ಪ್ರತಿ ಹಂತದಲ್ಲೂ ರಾಜ್ಯಕ್ಕೆ ಕೇಂದ್ರ ಸರಕಾರದಿಂದ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಕೇಂದ್ರ ಸರಕಾರ ಪ್ರಚಾರ ಗಿಟ್ಟಿಸಿಕೊಳ್ಳುವಷ್ಟು ಕೆಲಸವನ್ನು ಮಾಡುತ್ತಿಲ್ಲ. ಪ್ರತಿ ಹಂತದಲ್ಲೂ ರಾಜ್ಯಕ್ಕೆ ಕೇಂದ್ರ ಸರಕಾರದಿಂದ ಅನ್ಯಾಯಗಳಾಗುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದರು.
ಶುಕ್ರವಾರ ನಗರದ ಅರಮನೆ ಮೈದಾನದಲ್ಲಿ ನಡೆದ ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳು ಹಾಗೂ ಅಂಗನವಾಡಿ ಕೇಂದ್ರಗಳ ಸ್ಥಾಪನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಗ್ರ ಶಿಶು ಅಭಿವೃದ್ಧಿ ಯೋಜನೆಯು ಕೇಂದ್ರ ಸರಕಾರದ ಕಾರ್ಯಕ್ರಮವಾದರೂ ರಾಜ್ಯ ಸರಕಾರ ಹೆಚ್ಚಿನ ಅನುದಾನ ಕೊಡುತ್ತಿದೆ. ಕೇಂದ್ರದಿಂದ 2700ರೂ ಬಂದರೆ, ರಾಜ್ಯ ಸರಕಾರ 8500ರೂ. ಒದಗಿಸುತ್ತಿದೆ ಎಂದು ದೂರಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ಸಾಕಾರಗೊಳಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿಯವರು ಟೀಕೆ ಮಾಡಿದ್ದರು. ಇಂದು 1.26 ಕೋಟಿ ಮಹಿಳೆಯರ ಖಾತೆಗೆ ನೇರವಾಗಿ ಹಣ ಹಾಕುತ್ತಿದ್ದೇವೆ. ಈಗ ಬಿಜೆಪಿಯವರು ಬೇರೆ, ಬೇರೆ ರಾಜ್ಯಗಳಲ್ಲಿ ನಮ್ಮ ಯೋಜನೆಗಳನ್ನು ನಕಲು ಮಾಡಿದ್ದಾರೆ ಎಂದು ಟೀಕಿಸಿದರು.





