ದಾಖಲೆ ಇಲ್ಲದೆ ಸರಕು ಸಾಗಣೆ ವಾಹನ ಗಡಿದಾಟಬಾರದು : ಸಿಎಂ ಸೂಚನೆ

ಬೆಂಗಳೂರು : ಯಾವುದೇ ಸರಕು ಸಾಗಣೆ ವಾಹನವು ಅಗತ್ಯ ದಾಖಲೆಗಳಿಲ್ಲದೆ ಚೆಕ್ಪೋಸ್ಟ್ ಅಥವಾ ರಾಜ್ಯದ ಗಡಿಯನ್ನು ದಾಟಬಾರದು. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಎಂದು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.
ಶುಕ್ರವಾರ ವಿಧಾನಸೌಧದ ಸಭಾಂಗಣ ಕೊಠಡಿಯಲ್ಲಿ ವಾಣಿಜ್ಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಯಾವುದೇ ಸರಕು ಸಾಗಣೆ ವಾಹನವು ಅಗತ್ಯ ದಾಖಲೆಗಳಿಲ್ಲದೆ ಚೆಕ್ಪೋಸ್ಟ್ ಅಥವಾ ರಾಜ್ಯದ ಗಡಿಯನ್ನು ದಾಟಬಾರದು. ತೆರಿಗೆ ಸೋರಿಕೆಗೆ ಯಾವುದೇ ಅವಕಾಶ ಇರಬಾರದು. ಇದರಲ್ಲಿ ಯಾವುದೇ ರೀತಿಯ ರಾಜಿ ಅಥವಾ ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲ ಎಂದು ಹೇಳಿದರು.
ನಾನು ಎಲ್ಲವನ್ನೂ ಗಮನಿಸುತ್ತಿದ್ದೇನೆ. ರಾಜ್ಯದ ಎಲ್ಲ ವಲಯಗಳಿಂದಲೂ ನನಗೆ ನಿರಂತರ ಮಾಹಿತಿ ಬರುತ್ತದೆ. ಚಿಕ್ಕಪೇಟೆಯಿಂದ ಗಾಂಧಿನಗರದವರೆಗೆ, ಗಡಿ ಜಿಲ್ಲೆಗಳಿಂದ ರಾಜ್ಯದ ಎಲ್ಲ ಭಾಗಗಳಲ್ಲೂ ನನ್ನದೇ ಆದ ಸಂಪರ್ಕಗಳಿವೆ. ಅಧಿಕಾರಿಗಳ ಕಾರ್ಯನಿರ್ವಹಣೆಯಲ್ಲಿ ಯಾವುದೇ ಲೋಪ ಅಥವಾ ನಿರ್ಲಕ್ಷ್ಯ ನಡೆದರೂ ಅದು ನನ್ನ ಗಮನಕ್ಕೆ ಬರುತ್ತದೆ. ಆದ್ದರಿಂದ ನನಗೆ ಬರುತ್ತಿರುವ ಮಾಹಿತಿಯೂ ನಿಮ್ಮ ಕಾರ್ಯಕ್ಷಮತೆಯ ವರದಿಯೂ ಒಂದಕ್ಕೊಂದು ಹೊಂದಿಕೆಯಾಗಬೇಕು. ಪಕ್ಕದ ರಾಜ್ಯಗಳ ವಾಣಿಜ್ಯ ತೆರಿಗೆ ಇಲಾಖೆ ಮತ್ತು ಜಾರಿ ಸಂಸ್ಥೆಗಳೊಂದಿಗೆ ಉತ್ತಮ ಸಮನ್ವಯ ಸಾಧಿಸಿ, ಮಾಹಿತಿ ಹಂಚಿಕೆ ಮತ್ತು ಜಂಟಿ ಕಾರ್ಯಾಚರಣೆಗಳ ಮೂಲಕ ತೆರಿಗೆ ಸೋರಿಕೆಯನ್ನು ಪರಿಣಾಮಕಾರಿಯಾಗಿ ತಡೆಯಬೇಕು ಎಂದು ಅವರು ಸೂಚಿಸಿದರು.
