ಕಂಠೀರವ ಕ್ರೀಡಾಂಗಣ ಮೇಲ್ದರ್ಜೆಗೆ ಯೋಜನೆ : ಜಿ.ಪರಮೇಶ್ವರ್

ಬೆಂಗಳೂರು : ಕಂಠೀರವ ಕ್ರೀಡಾಂಗಣವನ್ನು ಮೇಲ್ದರ್ಜೆಗೇರಿಸಲು ಯೋಜನೆ ರೂಪಿಸಲಾಗಿದ್ದು, ಸುಮಾರು 5ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿಗೆ ಗಮನ ಹರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.
ರವಿವಾರ ನಗರದ ