ʼಕಾರವಾರ-ಇಳಕಲ್ ರಾಷ್ಟ್ರೀಯ ಹೆದ್ದಾರಿʼ ಕಾಮಗಾರಿ ಆರಂಭಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೊಮ್ಮಾಯಿ ಮನವಿ

ಹೊಸದಿಲ್ಲಿ : ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಾರವಾರ-ಇಳಕಲ್ ರಾಷ್ಟ್ರೀಯ ಹೆದ್ದಾರಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಶೀಘ್ರವೇ ಡಿಪಿಆರ್ ಮಾಡಿ ಕಾಮಗಾರಿ ಪ್ರಾರಂಭಿಸಬೇಕು ಎಂದು ಕೋರಿ ಸಂಸದ ಬಸವರಾಜ ಬೊಮ್ಮಾಯಿ, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದಾರೆ.
ಬುಧವಾರ ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ಮನವಿ ಮಾಡಿರುವ ಬೊಮ್ಮಾಯಿ, ಕಾರವಾರ, ಕೈಗಾ, ಮುಂಡಗೋಡ, ಸವಣೂರು, ಗದಗ, ಗಜೇಂದ್ರಗಡ ಮಾರ್ಗವಾಗಿ ಇಳಕಲ್ ತಲುಪುವ ಸುಮಾರು 318ಕಿ.ಮೀ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಈಗಾಗಲೇ ತಾತ್ವಿಕ ಒಪ್ಪಿಗೆ ನೀಡಿದ್ದು, ಯೋಜನೆಯ ಡಿಪಿಆರ್ ಸಲ್ಲಿಕೆಯಾಗಿದೆ ಹಾಗೂ ಭೂ ಸ್ವಾಧೀನ ಪಡಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.
ಪ್ರಸ್ತುತ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ತೀರ್ಮಾನಿಸಿರುವುದರಿಂದ ರಾಜ್ಯ ಸರಕಾರದ ಸರಿಯಾದ ನಿರ್ವಹಣೆ ಇಲ್ಲದ ಕಾರಣ ವಾಹನ ಸಂಚರಿಸಲು ಸಾಧ್ಯವಾಗದ ಸ್ಥಿತಿಯಲ್ಲಿದೆ. ಇನ್ನೊಂದೆಡೆ ಯೋಜನೆಗೆ ಅಧಿಕೃತ ಅನುಮತಿ ನೀಡದೇ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ ಪಾಧಿಕಾರದವರೂ ಯಾವುದೇ ಕೆಲಸ ಮಾಡುತ್ತಿಲ್ಲ. ಹೀಗಾಗಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಿ ಕಾಮಗಾರಿ ಆರಂಭಿಸಬೇಕು ಎಂದು ಕೋರಿದರು.
ಅಲ್ಲದೆ, ಇದಕ್ಕೆ ಹೊಂದಿಕೊಂಡಂತೆ ಇರುವ, ಸಂಚರಿಸಲು ಸಾಧ್ಯವಾಗದಿರುವಂತಹ ಇತರ ಸಿಆರ್ಎಫ್ ರಸ್ತೆಗಳನ್ನು ಅಭಿವೃದ್ಧಿ ಪಡಿಸಬೇಕು. ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಗೆ ತಮ್ಮ ಅನುಭವದ ಆಧಾರದಲ್ಲಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.







