ನರೇಂದ್ರ ಮೋದಿ ಬದುಕಿರುವುದು ಪ್ರಚಾರದಿಂದ, ಅವರ ಸರಕಾರಕ್ಕೆ ಸೊನ್ನೆ ಅಂಕ : ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ
ಮೈಸೂರು: ನರೇಂದ್ರ ಮೋದಿ ಅವರ ಸರಕಾರಕ್ಕೆ ಸೊನ್ನೆ ಅಂಕ. ಪ್ರಧಾನಮಂತ್ರಿಗಳು ಪ್ರಮುಖವಾಗಿ ಏನು ಹೇಳಿದ್ದರೋ ಅದನ್ನು ಮಾಡಿಲ್ಲ. ಹನ್ನೊಂದು ವರ್ಷ ತುಂಬಿಸಿದ್ದಾರೆ ಅಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ತಮ್ಮ ನಿವಾಸದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೋದಿ ಅವರು ಪ್ರಚಾರದಿಂದ ಬದುಕಿರುವುದು. ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ ದಿನ್ ಆಯೇಗಾ , ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ ಎಂದರು. ರೈತರ ಸಮಸ್ಯೆ ಬಗೆಹರಿಸುತ್ತೇನೆ ಎಂದರು. ರೈತರು ಒಂದು ವರ್ಷ ಕಾಲ ಚಳುವಳಿಯನ್ನು ಏಕೆ ಮಾಡಿದರು ಎಂದು ಪ್ರಶ್ನಿಸಿದರು.
ಮಾಧ್ಯಮಗಳು ಅವರಿಗೆ ಹೆಚ್ಚಿನ ಪ್ರಚಾರ ನೀಡುತ್ತಿವೆ. ಅವುಗಳ ಮೂಲಕ ಸುಳ್ಳು ವಿಚಾರಗಳಿಗೆ ಪ್ರಚಾರ ನೀಡುತ್ತಿದ್ದಾರೆ. ನಮ್ಮ ಸರಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದಾಗ ಇದನ್ನು ಅನುಷ್ಠಾನ ಮಾಡಲಾಗುವುದಿಲ್ಲ, ರಾಜ್ಯ ಸರಕಾರ ದಿವಾಳಿಯಾಗುತ್ತದೆ ಎಂದವರು. ಬಳಿಕ ಅದನ್ನೇ ನಕಲು ಮಾಡಿದರು. ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿಯಲ್ಲಿ ಅದನ್ನೇ ಜಾರಿ ಮಾಡಿದರು ಎಂದು ಹೇಳಿದರು.
ನಿರ್ಮಲಾ ಸೀತಾರಾಮನ್ 5300 ಕೋಟಿಗಳನ್ನು ಕೊಡುವುದಾಗಿ ಘೋಷಿಸಿ ಕೊಡಲಿಲ್ಲ. 15 ನೇ ಹಣಕಾಸು ಆಯೋಗದವರು 11495 ಕೋಟಿ ಕೊಡಬೇಕು ಎಂದು ಶಿಫಾರಸು ಮಾಡಿದರೂ ಕೊಡಲಿಲ್ಲ. ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಬಿಜೆಪಿ ಪ್ರಶ್ನೆ ಮಾಡುವುದನ್ನು ಬಿಟ್ಟು ಅಪಪ್ರಚಾರ ಮಾಡುತ್ತಿದೆ ಎಂದರು.