ಇಂದು ನಮ್ಮ ಬಳಿ ಸುಮಾರು 12 ಲಕ್ಷ ತೆರಿಗೆದಾರರ ಮಾಹಿತಿಯಿದೆ. ತಂತ್ರಜ್ಞಾನ ಮತ್ತು ಡೇಟಾ ಅನಾಲಿಟಿಕ್ಸ್ ಮೂಲಕ ಅವರನ್ನು 360 ಡಿಗ್ರಿ ದೃಷ್ಟಿಕೋನದಲ್ಲಿ ವಿಶ್ಲೇಷಿಸುವ ಸಾಮರ್ಥ್ಯ ನಿಮಗಿದೆ. ಈ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡರೆ ನಿಮಗೆ ನೀಡಿರುವ ಗುರಿಯನ್ನು ಸಾಧಿಸುವುದಷ್ಟೇ ಅಲ್ಲ, ಅದನ್ನು ಮೀರಿಸುವ ಸಾಮರ್ಥ್ಯವೂ ನಿಮ್ಮಿಂದ ಸಾಧ್ಯವಿದೆ. ನಮ್ಮ ಉದ್ದೇಶ ಯಾರಿಗೂ ಅನಗತ್ಯ ತೊಂದರೆ ನೀಡುವುದಲ್ಲ. ಪ್ರಾಮಾಣಿಕ ತೆರಿಗೆದಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ತೆರಿಗೆ ಪಾವತಿಸುವ ಪ್ರತಿಯೊಬ್ಬ ನಾಗರಿಕನನ್ನು ಘನತೆ ಮತ್ತು ಗೌರವದಿಂದ ನಡೆಸಿಕೊಳ್ಳಬೇಕು. ಜೊತೆಗೆ ಇಲಾಖೆಯ ಸಿಬ್ಬಂದಿಯನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬುದ್ಧಿವಂತಿಕೆಯಿಂದ ಕಾರ್ಯನಿರ್ವಹಿಸಿದರೆ ಗುರಿಯನ್ನು ಮೀರಿದ ಸಾಧನೆ ಮಾಡುವುದು ಸಾಧ್ಯ ಎಂದೂ ಅವರು ಹೇಳಿದರು.
ತೆರಿಗೆ ವಂಚನೆಗೆ ಮಾತ್ರ ಯಾವುದೇ ಅವಕಾಶ ಇರಬಾರದು. ತೆರಿಗೆ ಸೋರಿಕೆಯನ್ನು ಸಂಪೂರ್ಣವಾಗಿ ತಡೆಯುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಮುಂದಿನ ಪರಿಶೀಲನಾ ಸಭೆ ನಡೆಯುವ ವೇಳೆಗೆ ಇಂದು ನಾನು ನೀಡಿರುವ ಪ್ರತಿಯೊಂದು ಸೂಚನೆಯೂ ಜಾರಿಯಾಗಿರಬೇಕು. ಮುಂದಿನ ಸಭೆಯಲ್ಲಿ ನಾನು ಸ್ವತಃ ಅನೇಕ ನೈಜ ಉದಾಹರಣೆಗಳೊಂದಿಗೆ ನಿಮ್ಮ ಕಾರ್ಯಕ್ಷಮತೆಯನ್ನು ಪರಿಶೀಲಿಸುತ್ತೇನೆ ಎಂದ ಅವರು, ಎಲ್ಲ ಜಂಟಿ ಆಯುಕ್ತರು ಆಯಾ ವಿಭಾಗಗಳಿಗೆ ಹಂಚಿಕೆ ಮಾಡಲಾದ ತೆರಿಗೆ ಸಂಗ್ರಹಣಾ ಗುರಿಯನ್ನು ಸಾಧಿಸಿ ತೋರಿಸಬೇಕು ಎಂದು ತಿಳಿಸಿದರು.
