‘ಈ.ಡಿ ದುರ್ಬಳಕೆ’ ಬಿಜೆಪಿಗರು ರಾಜ್ಯದ ಜನರ ಕ್ಷಮೆಯಾಚಿಸಲಿ : ಡಾ.ಮಹದೇವಪ್ಪ

ಬೆಂಗಳೂರು : ಬಿಜೆಪಿಯವರು ವಿಪಕ್ಷಗಳನ್ನು ತೇಜೋವಧೆ ಮಾಡಲು ಜಾರಿ ನಿರ್ದೇಶನಾಲಯ (ಈಡಿ)ದಂತಹ ತನಿಖಾ ಸಂಸ್ಥೆಗಳನ್ನು ದಾಳವಾಗಿ ಬಳಸಿಕೊಳ್ಳುತ್ತಿರುವುದು ಇದೀಗ ‘ಮುಡಾ’ ಪ್ರಕರಣದಲ್ಲಿ ಸ್ಪಷ್ಟವಾಗಿದ್ದು, ಇಂತಹ ಹೀನ ರಾಜಕೀಯ ಕೃತ್ಯ ಮಾಡಿದ್ದಕ್ಕಾಗಿ ಬಿಜೆಪಿ ಮುಖಂಡರು ರಾಜ್ಯದ ಜನರ ಮುಂದೆ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಆಗ್ರಹಿಸಿದ್ದಾರೆ.
ಸೋಮವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯರ ವಿಷಯದಲ್ಲಿ ರಾಜಕೀಯ ಪ್ರೇರಿತವಾಗಿ ನಡೆದುಕೊಳ್ಳುತ್ತಿದ್ದ ಈಡಿ ತನಿಖಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ಛಾಟಿ ಬೀಸಿದ್ದು, ಚುನಾವಣೆಗಳು ಚುನಾವಣಾ ಕಣದಲ್ಲಿ ನಡೆಯಲಿ, ನೀವು ರಾಜಕೀಯ ದಾಳವಾಗಿ ಬಳಕೆ ಆಗಬೇಡಿ. ನಾವು ಮಾತನಾಡಲು ಆರಂಭಿಸಿದರೆ ಈಡಿ ಸಂಸ್ಥೆಯ ವಿರುದ್ಧ ಕಟುವಾಗಿ ಮಾತನಾಡಬೇಕಾಗುತ್ತದೆ ಎಂದು ಎಚ್ಚರಿಸಿದೆ ಎಂದು ಉಲ್ಲೇಖಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಇಂತಹ ಘಟನೆಗಳನ್ನು ನಾವು ಕಂಡಿದ್ದೇವೆ. ಈಡಿ ಸಂಸ್ಥೆಯು ದೇಶಾದ್ಯಂತ ಈ ರೀತಿಯ ಕೆಟ್ಟ ಪ್ರವೃತ್ತಿ ಹರಡುವುದನ್ನು ನಾವು ಸಹಿಸುವುದಿಲ್ಲ ಎಂದು ಈಡಿಗೆ ಸುಪ್ರೀಂ ಕೋರ್ಟ್ ಎಚ್ಚರಿಸಿದೆ. ಆ ಮೂಲಕ ಇನ್ನು ರಾಜಕೀಯದ ಹಿಡಿತಕ್ಕೆ ಒಳಗಾಗದೇ ಸ್ವತಂತ್ರ ತನಿಖಾ ಸಂಸ್ಥೆಗಳು ತಮ್ಮ ಜವಾಬ್ದಾರಿಯನ್ನು ಸೂಕ್ತವಾಗಿ ನಿರ್ವಹಿಸಿ ಸಂಸ್ಥೆಗಳ ಘನತೆಯನ್ನು ಮತ್ತು ಅದರ ಮಹತ್ವವನ್ನು ಉಳಿಸಿಕೊಳ್ಳುವ ಕೆಲಸ ಮಾಡಲಿ ಎಂದು ಅವರು ಒತ್ತಾಯಿಸಿದ್ದಾರೆ.
ದೇಶದ ಸರ್ವೋಚ್ಛ ಅಂಗವಾದ ನ್ಯಾಯಾಂಗವೇ ಜಾರಿ ನಿರ್ದೇಶನಾಲಯ(ಈಡಿ)ದಂತಹ ಸಂಸ್ಥೆಯ ಅಧಿಕಾರ ದುರ್ಬಳಕೆ ವಿಷಯದಲ್ಲಿ ದನಿ ಎತ್ತಿರುವುದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಉತ್ತಮ ಬೆಳವಣಿಗೆ ಆಗಿದ್ದು ಇದನ್ನು ನಾನು ಸ್ವಾಗತಿಸುತ್ತೇನೆ ಎಂದು ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದಾರೆ.







