ಕರ್ನಾಟಕದ ಇಂಜಿನಿಯರ್ ಗಳಿಗೆ ‘Er’ ಗೌರವ; ಹೆಸರಿನ ಮುಂದೆ ಶೀರ್ಷಿಕೆ ಬಳಸಲು ಅವಕಾಶ
ವಿಶ್ವೇಶ್ವರಯ್ಯ ಜನ್ಮದಿನ ಸೆ.15 ‘ಇಂಜಿನಿಯರ್ ಗಳ ದಿನ’

ಬೆಂಗಳೂರು: ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನವಾದ ಸೆಪ್ಟೆಂಬರ್ 15ನ್ನು ಪ್ರತಿವರ್ಷ ‘ಇಂಜಿನಿಯರ್ ಗಳ ದಿನ’ವನ್ನಾಗಿ ಆಚರಿಸಲು ಕರ್ನಾಟಕ ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ರಾಜ್ಯದ ಇಂಜಿನಿಯರ್ ಗಳು ತಮ್ಮ ಹೆಸರಿನ ಮುಂದೆ ‘Er’ (Engineer) ಎಂಬ ಶೀರ್ಷಿಕೆಯನ್ನು ಬಳಸಲು ಕೂಡ ಅನುಮತಿ ನೀಡಿದೆ.
ಈ ಕುರಿತು ಸರ್ಕಾರಿ ಆದೇಶವನ್ನು ಸೆಪ್ಟೆಂಬರ್ 15ರಂದು ಹೊರಡಿಸಲಾಗಿದೆ.
1861ರ ಸೆಪ್ಟೆಂಬರ್ 15ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ಜನಿಸಿದ ಸರ್ ಎಂ. ವಿಶ್ವೇಶ್ವರಯ್ಯ ಅವರು ಭಾರತದ ಶ್ರೇಷ್ಠ ಇಂಜಿನಿಯರ್, ಆಧುನಿಕ ಮೈಸೂರು ರಾಜ್ಯದ ನಿರ್ಮಾತೃ ಹಾಗೂ ಮಹಾನ್ ದೇಶಭಕ್ತರಾಗಿದ್ದರು. ದೇಶಕ್ಕೆ ಅವರು ನೀಡಿರುವ ಕೊಡುಗೆಗಳು ಅವಿಸ್ಮರಣೀಯ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.
ನಾಲ್ಮಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತಾವಧಿಯಲ್ಲಿ 1912ರಿಂದ 1918ರವರೆಗೆ ಮೈಸೂರು ರಾಜ್ಯದ 19ನೇ ದಿವಾನರಾಗಿ ಸೇವೆ ಸಲ್ಲಿಸಿದ ವಿಶ್ವೇಶ್ವರಯ್ಯ ಅವರ ದೂರದೃಷ್ಟಿಯ ಚಿಂತನೆಗಳು ಹಾಗೂ ‘ಕೈಗಾರಿಕೀಕರಣ ಇಲ್ಲವೇ ವಿನಾಶ’ (Industrialise or Perish) ಎಂಬ ತತ್ವದಡಿ ವಿವಿಧ ಕ್ಷೇತ್ರಗಳಲ್ಲಿ ಅವರು ನೀಡಿದ ಕೊಡುಗೆಗಳು ಮತ್ತು ಸಾಧನೆಗಳು ಅಪಾರವಾಗಿವೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಅಣೆಕಟ್ಟು ನಿರ್ಮಾಣ, ಪ್ರವಾಹದ ನೀರನ್ನು ನಿಯಂತ್ರಿಸಲು ಸ್ವಯಂಚಾಲಿತ ಫ್ಲಡ್ ಗೇಟ್ ಗಳ ಅಳವಡಿಕೆ, ಕಬ್ಬಿಣ ಮತ್ತು ಉಕ್ಕಿನ ಕೈಗಾರಿಕಾ ಕ್ಷೇತ್ರದಲ್ಲಿ ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಸ್ಥಾಪನೆ, ಮೈಸೂರಿನ ಪ್ರಸಿದ್ಧ ಶ್ರೀಗಂಧದ ಎಣ್ಣೆ ಕಾರ್ಖಾನೆ ಮತ್ತು ಸಾಬೂನು ಕಾರ್ಖಾನೆ ಆರಂಭ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅವರು ಕೊಡುಗೆ ನೀಡಿದ್ದಾರೆ.