ನನ್ನ ಸಾರ್ವಜನಿಕ ಜೀವನಕ್ಕೆ ಸುಮಾರು ಮೂವತ್ತೆಂಟು ವರ್ಷಗಳ ಅನುಭವವಿದೆ.ಈ ಅವಧಿಯಲ್ಲಿ ಹಲವು ಪ್ರಮುಖ ಖಾತೆಗಳನ್ನು ನಿರ್ವಹಿಸಿದ್ದೇನೆ. ಈಗ ಹಣಕಾಸು ಮತ್ತು ವಾಣಿಜ್ಯ ತೆರಿಗೆ ಇಲಾಖೆಯ ಕಾರ್ಯವೈಖರಿಯನ್ನು ಇನ್ನಷ್ಟು ಆಳವಾಗಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿದ್ದೇನೆ. ಕೇಳುವುದಕ್ಕೂ, ಕಲಿಯುವುದಕ್ಕೂ ನಾನು ಸದಾ ಸಿದ್ಧನಿದ್ದೇನೆ. ನಿರಂತರ ಕಲಿಕೆಯೇ ಉತ್ತಮ ಆಡಳಿತದ ಮೂಲ ಎಂದು ನಾನು ನಂಬುತ್ತೇನೆ. ಆದ್ದರಿಂದ ಮುಂದಿನ ಸಭೆಯ ವೇಳೆಗೆ ಇಂದಿನ ವರದಿಗಿಂತ ಉತ್ತಮವಾದ ಕಾರ್ಯಕ್ಷಮತೆಯ ವರದಿಯನ್ನು ನಿಮ್ಮಿಂದ ನಿರೀಕ್ಷಿಸುತ್ತೇನೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಗುಜರಾತ್, ತಮಿಳುನಾಡು, ಹರಿಯಾಣ ರಾಜ್ಯಗಳಿಗಿಂತ ಹೆಚ್ಚು ಪ್ರಗತಿ ರಾಜ್ಯದಲ್ಲಿ ಆಗಿರುವುದು ಸಮಾಧಾನದ ಸಂಗತಿ. ಹೈದರಾಬಾದ್ ಐಐಟಿ ಸಹಯೋಗದಲ್ಲಿ ಜಿಎಸ್ಟಿ ವಂಚನೆ ಮೇಲೆ ತೀವ್ರ ನಿಗಾ ಇಡಲಾಗಿದೆ. ಇದರಿಂದಾಗಿ ಹಲವು ರೀತಿಯ ಜಿಎಸ್ಟಿ ವಂಚನೆಗಳನ್ನು ಪತ್ತೆಹಚ್ಚಲಾಗಿದ್ದರೂ ಇದರಲ್ಲಿ ಸಂಪೂರ್ಣ ಪ್ರಗತಿ ಸಾಧಿಸಿ. ಜಿಎಸ್ಟಿ ಸಂಗ್ರಹ, ಸೋರಿಕೆ, ವಂಚನೆ ಸೇರಿ ಸಮಗ್ರವಾಗಿ 360 ಡಿಗ್ರಿಯಲ್ಲಿ ನಿಗಾ ಇಡಬಹುದಾಗಿದೆ. ನಕಲಿ ರಶೀದಿ ಮತ್ತು ನಕಲಿ ಐಟಿಸಿಗಳು ದೊಡ್ಡ ಸವಾಲಾಗಿದೆ. ಈ ಬಗ್ಗೆ ಗಮನಹರಿಸುವಂತೆ ಡಿ.ಕೆ.ಶಿವಕುಮಾರ್ ಹೇಳಿದರು.
ಸಭೆಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್.ಕೆ.ಅತೀಕ್, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಎಲ್.ಕೆ.ಅತೀಕ್ ಸಲಹೆ ಜಾರಿಗೊಳಿಸಬೇಕು!
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್.ಕೆ.ಅತೀಕ್ ಹಾಗೂ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸಲು ಹಲವು ಸಲಹೆಗಳನ್ನು ನೀಡಿದ್ದಾರೆ. ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಜವಾಬ್ದಾರಿ ಈಗ ನಿಮ್ಮೆಲ್ಲರ ಮೇಲಿದೆ. ಅಧಿಕಾರಿಗಳ ಮೇಲೆ ನನಗೆ ಪೂರ್ತಿ ಭರವಸೆ ಇದೆ. ನೀವೆಲ್ಲಾ ನನ್ನ ನಿರೀಕ್ಷೆ ಈಡೇರಿಸಲು ಶ್ರಮಿಸುತ್ತೀರಿ ಎನ್ನುವ ವಿಶ್ವಾಸವೂ ಇದೆ.
-ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ






