ಸಂಪುಟ ಪುನರ್ ರಚನೆ ಮಾಡಲು ಆಗ್ರಹಿಸಿ ಹೈಕಮಾಂಡ್ಗೆ ‘ಕೈ’ ಶಾಸಕರ ಪತ್ರ?

ಬೆಂಗಳೂರು, ಫೆ. 23 : ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ಬೆನ್ನಲ್ಲೆ ‘ಸಚಿವ ಸಂಪುಟ ಪುನರ್ ರಚನೆ ಮಾಡಬೇಕು’ ಎಂದು ಆಗ್ರಹಿಸಿ ಪಕ್ಷದ ಶಾಸಕರೇ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಮುಖಂಡರಿಗೆ ಪತ್ರ ಬರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.
‘ಮೂವತ್ತಕ್ಕೂ ಅಧಿಕ ಮಂದಿ ಹೊಸದಾಗಿ ಆಯ್ಕೆಯಾಗಿರುವ ಶಾಸಕರು, ಕಾಂಗ್ರೆಸ್ ಮುಖಂಡರಿಗೆ ಪತ್ರ ಬರೆದಿದ್ದು, ‘ಮೊದಲ ಬಾರಿಗೆ ಆಯ್ಕೆಯಾದವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು. ಇದರಿಂದ ಹೊಸ ಮುಖಗಳಿಗೆ ಅವಕಾಶವಾಗಲಿದೆ. ಹೀಗಾಗಿ ಸಂಪುಟ ಪುನರ್ ರಚನೆ ವೇಳೆ ಕನಿಷ್ಟ ಐದು ಮಂದಿ ಹೊಸಬರಿಗೆ ಸಚಿವ ಸ್ಥಾನವನ್ನು ನೀಡಬೇಕು’ ಎಂದು ಆಗ್ರಹಿಸಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ, ಈ ಪತ್ರ ಹಳೆಯದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪಕ್ಷದ ಪ್ರಮುಖ ನಾಯಕರಿಗೆ ಬರೆದಿದೆ ಎನ್ನಲಾದ ಪತ್ರದಲ್ಲಿ ದಿನಾಂಕ ಇಲ್ಲ. ಅಲ್ಲದೆ, ಈ ಪತ್ರವನ್ನು ಹೈಕಮಾಂಡ್ಗೆ ತಲುಪಿಸಲಾಗಿದೆಯೋ ಅಥವಾ ಇಲ್ಲವೋ ಎಂಬ ಬಗ್ಗೆಯೂ ಸ್ಪಷ್ಟತೆ ಇಲ್ಲ. ನಾಯಕತ್ವ ಬದಲಾವಣೆಯ ಸುತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪರ-ವಿರುದ್ಧ ಪಕ್ಷದ ಮುಖಂಡರು ಹಾಗೂ ಶಾಸಕರ ಹೇಳಿಕೆಗಳು ಚರ್ಚೆಗೆ ಗ್ರಾಸವಾಗಿವೆ. ಈ ಮಧ್ಯೆ ಶಾಸಕರ ಪತ್ರ ವೈರಲ್ ಆಗಿದ್ದು ಕುತೂಹಲ ಸೃಷ್ಟಿಸಿದೆ.
ಪತ್ರದಲ್ಲಿ ಏನಿದೆ?: ‘ಕಾಂಗ್ರೆಸ್ ಪಕ್ಷದಲ್ಲಿ 38 ಮಂದಿ ಶಾಸಕರು ಹೊಸದಾಗಿ ಆಯ್ಕೆಯಾಗಿದ್ದು, ಬೇರೆ ರಾಜ್ಯಗಳಲ್ಲಿ ಮೊದಲ ಬಾರಿಗೆ ಗೆದ್ದವರು ಮುಖ್ಯಮಂತ್ರಿಯೂ ಆಗಿದ್ದಾರೆ. ಹೀಗಾಗಿ ಮೊದಲ ಬಾರಿ ಆಯ್ಕೆಯಾದ ಶಾಸಕರಿಗೂ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ ಅವಕಾಶ ಕಲ್ಪಿಸಬೇಕು’ ಎಂದು ಕೋರಲಾಗಿದೆ.
ನಾಯಕತ್ವ ಬದಲಾವಣೆ ವಿಚಾರ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇತ್ತೀಚೆಗೆ ಸಚಿವ ಸತೀಶ್ ಜಾರಕಿಹೊಳಿ, ಮಾಜಿ ಸಚಿವ ಕೆ.ಎನ್.ರಾಜಣ್ಣ ಹೊಸದಿಲ್ಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹಿತ ಹಲವು ಮುಖಂಡರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದರು. ಈ ನಡುವೆ ಶಾಸಕರು ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದಾರೆ.






