Bengaluru | ಬಸವನಗುಡಿಯಲ್ಲಿ ಮಿಲಾದುನ್ನೆಬಿ ಮೆರವಣಿಗೆ ವೇಳೆ ಗಲಾಟೆ; ಪುನೀತ್ ಕೆರೆಹಳ್ಳಿ ಸೇರಿ 8 ಮಂದಿ ಬಂಧನ

ಬೆಂಗಳೂರು : ಮಿಲಾದುನ್ನೆಬಿ ಮೆರವಣಿಗೆ ವೇಳೆ ಬಸವನಗುಡಿಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಪುನೀತ್ ಕೆರೆಹಳ್ಳಿ ಸೇರಿ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಬುಧವಾರ ಮಿಲಾದುನ್ನೆಬಿ ಮೆರವಣಿಗೆ ವೇಳೆ ಬಸವನಗುಡಿಯಲ್ಲಿ ಗಲಾಟೆಯಾಗಿದ್ದು, ಮುರುಳಿ ಎಂಬ ಯುವಕನ ತಲೆಗೆ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ. ಈ ವೇಳೆ ಪುನೀತ್ ಕೆರೆಹಳ್ಳಿ ಹಾಗೂ ಮತ್ತಿತರರು ಧರಣಿ ಕುಳಿತಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಸಂಬಂಧ ಮೂರು ಎಫ್ಐಆರ್ ದಾಖಲಾಗಿದೆ. ಮೊದಲ ಪ್ರಕರಣದಲ್ಲಿ ಆರೋಪಿ ಪುನೀತ್ ಕೆರೆಹಳ್ಳಿ, ಗೋಪಿ ಗೌಡ, ವಿನೋದ್ ನಾಯಕ್ ಮತ್ತಿಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಎರಡನೇ ಪ್ರಕರಣದಲ್ಲಿ ಕೊಲೆ ಯತ್ನ ಹಾಗೂ ಎಸ್ ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಅಬೂಬಕರ್ ಸಿದ್ಧೀಕ್, ಸೈಯದ್ ಅನಾಸ್ ಸಹಿತ ಮತ್ತೊಬ್ಬ ಅಪ್ರಾಪ್ತ ಆರೋಪಿ ವಿರುದ್ಧ ಕೇಸ್ ದಾಖಲಾಗಿದ್ದು, ಈ ಮೂವರನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಮೂರನೆಯದಾಗಿ, ಸಾರ್ವಜನಿಕ ರಸ್ತೆ ತಡೆ ಹಾಗೂ ಸಂಚಾರಕ್ಕೆ ಅಡ್ಡಿ ಆರೋಪದಡಿ ಘಟನಾ ಸ್ಥಳದಲ್ಲಿದ್ದ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಘಟನೆ ಸ್ಥಳದಲ್ಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಕೆಎಸ್ಆರ್ಪಿ ತುಕಡಿ ನಿಯೋಜಿಸಿ ಬಂದೋಬಸ್ತ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.






