ಬೆಂಗಳೂರಿನಲ್ಲಿ ಭಾರತದ ಮೊದಲ ಸರಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯ ಸ್ಥಾಪನೆ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಬೆಂಗಳೂರಿನಲ್ಲಿ ಭಾರತದ ಮೊದಲ ಸರಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಆರಂಭಿಸುವುದಾಗಿ ಸಿಎಂ ಡಿ ಕೆ ಶಿವಕುಮಾರ್ ಅವರು ಘೋಷಿಸಿದರು.
ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಮಂಗಳವಾರ ನಡೆದ ಗೂಗಲ್ ಐಓ ಕನೆಕ್ಟ್ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.
"ಕರ್ನಾಟಕವನ್ನು 'ಎಐ-ನೇಟಿವ್' ರಾಜ್ಯವನ್ನಾಗಿ ರೂಪಿಸುವುದು ಮತ್ತು ಆಡಳಿತ ಹಾಗೂ ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ಎಐ ತಂತ್ರಜ್ಞಾನವನ್ನು ಸಂಯೋಜಿಸುವುದು. ಎಐ ಪ್ರತಿಭೆಗಳನ್ನು ಅಭಿವೃದ್ಧಿಪಡಿಸಲು, ಸುಧಾರಿತ ಸಂಶೋಧನೆಯನ್ನು ಉತ್ತೇಜಿಸಲು ಮತ್ತು ಶಿಕ್ಷಣ ಸಂಸ್ಥೆಗಳು, ಉದ್ಯಮ ಹಾಗೂ ಸರ್ಕಾರದ ನಡುವೆ ಸಹಯೋಗವನ್ನು ಬೆಳೆಸಲು ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು" ಎಂದು ಹೇಳಿದರು.
"ಎಐ-ಸಹಾಯದ ಬೋಧನೆಯ ಮೂಲಕ ಶಿಕ್ಷಣ ಕ್ಷೇತ್ರ, ರೋಗಗಳ ಮುಂಚಿತ ಪತ್ತೆ ಮತ್ತು ಉತ್ತಮ ವೈದ್ಯಕೀಯ ಬೆಂಬಲದ ಮೂಲಕ ಆರೋಗ್ಯ ಕ್ಷೇತ್ರ, ರೈತರಿಗೆ ಎಐ-ಚಾಲಿತ ಸಲಹಾ ಸೇವೆಗಳ ಮೂಲಕ ಕೃಷಿ ಕ್ಷೇತ್ರ, ವೇಗದ ಮತ್ತು ಜನಸ್ನೇಹಿ ವಿತರಣೆಯ ಮೂಲಕ ಸರ್ಕಾರಿ ಸೇವೆಗಳು, ಎಐ ಪರಿಕರಗಳನ್ನು ಬಳಸಿಕೊಂಡು ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ಮೂಲಕ ಸಣ್ಣ ಉದ್ಯಮಗಳಲ್ಲಿ ಬದಲಾವಣೆ ತರಲಾಗುವುದು" ಎಂದು ತಿಳಿಸಿದರು.
ತಂತ್ರಜ್ಞಾನ ಬೆಂಗಳೂರಿನ ದೈನಂದಿನ ಭಾಗ
"ಭಾರತದ ನಾವೀನ್ಯತೆಯ ರಾಜಧಾನಿ ಮತ್ತು ವಿಶ್ವದ ಅತ್ಯಂತ ರೋಮಾಂಚಕ ತಂತ್ರಜ್ಞಾನ ಪರಿಸರ ವ್ಯವಸ್ಥೆಗಳಲ್ಲಿ ಒಂದಾದ ಬೆಂಗಳೂರಿನಲ್ಲಿ ನಡೆಯುತ್ತಿರುವ ಗೂಗಲ್ ಐ/ಓ ಕನೆಕ್ಟ್ ಇಂಡಿಯಾ 2026 ಕಾರ್ಯಕ್ರಮಕ್ಕೆ ನಿಮ್ಮನ್ನು ಸ್ವಾಗತಿಸಲು ನಾನು ಅತ್ಯಂತ ಹೆಮ್ಮೆಪಡುತ್ತೇನೆ. ಇಂತಹ ಒಂದು ಕಾರ್ಯಕ್ರಮವು ಇಷ್ಟು ಸಹಜವಾಗಿ ಮೂಡಿಬರಲು ವಿಶ್ವದಲ್ಲೇ ಕೆಲವೇ ಕೆಲವು ಸ್ಥಳಗಳಿವೆ. ಬೆಂಗಳೂರಿನಲ್ಲಿ ತಂತ್ರಜ್ಞಾನ ಎಂಬುದು ದೈನಂದಿನ ಜೀವನದ ಭಾಗವಾಗಿದೆ" ಎಂದರು.
