ಶಾಲಾ ಮಕ್ಕಳ ಊಟಕ್ಕಾಗಿ ಹೊಸ ಅಡುಗೆ ಪಾತ್ರೆ ವಿತರಣೆ: ಸಚಿವ ಮಧು ಬಂಗಾರಪ್ಪ

ಸಚಿವ ಮಧು ಬಂಗಾರಪ್ಪ
ಬಾಗಲಕೋಟೆ: ಮಕ್ಕಳ ಆರೋಗ್ಯದ ದೃಷ್ಟಿಯಿಂದ ರಾಜ್ಯದ 16,500 ಸರಕಾರಿ ಶಾಲೆಗಳಿಗೆ ಹಳೆಯ ಅಲ್ಯೂಮಿನಿಯಮ್ ಪಾತ್ರೆಗಳ ಬದಲಿ ಹೊಸ ಅಡುಗೆ ಪಾತ್ರೆಗಳನ್ನು ಒದಗಿಸಲಾಗುವುದು ಎಂದು ಶಿಕ್ಷಣ ಸಚಿವ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶನಿವಾರ ಇಲ್ಲಿ ಬಿಳಾಗಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶಾಲಾ ಅಡುಗೆಯಲ್ಲಿ ಅಲ್ಯೂಮಿನಿಯಂ ಪಾತ್ರೆಗಳ ಬಳಕೆಯನ್ನು ನಿಲ್ಲಿಸುವ ನಿರ್ಧಾರವನ್ನು ಸರಕಾರ ತೆಗೆದುಕೊಂಡಿದೆ. ಶೀಘ್ರದಲ್ಲಿಯೇ ಅಡುಗೆ ಪಾತ್ರೆಗಳನ್ನು ಒದಗಿಸಲಾಗುವುದು ಎಂದು ಹೇಳಿದರು.
ಸರಕಾರಿ ಶಾಲೆಗಳಲ್ಲಿ ಮಕ್ಕಳನ್ನು ಓದಿಸುವ ಮನೋಭಾವವನ್ನು ಹೆಚ್ಚಿಸುವ ಅಗತ್ಯ ಇದೆ. ಅದೇ ರೀತಿ, ಮುಂದಿನ ದಿನಗಳಲ್ಲಿ ಎಲ್ಕೆಜಿ ಶಾಲೆಗಳನ್ನು ಪ್ರಾರಂಭಿಸುವ ಯೋಜನೆಯನ್ನು ಸರಕಾರ ಹೊಂದಿದೆ. ಅಂಗನವಾಡಿಗಳಿಗೆ ತೊಂದರೆಯಾಗದ ರೀತಿಯಲ್ಲಿ ಈ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದು ಸಚಿವರು ತಿಳಿಸಿದರು.
ಸರಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಮತ್ತು ಟಿವಿಗಳ ಬಳಕೆಯನ್ನು ಹೆಚ್ಚಿಸಲು ಸರಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಸುಮಾರು 46,000 ಸರಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯವನ್ನು ಒದಗಿಸಲಾಗಿದೆ. ಇದರಿಂದ ಮಕ್ಕಳು ಸ್ಮಾರ್ಟ್ ಕ್ಲಾಸ್ ಗಳ ಸದುಪಯೋಗ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.







