ ವ್ಯವಸ್ಥೆಯನ್ನು ಉತ್ತಮಪಡಿಸಲು ಕಾನೂನು ಮತ್ತು ನಿಯಮಾವಳಿಗಳಿಗೆ ಅಗತ್ಯ ತಿದ್ದುಪಡಿಗಳನ್ನು ತರುವ ನಿಟ್ಟಿನಲ್ಲಿ ಸಚಿವ ಸಂಪುಟದಲ್ಲಿ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಅವರು ಸಭೆಯಲ್ಲಿ ಉಲ್ಲೇಖಿಸಿದರು.
ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಬಿ. ಪಾಟೀಲ್, ಕೆ.ಜೆ.ಜಾರ್ಜ್,ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಝ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಹಾಗೂ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳಿದ್ದರು.
ಕೇಂದ್ರ ಸರಕಾರ 2 ಪ್ರಮುಖ ಕಾರ್ಮಿಕ ಸುಧಾರಣೆಗಳ ಅನುಷ್ಠಾನವನ್ನು ಪ್ರಸ್ತಾಪಿಸಿದ್ದು, ಕಾರ್ಮಿಕರ ಕೆಲಸದ ಅವಧಿಯನ್ನು ಮರು ನಿಗದಿಪಡಿಸುವ ಸಂದರ್ಭದಲ್ಲಿ ಕಾರ್ಮಿಕರ ಹಿತವನ್ನು ಗಮನದಲ್ಲಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯಲ್ಲಿ ಉಲ್ಲೇಖಿಸಿದರು.







