ದಾವಣಗೆರೆ ಅಭ್ಯರ್ಥಿಯನ್ನು ಸೋಲಿಸಲು ಮುಸ್ಲಿಂ ನಾಯಕರ ಷಡ್ಯಂತ್ರ : ಕಾಂಗ್ರೆಸ್ ಹೈಕಮಾಂಡ್ಗೆ ದೂರು

ಬೆಂಗಳೂರು : ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿಗೆ ತೀವ್ರ ಪ್ರತಿಷ್ಠೆಯಾಗಿದ್ದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಿನ್ನೆ ಮುಗಿದಿದ್ದು, ಫಲಿತಾಂಶ ಮೇ.4ರಂದು ಪ್ರಕಟವಾಗಲಿದೆ. ಈ ಮಧ್ಯೆ ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಷಡ್ಯಂತ್ರ ನಡೆಸಿದ್ದರು ಎಂದು ಆರೋಪಿಸಿ ಮೂವರು ಮುಸ್ಲಿಂ ನಾಯಕರ ವಿರುದ್ಧ ಕಾಂಗ್ರೆಸ್ ಪಕ್ಷದ ಹೈಕಮಾಂಡ್ಗೆ ದೂರು ಸಲ್ಲಿಕೆಯಾಗಿವುದಾಗಿ ವರದಿಯಾಗಿದೆ.
ʼಸಚಿವ ಝಮೀರ್ ಅಹ್ಮದ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರನ್ನು ಸೋಲಿಸಲು ಷಡ್ಯಂತ್ರ ನಡೆಸಿದ್ದರು. ತಾವು ಹೇಳಿದ ಹಾಗೆ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಲಿಲ್ಲ ಎನ್ನುವ ಕಾರಣಕ್ಕೆ ಇಂತಹ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರು ಸಲ್ಲಿಸಿದ್ದಾರೆ’ ಎಂದು ಮೂಲಗಳು ತಿಳಿಸಿದೆ.
ರಾಜ್ಯ ವಿಧಾನಸಭೆಯಲ್ಲಿ ಹಿರಿಯ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರದಲ್ಲಿ ಅವರ ಮೊಮ್ಮಗ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ಗೆ ಟಿಕೆಟ್ ನೀಡಬೇಕು ಎಂದು ಅವರ ಕುಟುಂಬ ಪಟ್ಟು ಹಿಡಿದಿತ್ತು. ಆದರೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂದು ಸಚಿವ ಝಮೀರ್ ಅಹ್ಮದ್ ಅವರು ಒತ್ತಾಯ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಆ ಬಳಿಕ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹಲವು ಸುತ್ತಿನ ಸಭೆ ನಡೆಸಿ, ಸ್ಪರ್ಧೆಗೆ ಸಮರ್ಥ್ ಹೆಸರು ಅಂತಿಮಗೊಳಿಸಿದ್ದರು.
ಇದರಿಂದ ಝಮೀರ್ ಅವರು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಬರುತ್ತಾರೋ ಇಲ್ಲವೋ ಎನ್ನುವ ಅನುಮಾನ ಕೂಡ ವ್ಯಕ್ತವಾಗಿತ್ತು. ಆದರೆ ಕೊನೆ ಘಳಿಗೆಯಲ್ಲಿ ಝಮೀರ್ ಅಹ್ಮದ್ ಅವರು ದಾವಣಗೆರೆಗೆ ಆಗಮಿಸಿದ್ದರು. ಆದರೆ ಅದು ಕೇವಲ ಸುದ್ದಿಗೋಷ್ಠಿಗೆ ಸೀಮಿತವಾಗಿತ್ತು.






