‘ರಾಜ್ಯದಲ್ಲಿ ರಸಗೊಬ್ಬರ ಕೊರತೆ’ | ಕೇಂದ್ರ ಸಚಿವ ಜೆ.ಪಿ.ನಡ್ಡಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ

ಜೆ.ಪಿ.ನಡ್ಡಾ(PC : PTI/ಸಿದ್ದರಾಮಯ್ಯ
ಬೆಂಗಳೂರು : ರಾಜ್ಯದಲ್ಲಿ ರಸಗೊಬ್ಬರ ಕೊರತೆಯುಂಟಾಗಿದ್ದು, ಕೆಲವು ರಸಗೊಬ್ಬರ ಕಂಪನಿಗಳು ಕೇಂದ್ರ ಸರಕಾರವು ಹಂಚಿಕೆ ಮಾಡಿದ ಪ್ರಕಾರ ಯೂರಿಯಾ ಗೊಬ್ಬರ ಪೂರೈಸಲು ಅಸಮರ್ಥತೆಯನ್ನು ವ್ಯಕ್ತಪಡಿಸಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಸಂಬಂಧ ಕೇಂದ್ರ ರಸಗೊಬ್ಬರ ಸಚಿವ ಜೆ.ಪಿ.ನಡ್ಡಾಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರಕಾರವು 2025ರ ಖಾರಿಫ್ ಬೆಳೆಗೆ ರಾಜ್ಯಕ್ಕೆ 11,17,000 ಮೆಟ್ರಿಕ್ ಟನ್ ಯೂರಿಯಾ ಹಂಚಿಕೆ ಮಾಡಿದೆ. ಈವರೆಗೆ ಕೇವಲ 5,16,959 ಮೆಟ್ರಿಕ್ ಟನ್ ರಸಗೊಬ್ಬರ ಸರಬರಾಜು ಮಾಡಲಾಗಿದೆ ಎಂದು ಹೇಳಿದ್ದಾರೆ.
ಆದರೆ ಎಪ್ರಿಲ್ನಿಂದ ಜುಲೈವರೆಗೆ ರಾಜ್ಯಕ್ಕೆ 6,80,655 ಮೆಟ್ರಿಕ್ ಟನ್ ಯೂರಿಯಾದ ಅವಶ್ಯಕತೆ ಇದೆ. ಕೆಲ ರಸಗೊಬ್ಬರ ಕಂಪನಿಗಳು ಕೇಂದ್ರ ಸರಕಾರವು ಹಂಚಿಕೆ ಮಾಡಿರುವ ಪ್ರಕಾರ ಯೂರಿಯಾ ಗೊಬ್ಬರ ಪೂರೈಸಲು ಅಸಮರ್ಥತೆಯನ್ನು ವ್ಯಕ್ತಪಡಿಸಿವೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಯೂರಿಯಾ ಪೂರೈಕೆಯ ತುರ್ತು ಅವಶ್ಯಕತೆಯಿದೆ. ಏಕೆಂದರೆ ಕರ್ನಾಟಕಕ್ಕೆ ಈ ವರ್ಷದ ಆರಂಭದಲ್ಲಿಯೇ ಮುಂಗಾರು ಪ್ರವೇಶ ಮಾಡಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ವಿವಿಧ ಬೆಳೆಗಳ ವ್ಯಾಪ್ತಿಯು ಹೆಚ್ಚಾಗಿದೆ. ತುಂಗಭದ್ರಾ, ಕಾವೇರಿ ಮತ್ತು ಕೃಷ್ಣಾ ನದಿಗಳ ಆಯಕಟ್ಟಿನ ಪ್ರದೇಶಗಳಲ್ಲಿ ನೀರನ್ನು ಮೊದಲೇ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಗಮನ ಸೆಳೆದಿದ್ದಾರೆ.
ಮುಂಗಾರು ಆರಂಭಿಕ ಬಿತ್ತನೆ ಚಟುವಟಿಕೆ ಆರಂಭವಾಗಿದೆ. ಹೆಚ್ಚಿನ ಗೊಬ್ಬರ ಬಳಸುವ ಬೆಳೆಯಾದ ಮೆಕ್ಕೆಜೋಳದ ವಿಸ್ತೀರ್ಣವು ಸುಮಾರು 2 ಲಕ್ಷ ಹೆಕ್ಟೇರ್ಗಳಷ್ಟು ಹೆಚ್ಚಾಗಿದೆ. ದ್ವಿದಳ ಧಾನ್ಯಗಳ ವಿಸ್ತೀರ್ಣವು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಕಡಿಮೆ ಆಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
13 ಸಾವಿರ ಹೆಕ್ಟೇರ್ ಖಾರಿಫ್ ಪೂರ್ವ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಯೂರಿಯಾ ಕೊರತೆಯು ರೈತರಲ್ಲಿ ಆತಂಕವನ್ನು ಸೃಷ್ಟಿಸುತ್ತಿದೆ. ರೈತರ ಹಿತದೃಷ್ಟಿಯಿಂದ ರಾಜ್ಯ ಹಂಚಿಕೆ ಪ್ರಕಾರ ರಸಗೊಬ್ಬರ ಪೂರೈಸಿ. ಬಾಕಿ ಕೊರತೆ ಇರುವ 1,65,541 ಮೆಟ್ರಿಕ್ ಟನ್ ಯೂರಿಯಾದ ಪೂರೈಕೆಯನ್ನು ತ್ವರಿತಗೊಳಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.







