ರಾಜ್ಯ ಶಿಕ್ಷಣ ನೀತಿ ಆಯೋಗದ ವರದಿ ಅನುಷ್ಠಾನಕ್ಕೆ ಸಂಪುಟ ಉಪ ಸಮಿತಿ ರಚನೆಗೆ ನಿರ್ಧಾರ

ಬೆಂಗಳೂರು, ಮೇ 7: ಶಿಕ್ಷಣ ತಜ್ಞ ಪ್ರೊ.ಸುಖದೇವ್ ಥೋರಟ್ ಅಧ್ಯಕ್ಷತೆಯ ರಾಜ್ಯ ಶಿಕ್ಷಣ ನೀತಿ ಆಯೋಗದ ಅಂತಿಮ ವರದಿ ಅನುಷ್ಠಾನ ಕುರಿತು ಶಿಫಾರಸ್ಸುಗಳನ್ನು ಮಾಡಲು ಸಚಿವ ಸಂಪುಟದ ಉಪ ಸಮಿತಿ ರಚನೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಖದೇವ್ ಥೋರಟ್ ಅವರ ಅಂತಿಮ ವರದಿಯಲ್ಲಿನ ಶಿಫಾರಸ್ಸುಗಳ ಕುರಿತು ವಿವರವಾಗಿ ಚರ್ಚೆ ನಡೆಸಿದ್ದೇವೆ. ಥೋರಟ್ ಅವರು ಸಂಪುಟ ಸಭೆಗೆ ಬಂದು ಹಲವಾರು ವಿವರಗಳನ್ನು ತಿಳಿಸಿದರು ಎಂದು ಹೇಳಿದರು.
ಸಂಪುಟ ಉಪ ಸಮಿತಿಯನ್ನು ರಚನೆ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗೆ ನೀಡಲಾಗಿದೆ. ಈಗಾಗಲೆ ಶಾಲಾ, ಕಾಲೇಜುಗಳು ಪ್ರಾರಂಭವಾಗಿರುವುದರಿಂದ ಶಿಫಾರಸ್ಸುಗಳನ್ನು ಅನುಷ್ಠಾನ ಮಾಡಲು ಆಗುವುದಿಲ್ಲ. ವರದಿಯು ಒಟ್ಟು ಎಂಟು ಸಂಪುಟಗಳನ್ನು ಹೊಂದಿದೆ. ಪ್ರಮುಖವಾಗಿ ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿ, ಮಾನವ ಸಂಪನ್ಮೂಲ, ಆಡಳಿತಾತ್ಮಕ ದೃಷ್ಟಿಕೋನ ಎಲ್ಲವನ್ನೂ ಗಮಿಸಬೇಕು. ಹಲವಾರು ಡೀಮ್ಡ್ ವಿವಿ, ಕೇಂದ್ರೀಯ ವಿವಿ, ಹೊಸ ವಿವಿಗಳು ಇವೆ. ಇವೆಲ್ಲವೂಗಳ ಬಗ್ಗೆ ವಿವರವಾಗಿ ಚರ್ಚಿಸಿ ಉಪ ಸಮಿತಿಯು ಸರಕಾರಕ್ಕೆ ಶಿಫಾರಸ್ಸು ಮಾಡಲಿದೆ ಎಂದು ಅವರು ಹೇಳಿದರು.
ಇತರ ನಿರ್ಣಯಗಳು: ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಟೌನ್ಶಿಪ್ಗೆ ಬಸವಸಾಗರ ಅಣೆಕಟ್ಟಿನಿಂದ ಕುಡಿಯುವ ನೀರು ಸರಬರಾಜು ಮಾಡುವ 132.50 ಕೋಟಿ ರೂ.ಗಳ ಅಂದಾಜು ಮೊತ್ತದ ಹೊಸ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರದ ಆವರಣದಲ್ಲಿ 22 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಡಿಜಿಟಲ್ ತಾರಾಲಯವನ್ನು ಸ್ಥಾಪಿಸುವ ಬಗ್ಗೆ, 3ಡಿ-8ಕೆ ರೆಸಲ್ಯೂಷನ್ ಬದಲಿಗೆ 2ಡಿ-4ಕೆ ರೆಸಲ್ಯೂಷನ್ಗೆ ಪರಿಷ್ಕರಿಸಲು 2017ರ ಫೆ.16ರಂದು ಹೊರಡಿಸಿರುವ ಸರಕಾರಿ ಆದೇಶಕ್ಕೆ ತಿದ್ದುಪಡಿ ಮಾಡಲು ಅನುಮೋದನೆ ನೀಡಲಾಗಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಜ್ಯ ಹೆದ್ದಾರಿ-5 ಮತ್ತು 95ರಲ್ಲಿ ಒಟ್ಟು 20.74 ಕಿ.ಮೀ. ಉದ್ದದ ಚತುಷ್ಪಥ ರಸ್ತೆ ನಿರ್ಮಾಣ ಮಾಡುವ 2 ಕಾಮಗಾರಿಗಳನ್ನು 66 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ(ತಿದ್ದುಪಡಿ) ವಿಧೇಯಕ, 2026ಕ್ಕೆ ಅನುಮೋದನೆ ನೀಡಲಾಗಿದೆ. ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ‘ಇಮ್ಮರ್ಸಿವ್ ರೂಮ್ ಮತ್ತು ಡಿಜಿಟಲ್ ಮೃಗಾಲಯ ಮಾರ್ಗದರ್ಶಿ’ ಯೋಜನೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಅನುಕ್ರಮವಾಗಿ 44.62 ಕೋಟಿ ರೂ.