ರಾಷ್ಟ್ರಧ್ವಜ, ರಾಷ್ಟ್ರಗೀತೆಗೆ ಅಪಮಾನ ಆರೋಪ: ಬಿಜೆಪಿಯ ಎನ್.ರವಿಕುಮಾರ್ ವಿರುದ್ಧ ದೂರು ದಾಖಲು

ಬೆಂಗಳೂರು : ರಾಷ್ಟ್ರಧ್ವಜ, ರಾಷ್ಟ್ರಗೀತೆಗೆ ಅಪಮಾನ ಮಾಡಿರುವ ಆರೋಪದ ಮೇಲೆ ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಎನ್.ರವಿಕುಮಾರ್ ವಿರುದ್ಧ ಇಲ್ಲಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕೆಪಿಸಿಸಿಯ ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕುಶಾಲ್ ಹರುವೇಗೌಡ, ಎಸ್. ಮನೋಹರ್, ಮಂಜುನಾಥ್ ನೇತೃತ್ವದ ನಿಯೋಗ ನೀಡಿದ ದೂರಿನ್ವಯ ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಎನ್.ರವಿಕುಮಾರ್ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಪರಿಶೀಲನೆ ಕೈಗೊಂಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಕುಶಾಲ್ ಹರುವೇಗೌಡ, ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಬಳಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪರಿಷತ್ತಿನ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಅವರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ, ಪ್ರಮುಖವಾಗಿ ರಾಷ್ಟ್ರಧ್ವಜಕ್ಕೆ ನಮಸ್ಕರಿಸದೆ, ಆರೆಸ್ಸೆಸ್ ಶಾಖೆಯಲ್ಲಿ ನಮಸ್ಕರಿಸುವ ರೀತಿಯಲ್ಲಿ ನಿಂತು ರಾಷ್ಟ್ರಗೀತೆ ಹಾಗೂ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಈ ಸಂಬಂಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.




