ಸಂವಿಧಾನ ವಿರೋಧಿ ಮನುವಾದಿಗಳ ಬಗ್ಗೆ ಎಚ್ಚರ ಇರಲಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮನುಸ್ಮೃತಿಯಲ್ಲಿದ್ದ ಮನುಷ್ಯ, ಸಮಾನತೆ ವಿರೋಧಿ ನಿಯಮಗಳಿಗೆ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಅವಕಾಶ ಇಲ್ಲದಂತಾಯಿತು. ಈ ಕಾರಣಕ್ಕಾಗಿಯೇ ಮನುವಾದಿಗಳು ಈಗಲೂ ನಮ್ಮ ಸಂವಿಧಾನ ವಿರೋಧಿಸುತ್ತಿದ್ದು, ಇದರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಬುಧವಾರ ನಗರದ ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ "ಸಂವಿಧಾನ ದಿನಾಚರಣೆ-2025" ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನ ಜಾರಿಗೂ ಮೊದಲು ನಮ್ಮ ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು. ಆಗ ಮನುಷ್ಯ, ಸಮಾನತೆ ವಿರೋಧಿ ನೀತಿಗಳಿಂದ ಶೋಷಣೆ ಮಾಡಲಾಗುತಿತ್ತು. ಆದರೆ, ಈಗಲೂ ಇಂತಹ ಮನುಸ್ಮೃತಿ ಬೆಂಬಲಿಸುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಬೇಕಾಗಿದೆ ಎಂದು ತಿಳಿಸಿದರು.
ಈ ದೇಶದ ಜನತೆಗೆ ಯಾವ ರೀತಿಯ ಸಂವಿಧಾನ ಬೇಕು ಎನ್ನುವ ಬಗ್ಗೆ ಒಂದು ವರ್ಷಗಳ ಕಾಲ ಸಮಗ್ರ ಚರ್ಚೆ ನಡೆಸಿದ ಬಳಿಕ ಸಂವಿಧಾನ ಅಂಗೀಕರಿಸಲಾಗಿದೆ. ಸಮ ಸಮಾಜ ನಿರ್ಮಾಣ, ಅಸಮಾನತೆ ನಿವಾರಣೆಗೆ ಆದ್ಯತೆ ನೀಡಿ ಸಂವಿಧಾನ ರಚನೆ ಮಾಡಲಾಗಿದೆ. ಇದನ್ನು ಉಳಿಸಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಅವರು ಹೇಳಿದರು.
ವಿವಿಧ ಬಗೆಯ ಸಂವಿಧಾನಗಳು ವಿಶ್ವದಲ್ಲಿವೆ. ಆದರೆ, ನಮ್ಮದು ಲಿಖಿತ ಸಂವಿಧಾನ. ನಮ್ಮ ದೇಶದಲ್ಲಿರುವಷ್ಟು ಜಾತಿ, ಧರ್ಮಗಳು ಬೇರೆ ಯಾವ ದೇಶದಲ್ಲೂ ಇಲ್ಲ. ಹೀಗಾಗಿ ಈ ನೆಲಕ್ಕೆ ಒಪ್ಪಿಗೆಯಾಗುವ ಸಂವಿಧಾನವನ್ನು ಅಂಬೇಡ್ಕರ್ ಅವರು ಕೊಟ್ಟರು. ಆದರೆ, ಮನುವಾದಿಗಳು ಸಂವಿಧಾನ ಡಾ.ಅಂಬೇಡ್ಕರ್ ಅವರು ರಚನೆ ಮಾಡಿಲ್ಲ ಎಂದು ವಾದಿಸುತ್ತಾರೆ. ಸತ್ಯಾಂಶ ಎಂದರೆ ಅಂಬೇಡ್ಕರ್ ಅವರೇ ಸಂವಿಧಾನ ಶಿಲ್ಪಿ ಎನ್ನುವುದನ್ನು ಮರೆಯಬಾರದು ಎಂದು ಅವರು ನುಡಿದರು.
