ಜೆಡಿಎಸ್-ಬಿಜೆಪಿ ಮೈತ್ರಿಯಿಂದ ರಾಜ್ಯದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ: ಎಚ್.ಡಿ.ಕುಮಾರಸ್ವಾಮಿ
ʼʼ5 ವರ್ಷಗಳಲ್ಲಿ ಪರಿಹಾರ ಪಡೆಯದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆʼʼ

ಬೆಂಗಳೂರು, ಅ.1: ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಈ ಮೈತ್ರಿ ಪರಿಹಾರವಾಗಿದೆ. ಮುಂದಿನ ಐದು ವರ್ಷಗಳಲ್ಲಿ ಈ ಸಮಸ್ಯೆಗಳಿಗೆ ಪರಿಹಾರ ಪಡೆಯದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ರವಿವಾರ ರಾಮನಗರ ಜಿಲ್ಲೆಯ ಬಿಡದಿ ಬಳಿಯ ಕೇತಿಗಾನಹಳ್ಳಿಯಲ್ಲಿರುವ ತಮ್ಮ ತೋಟದಲ್ಲಿ ಆಯೋಜಿಸಿದ್ದ ಜೆಡಿಎಸ್ ಪಕ್ಷದ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಜಿಲ್ಲಾಧ್ಯಕ್ಷರು ಹಾಗೂ ಹಿರಿಯ ಮುಖಂಡರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಬಿಜೆಪಿ ಜತೆಗಿನ ಮೈತ್ರಿ ನನ್ನ ಸ್ವಾರ್ಥಕ್ಕೆ ಅಲ್ಲ. ನಾಡಿನ ಹಿತಕ್ಕಾಗಿ. ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಆಗದಂತೆ ಕಾನೂನಿನ ವ್ಯಾಪ್ತಿಯೊಳಗೆ ಈ ಸಮಸ್ಯೆ ಪರಿಹಾರ ಪಡೆಯುವ ಕೆಲಸ ಮಾಡುತ್ತೇನೆ. ಈ ಮೈತ್ರಿಯಿಂದ ರಾಜ್ಯಕ್ಕೆ ಒಳ್ಳೆಯದು ಆಗುತ್ತದೆ. ನಮ್ಮ ನೀರು ಉಳಿಸೋದಕ್ಕೆ ಏನು ಮಾಡಬೇಕು, ಅದನ್ನು ಮಾಡುತ್ತೇನೆ ಎಂದು ಅವರು ಹೇಳಿದರು.
ಕಾಂಗ್ರೆಸ್ ನವರ ರೀತಿಯಲ್ಲಿ ನಾನು ಸುಳ್ಳು ಹೇಳುವುದಿಲ್ಲ. ದೇವೇಗೌಡರ ಮಾರ್ಗದರ್ಶನದಲ್ಲಿ ಈ ಸಮಸ್ಯೆಗಳ ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನಾನು ರೂಪಿಸಿದ್ದ ಜಲಧಾರೆಯಲ್ಲೂ ಅತ್ಯುತ್ತಮ ಪರಿಹಾರ ಇತ್ತು. ಜನರು ಅವಕಾಶ ಕೊಡಲಿಲ್ಲ. ಕಾಂಗ್ರೆಸ್ ಪಕ್ಷವನ್ನು ನಂಬಿ ಮತ ಹಾಕಿದರು ಎಂದು ಕುಮಾರಸ್ವಾಮಿ ಹೇಳಿದರು.
ಆದರೆ ಕಾಂಗ್ರೆಸ್ನವರು ರಾಜ್ಯದ ಜನರಿಗೆ ಕಣ್ಣೀರು ಹಾಕಿಸುತ್ತಿದ್ದಾರೆ. ಹೀಗಾಗಿ ನಾನು ಕೆಲವು ದೃಢ ನಿರ್ಧಾರಗಳನ್ನು ಕೈಗೊಳ್ಳಬೇಕಾಯಿತು. ಕೇಂದ್ರ ಸರಕಾರದ ನೆರವಿನಿಂದ ಎಲ್ಲ ಸಮಸ್ಯೆ, ಯೋಜನೆಗಳಿಗೆ ಪರಿಹಾರ ಮಾಡಿಸುತ್ತೇನೆ. ಒಂದು ವೇಳೆ ಇನ್ನೈದು ವರ್ಷಗಳಲ್ಲಿ ಅದನ್ನು ಮಾಡಿಸದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಅವರು ನುಡಿದರು.
