ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ನೇಮಕ

ಹೊಸದಿಲ್ಲಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನೂತನ ಅಧ್ಯಕ್ಷರಾಗಿ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ರಾಷ್ಟ್ರೀಯ ಅಧ್ಯಕ್ಷರು ಈ ಆದೇಶ ಹೊರಡಿಸಿದ್ದು, ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿರಿಯ ರಾಜಕಾರಣಿ ಬಿ.ಕೆ.ಹರಿಪ್ರಸಾದ್ಗೆ ಕರ್ನಾಟಕ ಕಾಂಗ್ರೆಸ್ ನ ಚುಕ್ಕಾಣಿ :
ರಾಜಿಯಿಲ್ಲದ ತೀಕ್ಷ್ಣ ಮಾತುಗಳ ಮೂಲಕ ಜಾತ್ಯತೀತ ನಿಲುವಿನ ಫೈರ್ ಬ್ರಾಂಡ್ ರಾಜಕಾರಣಿಯೆಂದೇ ಗುರುತಿಸಿಕೊಂಡಿರುವ ಬಿ.ಕೆ.ಹರಿಪ್ರಸಾದ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ
71ರ ಹರೆಯದ ಬಿ.ಕೆ.ಹರಿಪ್ರಸಾದ್ ಹುಟ್ಟಿದ್ದು ಬೆಂಗಳೂರಿನಲ್ಲಿ. ತಂದೆ ಕೆಂಪಯ್ಯ ತಾಯಿ ಕೆ.ಗುಣವತಿ, ಬೆಂಗಳೂರಿನ ಎಂ.ಇ.ಎಸ್ ಕಾಲೇಜಿನಲ್ಲಿ ಬಿ.ಕಾಂ ಪದವಿ ಪಡೆದಿರುವ ಅವರು, ವಿದ್ಯಾರ್ಥಿ ದೆಸೆಯಿಂದಲೇ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡವರು.
ರಾಜ್ಯಸಭಾ ಸದಸ್ಯರಾಗಿ ನಾಲ್ಕು ಬಾರಿ 1990, 2004, 2013, ಮತ್ತು 2014ರ ಉಪಚುನಾವಣೆಯಲ್ಲಿ ಆಯ್ಕೆಯಾದವರು. ಸಂಸತ್ತಿನ ಮೇಲ್ಮನೆಯ ಸದಸ್ಯರಾಗಿ ದಿಲ್ಲಿಯ ರಾಜಕಾರಣದಲ್ಲಿ ಬಹಳ ಸಕ್ರಿಯರಾಗಿದ್ದರು. ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ವಿಪಕ್ಷ ಅಭ್ಯರ್ಥಿಯೂ ಆಗಿದ್ದರು. ಸಂಸತ್ತಿನಲ್ಲಿ ತಮ್ಮ ಭಾಷಣಗಳ ಮೂಲಕವೂ ಅವರು ಗಮನ ಸೆಳೆದಿದ್ದರು.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ದೀರ್ಘಕಾಲ ಸೇವೆ ಸಲ್ಲಿಸಿದರು. ಗೋವಾ, ಹರಿಯಾಣ, ಒಡಿಶಾ ಸೇರಿದಂತೆ ದೇಶದ ಹಲವು ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿಯಾಗಿ ಪಕ್ಷವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆಗ ಆ ರಾಜ್ಯಗಳ ಸಿಎಂಗಳು, ಸಚಿವರನ್ನು ಆಯ್ಕೆ ಮಾಡುವಷ್ಟು ಪ್ರಭಾವಶಾಲಿಯಾಗಿದ್ದ ಹರಿಪ್ರಸಾದ್ ಅವರು ಈಗ ತವರು ರಾಜ್ಯ ಕರ್ನಾಟಕದ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿದ್ದಾರೆ
ದಿಲ್ಲಿಯಿಂದ ರಾಜ್ಯ ರಾಜಕಾರಣಕ್ಕೆ ಮರಳಿದ ಅವರು 2020, ಜುಲೈ 1ರಿಂದ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಶಾಸಕತ್ವದ ಅವಧಿ 2026 ಜೂನ್ 30ರ ತನಕ ಇದೆ. ಜನವರಿ 2022 ರಿಂದ ಮೇ 2023 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ವಿಪಕ್ಷ ನಾಯಕರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಈಗ ಈ ತಿಂಗಳು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಅವರು ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.






