ಬೆಂಗಳೂರು ನಗರದಲ್ಲಿ ಇದುವರೆಗೂ 13 ಸಾವಿರ ರಸ್ತೆಗುಂಡಿ ಮುಚ್ಚಲಾಗಿದೆ : ಡಿ.ಕೆ.ಶಿವಕುಮಾರ್

ಬೆಂಗಳೂರು, ಸೆ. 30: ಬೆಂಗಳೂರು ನಗರದಲ್ಲಿ ಇದುವರೆಗೂ 13 ಸಾವಿರ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಪ್ರತಿ ಗುಂಡಿ ಮುಚ್ಚಿರುವುದಕ್ಕೆ ಫೊಟೋ, ವಿಡಿಯೋ ದಾಖಲೆ ಮಾಡಿಸಲಾಗಿದೆ. ನೀವುಗಳು ಪರಿಶೀಲನೆ ಮಾಡಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಮಂಗಳವಾರ ಸಿಟಿ ರೌಂಡ್ ನಡೆಸಿ ರಸ್ತೆಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಅಧಿಕಾರಿಗಳು ಸರಕಾರದ ಆದೇಶ ಪಾಲನೆ ಮಾಡಿ ಗುಂಡಿ ಮುಚ್ಚುವ ಕಾರ್ಯ ಮಾಡುತ್ತಿದ್ದಾರೆ. ಇದರ ಜೊತೆಗೆ 550 ಕಿ.ಮೀ ಉದ್ದದ ಮುಖ್ಯರಸ್ತೆಗಳ ಅಭಿವೃದ್ಧಿಗೆ 1100 ಕೋಟಿ ರೂ.ವೆಚ್ಚದ ಕಾರ್ಯಯೋಜನೆ ಸಿದ್ಧಪಡಿಸಲು ಸೂಚನೆ ನೀಡಿದ್ದೇನೆ ಎಂದು ಮಾಹಿತಿ ನೀಡಿದರು.
ಇನ್ನು ಮುಖ್ಯರಸ್ತೆಗಳ ಜಂಕ್ಷನ್ನಲ್ಲಿ ಕಾಂಕ್ರೀಟ್ ಹಾಕಲು 26 ದಿನಗಳ ಅಗತ್ಯವಿದ್ದು, ಟ್ರಾಫಿಕ್ ನಿಯಂತ್ರಣದ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ನಾನು ಬೆಂಗಳೂರು ರಸ್ತೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಪ್ರಯತ್ನಿಸುತ್ತಿದ್ದೇನೆ. ಇನ್ನು ರಸ್ತೆಗುಂಡಿ ಮುಚ್ಚುವುದಕ್ಕಾಗಿ 750 ಕೋಟಿ ರೂ. ನೀಡುವುದಾಗಿ ಸಿಎಂ ಹೇಳಿದ್ದಾರೆ ಎಂದರು.
ವಾರ್ಡ್ ಮಟ್ಟದ ರಸ್ತೆಗಳ ಅಭಿವೃದ್ಧಿಗೆ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಲು 1100 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಈ ಅನುದಾನವನ್ನು ರಸ್ತೆಗಳ ಸುಧಾರಣೆಗೆ ಬಳಸಲು ಸೂಚನೆ ನೀಡಲಾಗಿದೆ. ದೇಶದಲ್ಲಿ ಯಾವುದೇ ನಗರದ ಮಂತ್ರಿ ರಸ್ತೆಯಲ್ಲಿ ಗುಂಡಿ ಕಂಡರೆ ಮಾಹಿತಿ ನೀಡಿ ಎಂದು ಸಾರ್ವಜನಿಕರಿಗೆ ಕರೆ ನೀಡಿರಲಿಲ್ಲ. ಆದರೆ ನಾನು ಇದಕ್ಕಾಗಿ ಪ್ರತ್ಯೇಕ ಆಪ್ ಸಿದ್ಧಪಡಿಸಿ, ಪೊಲೀಸರ ಸಹಕಾರದಲ್ಲಿ ರಸ್ತೆಗುಂಡಿ ಮುಚ್ಚಲಾಗುತ್ತಿದೆ. ಇಂತಹ ಪ್ರಯತ್ನ ನಡೆದಿರುವುದು ಕರ್ನಾಟಕದಲ್ಲಿ ಮಾತ್ರ. ಬೆಂಗಳೂರು ಜಾಗತಿಕ ನಗರ ಹೀಗಾಗಿ ಎಲ್ಲರೂ ಬೆಂಗಳೂರು ರಸ್ತೆ ಗುಂಡಿಗಳ ಬಗ್ಗೆ ಮಾತ್ರ ಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು.
ನನ್ನೊಟ್ಟಿಗೆ ದಿಲ್ಲಿಗೆ ಬರಲಿ: ಬೇಕಿದ್ದರೆ ನನ್ನ ಜೊತೆ ಬಿಜೆಪಿ ನಾಯಕರು ಬರಲಿ, ದಿಲ್ಲಿ ಪಿಎಂ ನಿವಾಸದಲ್ಲಿನ ರಸ್ತೆ ಗುಂಡಿಗಳನ್ನು ತೋರಿಸುತ್ತೇನೆ. ಕರ್ನಾಟಕ ಭವನದಿಂದ ಹೋಗುವಾಗ ನೋಡಿದ್ದೇನೆ. ಎಲ್ಲ ಕಡೆ ಇದೇ ಪರಿಸ್ಥಿತಿ ಇದೆ. ಅವರ ತಪ್ಪು ಎಂದು ಹೇಳುವುದಿಲ್ಲ. ಅವರು ಯಾವಾಗ ಬರುತ್ತಾರೆ ಹೇಳಿ, ರಾಜ್ಯದಿಂದ ಒಂದು ನಿಯೋಗ ಹೋಗೋಣ. ಹಾಗೆ ಯಾರಾದರೂ ಕೇಂದ್ರ ಸರಕಾರದಿಂದ ಹಣ ಕೊಡಿಸಿದರೆ ತರೋಣ ಎಂದರು.
‘ಕಸ’ ಪ್ರಕರಣ ದಾಖಲಿಸಿ: ನಗರದಲ್ಲಿ ನಿಜವಾಗಿಯೂ ಕಸದ ಸಮಸ್ಯೆಯೂ ಇದೆ. ಇಂದು ಕಾಂಗ್ರೆಸ್ ಕಚೇರಿಗೆ ಹೋಗುವಾಗ ಜಯಮಹಲ್ ರಸ್ತೆಯಲ್ಲಿ ಯಾರೋ ಒಂದು ಲೋಡ್ ಕಸ ಸುರಿದಿದ್ದಾರೆ. ನಿನ್ನೆ ರಾತ್ರಿ ಇರಲಿಲ್ಲ. ರಾತ್ರೊರಾತ್ರಿ ಬಂದು ಸುರಿದಿದ್ದಾರೆ. ಈ ಕಸ ಸುರಿದವರು ಯಾರು ಎಂದು ಸಿಸಿಟಿವಿಯಲ್ಲಿ ಪತ್ತೆ ಮಾಡಿ ಅವನ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಅವರು ಸೂಚನೆ ನೀಡಿದರು.