ನಮ್ಮ ಪಕ್ಷ ಬಲವಾಗಿದೆ, ಒಗ್ಗಟ್ಟಾಗಿದೆ ಎನ್ನುವುದಕ್ಕೆ ಈ ಸಭೆ ಸಾಕ್ಷಿ. ಗೆದ್ದವರು, ಸೋತವರು ಸಂಕಟದಲ್ಲಿ ಇದ್ದೀರಿ, ಅದನ್ನು ಸರಿ ಮಾಡುತ್ತೇನೆ. ದೇವೇಗೌಡರು ತಮ್ಮ 91ನೆ ವಯಸ್ಸಿನಲ್ಲಿ ಈ ಪಕ್ಷಕ್ಕೆ ಏನು ಆಘಾತ ಆಗಿದೆ ಎಂದು ಯೋಚನೆ ಮಾಡುತ್ತಿದ್ದಾರೆ. ಅವರಿಗೆ ಯಾರೂ ನೋವು ಕೊಡುವುದು ಬೇಡ ಎಂದು ಕುಮಾರಸ್ವಾಮಿ ವಿನಂತಿ ಮಾಡಿದರು.
ಜಾತ್ಯತೀತ ಅನ್ನುತ್ತೇವೆ. ಆದರೆ, ಜಾತಿ ಹೆಸರಿನಲ್ಲಿಯೇ ಟಿಕೆಟ್ ಕೊಡುತ್ತೇವೆ. ಇದು ಯಾಕೆ? ಕಾಂಗ್ರೆಸ್ ಎಲ್ಲ ಪಕ್ಷಗಳಿಗೂ ಮೀರಿ ಈ ಕೆಲಸ ಹೆಚ್ಚು ಮಾಡುತ್ತಿದೆ. ಬಿಜೆಪಿ ಮೈತ್ರಿಯಿಂದ ನಮಗೆ ಯಾವ ಇಕ್ಕಟ್ಟು ಆಗುವುದಿಲ್ಲ. ಮೈತ್ರಿ ಪಕ್ಷದ ಜತೆ ಮುಕ್ತವಾಗಿ ಮಾತನಾಡೋಣ. ಮೈತ್ರಿ ಧರ್ಮವನ್ನು ನಾವು ಗೌರವಿಸೋಣ. ನಮ್ಮ ಹಿತದ ಬಗ್ಗೆಯೂ ಮುಕ್ತವಾಗಿ ಚರ್ಚೆ ಮಾಡೋಣ ಎಂದು ಅವರು ಹೇಳಿದರು.
ಮುಸ್ಲಿಮರಿಗೆ ಅನ್ಯಾಯ ಮಾಡಿಲ್ಲ: ಪಕ್ಷದ ಯಾವ ಮುಖಂಡನ ರಾಜಕೀಯ ಭವಿಷ್ಯ ಮಸಕು ಮಾಡುವ ಪ್ರಶ್ನೆಯೇ ಇಲ್ಲ. ಎಲ್ಲರ ಹಿತ ಕಾಯುವುದು ನಮ್ಮ ಬದ್ಧತೆ. ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ. ಮತಕ್ಕಾಗಿ ಯಾವುದೆ ಒಂದು ಸಮುದಾಯವನ್ನು ಓಲೈಕೆ ಮಾಡಲಾರೆ, ಮುಸ್ಲಿಮರಿಗೆ ನಾನು ಅನ್ಯಾಯ ಮಾಡಿಲ್ಲ. ಯಾವ ಸಮುದಾಯವನ್ನು ನಾನು ರಾಜಕೀಯ ಸ್ವಾರ್ಥಕ್ಕೆ ಬಳಕೆ ಮಾಡಿಕೊಂಡಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.