ಕಳೆದ ಎರಡು ದಶಕಗಳಿಂದ, ಗೂಗಲ್ ಬೆಂಗಳೂರನ್ನು ಕೇವಲ ಒಂದು ಕಚೇರಿಯ ಸ್ಥಳವಾಗಿ ಮಾತ್ರವಲ್ಲದೆ, ಇಂಜಿನಿಯರಿಂಗ್, ಸಂಶೋಧನೆ ಮತ್ತು ನಾವೀನ್ಯತೆಗಾಗಿ ತನ್ನ ಅತ್ಯಂತ ಪ್ರಮುಖ ಜಾಗತಿಕ ಕೇಂದ್ರಗಳಲ್ಲಿ ಒಂದಾಗಿ ಆಯ್ಕೆ ಮಾಡಿಕೊಂಡಿದೆ.
"ಭಾರತದಲ್ಲಿ ಗೂಗಲ್ 18 ಸಾವಿರ ಸಿಬ್ಬಂದಿ ಹೊಂದಿದ್ದು, ಅದರಲ್ಲಿ 12 ಸಾವಿರ ಸಿಬ್ಬಂದಿ ಬೆಂಗಳೂರಿನಲ್ಲಿದ್ದಾರೆ. ಇದರೊಂದಿಗೆ ಭಾರತದಲ್ಲಿ ಗೂಗಲ್ ನ ಸಿಬ್ಬಂದಿಯ 2/3 ಪ್ರಮಾಣ ಬೆಂಗಳೂರಿನಲ್ಲಿದೆ. ಇದು ನಮ್ಮ ನಗರದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ನಮ್ಮ ಜೊತೆಗೆ ಇಷ್ಟು ಉತ್ತಮ ಸಂಬಂಧ ಹೊಂದಿರುವ ಗೂಗಲ್ ನಾಯಕರು, ನೀತಿ ರೂಪಕರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ" ಎಂದರು.
"ಗೂಗಲ್ ಜೊತೆಗಿನ ಈ ಸಂಬಂಧವನ್ನು ಮತ್ತೊಂದು ಹಂತಕ್ಕೆ ಕೊಂಡೋಯ್ಯಲು, ಬಯಸುತ್ತೇವೆ. ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ನಿಮಗೆ ಎಲ್ಲಾ ರೀತಿಯ ಸಹಕಾರ ನೀಡಲು ನಾವು ಬದ್ಧರಾಗಿದ್ದೇವೆ. ಎಐ ತಂತ್ರಜ್ಞಾನ ಮೂಲಕ ನಮ್ಮ ನಗರದ ಸಂಚಾರ ಸಮಸ್ಯೆಗಳನ್ನು ನಿವಾರಿಸೋಣ. 25 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ 70 ಲಕ್ಷ ಜನಸಂಖ್ಯೆ ಇತ್ತು. ಈಗ 1.40 ಕೋಟಿಗೆ ಏರಿಕೆಯಾಗಿದೆ. ಹೀಗಾಗಿ ಸಂಚಾರ ದಟ್ಟಣೆ ಸಮಸ್ಯೆ ಇದ್ದು, ಇದನ್ನು ನಿವಾರಿಸಲು ನಾವು ಪರಿಹಾರ ಹುಡುಕುತ್ತಿದ್ದೇವೆ" ಎಂದು ಭರವಸೆ ನೀಡಿದರು.