ಗಳು ಹಾಗೂ 35.22 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಬನ್ನೇರುಘಟ್ಟ ಜೈವಿನ ಉದ್ಯಾನವನದಲ್ಲಿ ‘ಸಾರ್ವಜನಿಕ ಮತ್ಸ್ಯಾಗಾರ ಅಭಿವೃದ್ಧಿ ಯೋಜನೆ’ಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ 30 ವರ್ಷಗಳ ಅವಧಿಗೆ 144.40 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ ಆಧಾರದ ಮೇಲೆ ಕಾರ್ಯಗತಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು 400 ಹಾಸಿಗೆ ಸಾಮಥ್ರ್ಯದಿಂದ 600 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಯನ್ನು 180 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಸಮಗ್ರ ಅಭಿವೃದ್ಧಿ ಕಾಮಗಾರಿಗಳನ್ನು 23.76 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಮಾಸ್ಟರ್ ಪ್ಲಾನ್ ಯೋಜನೆಯ ಮೂರನೆ ಹಂತದ ಕಾಮಗಾರಿಗಳನ್ನು 604.65 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮದ ಸ.ನಂ.34/1ಎ1ಎ16ರಲ್ಲಿ 20 ಸೆಂಟ್ ಜಮೀನನ್ನು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣ ಮಾಡುವ ಉದ್ದೇಶಕ್ಕಾಗಿ ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು ಇವರಿಗೆ ಮಂಜೂರು ಮಾಡಲು ನಿರ್ಧರಿಸಲಾಗಿದೆ.
ಧಾರವಾಡ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ನಿರ್ಮಾಣ ಮಾಡಲು ಧಾರವಾಡ ಜಿಲ್ಲೆ, ಧಾರವಾಡ ತಾಲೂಕು, ಮಾಳಾಪುರ ಗ್ರಾಮದ ಬ್ಲಾಕ್ ನಂ.30ರಲ್ಲಿ 5 ಗುಂಟೆ ಜಮೀನನ್ನು ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು ಇವರಿಗೆ ಮಂಜೂರು ಮಾಡಲು ನಿರ್ಧರಿಸಲಾಗಿದೆ.
ಕಲಬುರಗಿ, ಯಾದಗಿರಿ, ಸುರಪುರ ಭಾಗದಲ್ಲಿ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನದಡಿಯಲ್ಲಿ 200 ಕೋಟಿ ರೂ.ಅಂದಾಜು ಮೊತ್ತದಲ್ಲಿ ಹೊಸ ಕೈಗಾರಿಕಾ ವಸಾಹತುಗಳನ್ನು ಸ್ಥಾಪನೆ ಮಾಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.ಚ
ಕ್ರೀಡೆಗಳಲ್ಲಿ ಸಾಧನೆ ಮಾಡುವವರಿಗೆ ಸಿವಿಲ್ ಸೇವೆಗಳ ಹುದ್ದೆಗಳಲ್ಲಿ ಶೇ.2ರಷ್ಟು ಮೀಸಲಾತಿ ನೀಡಲು ಕರ್ನಾಟಕ ನಾಗರಿಕ ಸೇವಾ ಸಾಮಾನ್ಯ ನೇಮಕಾತಿ ತಿದ್ದುಪಡಿ ನಿಯಮಗಳು 2026ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಕೆಎಎಸ್ ಅಧಿಕಾರಿ ಹಿದಾಯತುಲ್ಲಾ ಅವರನ್ನು ಭಾರತೀಯ ಆಡಳಿತ ಸೇವೆ(ಐಎಎಸ್)ಗೆ ಮುಂಭಡ್ತಿ ನೀಡಲು ಪರಿಗಣಿಸುವಂತೆ ಪ್ರಸಕ್ತ ಸಾಲಿನ ಎ.15ರಂದು ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಪರಿಗಣಿಸಿ, ಹಿದಾಯತುಲ್ಲಾ ಅವರನ್ನು ಐಎಎಸ್ಗ ಮುಂಭಡ್ತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಎಚ್.ಕೆ.ಪಾಟೀಲ್, ಕಾನೂನು ಸಚಿವ






