ಲೋಕಸಭಾ ಚುನಾವಣೆ | ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡಿದ್ದ ಬಿಜೆಪಿ : ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಕರ್ನಾಟಕದಲ್ಲಿ ನಡೆದಿರುವ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯವನ್ನು ಉಂಟುಮಾಡಿದ್ದು ಮಾತ್ರವಲ್ಲ, ಹಲವಾರು ಬಗೆಯ ಅನುಮಾನಗಳನ್ನು ಕೂಡಾ ಹುಟ್ಟುಹಾಕಿತ್ತು. ಆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ನಡೆಸಿರುವ ಅಕ್ರಮವೇ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದ್ದಾರೆ.
ಗುರುವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗ ನಡೆಸಿರುವ ಅಕ್ರಮಗಳ ದಾಸ್ತಾನನ್ನು ಒಂದೊಂದಾಗಿ ಬಯಲಿಗೆಳೆಯುತ್ತಿದ್ದು, ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆಯೂ ವಿವರಗಳನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಚುನಾವಣಾ ಆಯೋಗ ಅಕ್ರಮಗಳನ್ನು ನಡೆಸಿರುವುದಕ್ಕೆ ನೂರಕ್ಕೆ ನೂರರಷ್ಟು ಸಾಕ್ಷ್ಯಗಳಿವೆ ಎಂದು ರಾಹುಲ್ ಗಾಂಧಿ ಹೇಳಿರುವುದನ್ನು ನಾನು ಸಂಪೂರ್ಣವಾಗಿ ಅನುಮೋದಿಸುತ್ತೇನೆ. ರಾಜ್ಯದ ಹಲವಾರು ಕ್ಷೇತ್ರಗಳಲ್ಲಿ ಇದ್ದಕ್ಕಿದ್ದಂತೆಯೇ ಹೊಸ ಮತದಾರರ ಸೇರ್ಪಡೆಯಾಗಿರುವುದು ಮತ್ತು ಹಳೆಯ ಮತದಾರರ ಹೆಸರುಗಳು ರದ್ದಾಗಿರುವುದರ ಬಗ್ಗೆ ನಮ್ಮ ಅನೇಕ ಕಾರ್ಯಕರ್ತರು ದೂರುಗಳನ್ನು ನೀಡಿದ್ದರು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ನರೇಂದ್ರ ಮೋದಿ ಅವರ ಚುನಾವಣಾ ಗೆಲುವುಗಳಿಗೆ ಅವರ ಜನಪ್ರಿಯತೆಯಾಗಲಿ, ಬಿಜೆಪಿ ಸರಕಾರದ ಸಾಧನೆಗಳಾಗಲಿ ಕಾರಣ ಅಲ್ಲ. ಅದು ಚುನಾವಣಾ ಆಯೋಗದ ಮೂಲಕ ನಡೆಸಿದ ‘ಮತಗಳ್ಳತನ’ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆ ಏನು ಕ್ರಮಕೈಗೊಳ್ಳಬೇಕೆಂಬ ಬಗ್ಗೆ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಸಮಾಲೋಚಿಸಿ, ನಾವು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕದಲ್ಲಿ ನಡೆದಿರುವ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯವನ್ನು ಉಂಟುಮಾಡಿದ್ದು ಮಾತ್ರವಲ್ಲ, ಹಲವಾರು ಬಗೆಯ ಅನುಮಾನಗಳನ್ನು ಕೂಡಾ ಹುಟ್ಟುಹಾಕಿತ್ತು. ಆ ಚುನಾವಣೆಯಲ್ಲಿ @BJP4India ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ನಡೆಸಿರುವ ಅಕ್ರಮವೇ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ.… https://t.co/nw6o2DKzMg
— Siddaramaiah (@siddaramaiah) July 24, 2025







