ಪೌರಕಾರ್ಮಿಕರ ನೇಮಕ ಸೇರಿ ವಿವಿಧ ಬೇಡಿಕೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ. 12 : ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿರುವ ಪೌರಕಾರ್ಮಿಕರ ಹುದ್ದೆಗಳಿಗೆ ನೇಮಕಾತಿ ಸೇರಿದಂತೆ ಪೌರ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶುಕ್ರವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವಿವಿಧ ಪೌರ ಕಾರ್ಮಿಕ ಸಂಘಟನೆಗಳ ಬೇಡಿಕೆ ಕುರಿತು ಸಭೆ ನಡೆಸಿ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿದ್ದ ಪೌರ ಕಾರ್ಮಿಕರ 2992 ಹುದ್ದೆಗಳ ಪೈಕಿ 492 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಇನ್ನುಳಿದ ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದೆ ಎಂದರು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ವೇತನದ ಅಡಿಯಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಮೃತಪಟ್ಟ ಪೌರ ಕಾರ್ಮಿಕರ ಅವಲಂಬಿತರಿಗೆ 10 ಲಕ್ಷ ರೂ. ಪರಿಹಾರವನ್ನು ನಗರ ಸ್ಥಳೀಯ ಸಂಸ್ಥೆಗಳ ಸ್ವಂತ ಸಂಪನ್ಮೂಲದಿಂದ ಭರಿಸಲು ಈಗಾಗಲೇ ಅನುಮೋದನೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಈ ವೇಳೆ ಪೌರ ಕಾರ್ಮಿಕರ ಕಲ್ಯಾಣಕ್ಕಾಗಿ ಹಲವು ಬೇಡಿಕೆಗಳನ್ನು ಪೌರ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಸಭೆಯ ಮುಂದಿರಿಸಿದರು. ರಾಜ್ಯದಲ್ಲಿರುವ 41,373 ಪೌರ ಕಾರ್ಮಿಕರ ಪೈಕಿ 29 ಸಾವಿರ ಮಂದಿಯ ಸೇವೆ ಖಾಯಮಾತಿ ಮಾಡಲಾಗಿದೆ. ಬಾಕಿ ಉಳಿದಿರುವವರನ್ನು ಸಹ ಖಾಯಮಾತಿ ಮಾಡಬೇಕು. 2023ರಲ್ಲಿ ಸರಕಾರ 12,800 ಪೌರ ಕಾರ್ಮಿಕರ ಸೂಪರ್ ನ್ಯೂಮರಿ ಹುದ್ದೆಗಳನ್ನು ಮಂಜೂರು ಮಾಡಿದ್ದು ಇವರಿಗೆ ಸೇವಾ ಭದ್ರತೆ ಇರುವುದಿಲ್ಲ. ಈ ಸೂಪರ್ ನ್ಯೂಮರಿ ಹುದ್ದೆಗಳನ್ನು ರದ್ದುಪಡಿಸಿ ಖಾಯಂ ಹುದ್ದೆ ಸೃಜಿಸಬೇಕು ಎಂದು ಪ್ರತಿನಿಧಿಗಳು ಒತ್ತಾಯಿಸಿದರು.
ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಒಳಚರಂಡಿ ಸಹಾಯಕ ಸ್ವಚ್ಛತಾ ಕಾರ್ಮಿಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿದ್ದು, ಇವರನ್ನು ಸಹ ಖಾಯಂ ನೇಮಕಾತಿ ಮಾಡಬೇಕು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ವೇತನ ಅಡಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಮೃತಪಟ್ಟ ಪೌರ ಕಾರ್ಮಿಕರ ಅವಲಂಬಿತ ಕುಟುಂಬಗಳಿಗೆ ಅನುಕಂಪದ ಆಧಾರದಲ್ಲಿ ನೌಕರಿ ಹಾಗೂ ಪರಿಹಾರ ಒದಗಿಸಬೇಕು ಎಂದು ಪ್ರತಿನಿಧಿಗಳು ಸಿಎಂಗೆ ತಿಳಿಸಿದರು.
ಪೌರ ಕಾರ್ಮಿಕರ ಗೃಹಭಾಗ್ಯ ಯೋಜನೆಯನ್ನು ನೇರ ಪಾವತಿ ಕಾರ್ಮಿಕರು ಸೇರಿದಂತೆ ಎಲ್ಲಾ ಸ್ವಚ್ಛತಾ ಕಾರ್ಮಿಕರಿಗೂ ವಿಸ್ತರಿಸಬೇಕು. ಪೌರ ಕಾರ್ಮಿಕರಿಗೆ ನಗದು ರಹಿತ ಆರೋಗ್ಯ ಕಾರ್ಡ್ಗಳನ್ನು ನೀಡಲು ಕ್ರಮಕೈಗೊಳ್ಳಬೇಕು ಎಂದು ಪೌರ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಮನವಿ ಸಲ್ಲಿಸಿದರು.
ಸಭೆಯಲ್ಲಿ ಸಚಿವರಾದ ಭೈರತಿ ಸುರೇಶ್, ರಹೀಂ ಖಾನ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಪೆÇನ್ನಣ್ಣ, ಮುಖ್ಯಮಂತ್ರಿ ಅವರ ಅಪರ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು, ಪೌರ ಕಾರ್ಮಿಕರ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.