ಶಿಕ್ಷಣ ಮತ್ತು ಹಣಕಾಸು ಕ್ಷೇತ್ರದಲ್ಲಿಯೂ ವಿಶ್ವೇಶ್ವರಯ್ಯ ಅವರ ಕೊಡುಗೆಗಳನ್ನು ಸರ್ಕಾರ ಉಲ್ಲೇಖಿಸಿದೆ. ಮೈಸೂರು ವಿಶ್ವವಿದ್ಯಾನಿಲಯದ ಸ್ಥಾಪನೆ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು (ಈಗಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ) ಹಾಗೂ ಕರ್ನಾಟಕ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪನೆಯನ್ನೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಸಮಾಜದ ಪ್ರಗತಿ ಮತ್ತು ಆಧುನಿಕ ಜಗತ್ತಿನ ನಿರ್ಮಾಣದಲ್ಲಿ ಇಂಜಿನಿಯರ್ ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇಂಜಿನಿಯರ್ ಗಳು ಕೇವಲ ಯಂತ್ರಗಳನ್ನು ವಿನ್ಯಾಸಗೊಳಿಸುವವರಲ್ಲ; ಮಾನವ ಎದುರಿಸುತ್ತಿರುವ ಸವಾಲುಗಳಿಗೆ ತಾಂತ್ರಿಕ ಪರಿಹಾರಗಳನ್ನು ರೂಪಿಸುವ ಮೂಲಕ ಭವಿಷ್ಯವನ್ನು ನಿರ್ಮಿಸುವ ಶಿಲ್ಪಿಗಳಾಗಿದ್ದಾರೆ ಎಂದು ಸರ್ಕಾರ ಹೇಳಿದೆ.
ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್ ಗಳ ಮಹತ್ವದ ಪಾತ್ರವನ್ನು ಗುರುತಿಸಿ, ಸರ್ ಎಂ. ವಿಶ್ವೇಶ್ವರಯ್ಯ ಅವರು ರಾಷ್ಟ್ರಕ್ಕೆ ನೀಡಿದ ಗಮನಾರ್ಹ ಕೊಡುಗೆಗಳನ್ನು ಗೌರವಿಸುವ ಉದ್ದೇಶದಿಂದ ಅವರ ಜನ್ಮದಿನವಾದ ಸೆಪ್ಟೆಂಬರ್ 15ನ್ನು ‘ಇಂಜಿನಿಯರ್ಗಳ ದಿನ’ವನ್ನಾಗಿ ಅಧಿಕೃತವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ.
ಅವರ ಕೊಡುಗೆಯ ವಿಶಿಷ್ಟ ಚಿಹ್ನೆಯನ್ನು ಗೌರವಿಸುವ ಉದ್ದೇಶದಿಂದ ಕರ್ನಾಟಕದ ಇಂಜಿನಿಯರ್ ಗಳು ತಮ್ಮ ಹೆಸರಿನ ಮುಂದೆ ‘Er’ (Engineer–ಅಭಿಯಂತರರು) ಎಂಬ ಎರಡು ಅಕ್ಷರಗಳ ಶೀರ್ಷಿಕೆಯನ್ನು ಹೆಮ್ಮೆಯಿಂದ ಬಳಸಲು ಸರ್ಕಾರ ಅನುಮತಿ ನೀಡಿದೆ.
ದೇಶದ ಅಭಿವೃದ್ಧಿ ಮತ್ತು ಆರ್ಥಿಕ ಪ್ರಗತಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಇಂಜಿನಿಯರ್ ಗಳ ಅಮೂಲ್ಯ ಕೊಡುಗೆಯನ್ನು ಸ್ಮರಿಸಿ ಗೌರವ ಸಲ್ಲಿಸುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.