ಡಾ.ಅಂಬೇಡ್ಕರ್ ಅವರಿಗೆ ಈ ದೇಶದ ಜಾತಿ ವ್ಯವಸ್ಥೆ ಮತ್ತು ಅಪಾಯಗಳು ಅರ್ಥ ಆಗಿತ್ತು. ಅದಕ್ಕೇ ನಮ್ಮ ಸಂವಿಧಾನದಲ್ಲಿ ಮೀಸಲಾತಿಯನ್ನು ಸೇರಿಸಿದರು. ಸ್ವಾತಂತ್ರ್ಯ ಸಮಾನತೆ, ಭ್ರಾತೃತ್ವ ಸಂವಿಧಾನದ ಆಶಯ. ಆದರೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಆದರೂ ಸಂವಿಧಾನದ ಆಶಯ ಈಡೇರಿಲ್ಲ. ಬಸವಣ್ಣ ಸೇರಿದಂತೆ ಅನೇಕ ಮಹಾತ್ಮರೂ ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರೂ ಪಟ್ಟ ಭದ್ರರು ಜಾತಿ ಹೋಗಲು ಬಿಡುತ್ತಿಲ್ಲ ಎಂದು ಸಿದ್ದರಾಮಯ್ಯ ಉಲ್ಲೇಖ ಮಾಡಿದರು.
ಕೆಳ ಜಾತಿಯ ಶೂದ್ರ ವರ್ಗದವರಿಗೆ ಆರ್ಥಿಕ ಶಕ್ತಿ ಬಂದಾಗ ಮಾತ್ರ ಜಾತಿ ದುರ್ಬಲವಾಗುತ್ತದೆ. ಸಂವಿಧಾನ ಸಭೆಯಲ್ಲಿ ಅಂಬೇಡ್ಕರ್ ಅವರು ಮಾಡಿದ ಕೊನೆಯ ಭಾಷಣವನ್ನು ಈ ಭಾಷಣದ ಎಚ್ಚರಿಕೆಯ ಮಾತುಗಳನ್ನು ಪ್ರತಿಯೊಬ್ಬರೂ ಮನವರಿಕೆ ಮಾಡಿಕೊಳ್ಳಬೇಕು ಎಂದ ಅವರು, ಅಸಮಾನತೆ ಇರುವ ದೇಶದಲ್ಲಿ ಸಮಾನತೆ ಸುಲಭವಾಗಿ ಬರುವುದಿಲ್ಲ. ಜತೆಗೆ, ದಲಿತ, ಹಿಂದುಳಿದ, ಅಲ್ಪಸಂಖ್ಯಾತರನ್ನು ದ್ವೇಷಿಸಿ ಎಂದು ಯಾವ ಧರ್ಮವೂ ಹೇಳುವುದಿಲ್ಲ ಎಂದರು.
ಸಂವಿಧಾನ ಅಂಗೀಕಾರಕ್ಕೆ 285 ಮಂದಿ ಸದಸ್ಯರಲ್ಲಿ 284 ಮಂದಿ ಪೂರ್ತಿ ಸಹಿ ಹಾಕಿದರು. ಒಬ್ಬರು ಮಾತ್ರ ಹಾಕಲಿಲ್ಲ. ಹೀಗಾಗಿ ಬಹುತೇಕ ಎಲ್ಲರಿಗೂ ಒಪ್ಪಿಗೆ ಆಗುವ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದರು. ಸಂವಿಧಾನದ ಸಮಾನತೆಯ ಆಶಯವನ್ನು ಈಡೇರಿಸುವ ಸಲುವಾಗಿಯೇ ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವು ಭಾಗ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದೆ ಎಂದು ಅವರು ಹೇಳಿದರು.
ತುತ್ತು ಅನ್ನಕ್ಕಾಗಿ ಯಾರೂ ಯಾರ ಮನೆ ಮುಂದೆಯೂ ನಿಲ್ಲಬಾರದು ಎನ್ನುವ ಆಶಯದಿಂದ ಅನ್ನಭಾಗ್ಯ ಜಾರಿಗೊಳಿಸಲಾಯಿತು. ಯಾರ ಮನೆ ಮಕ್ಕಳೂ ಬರಿಗಾಗಲ್ಲಿ ಶಾಲೆಗೆ ಹೋಗಬಾರದು ಎನ್ನುವ ಕಾರಣದಿಂದ ಶೂ ಭಾಗ್ಯ ಜಾರಿಗೊಳಿಸಿದೆ. ಹೀಗೆ, ಎಲ್ಲ ಭಾಗ್ಯಗಳ, ಯೋಜನೆಗಳ ಹಿಂದೆ ಹಾಗೂ ಈಗ ಜಾರಿ ಮಾಡಿರುವ ಐದೂ ಗ್ಯಾರಂಟಿಗಳ ಹಿಂದೆ ಅಸಮಾನತೆ ನಿವಾರಿಸುವ ಮತ್ತು ಸರ್ವರಿಗೂ ಆರ್ಥಿಕ ಶಕ್ತಿ ಬರಲಿ ಎನ್ನುವ ಆಶಯ ಇದೆ ಎಂದು ಅವರು ಪ್ರತಿಪಾದಿಸಿದರು.
ಬಹುಮಾನ: ಇದೇ ಸಂದರ್ಭದಲ್ಲಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೊದಲನೆ ಬಹುಮಾನ 50 ಸಾವಿರ ರೂ., ದ್ವಿತೀಯ ಬಹುಮಾನ 30 ಸಾವಿರ ರೂ., ತೃತೀಯ ಬಹುಮಾನ 20 ಸಾವಿರ ರೂ.ಗಳನ್ನು ಹಾಗೂ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಮೊದಲ ಬಹುಮಾನ 1 ಲಕ್ಷ ರೂ., ದ್ವಿತೀಯ ಬಹುಮಾನ 50 ಸಾವಿರ ರೂ. ತೃತೀಯ ಬಹುಮಾನ 25 ಸಾವಿರ ರೂ.ಗಳ ನಗದು ಬಹುಮಾನ ವಿತರಿಸಿದರು.
ಕಾರ್ಯಕ್ರಮದಲ್ಲಿ ತೇಜಸ್ ಚಕ್ರವರ್ತಿ ಎಂಬ ಪುಟ್ಟ ಬಾಲಕ ಸಂವಿಧಾನದ ವಿಧಿಗಳನ್ನು ವಾಚಿಸಿದ್ದು ವಿಶೇಷವಾಗಿತ್ತು. ಸಮಾಜ ಕಲ್ಯಾಣ ಇಲಾಖೆ ಸಚಿವ ಡಾಎ.ಚ್.ಸಿ.ಮಹದೇವಪ್ಪ, ಸಚಿವ ಕೆ.ಎಚ್.ಮುನಿಯಪ್ಪ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಆದಿ ಜಾಂಬವ ನಿಗಮದ ಅಧ್ಯಕ್ಷ ಜಿ.ಎನ್.ಮಂಜುನಾಥ್, ಭೋವಿ ನಿಗಮದ ಅಧ್ಯಕ್ಷ ರಾಮಪ್ಪ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ, ಸಮಾಜ ಕಲ್ಯಾಣ ಇಲಾಖೆಯ ಸರಕಾರದ ಕಾರ್ಯದರ್ಶಿ ರಂದೀಪ್ ಡಿ, ಆಯುಕ್ತ ಡಾ.ರಾಕೇಶ್ ಕುಮಾರ್ ಸೇರಿದಂತೆ ಪ್ರಮುಖರಿದ್ದರು.







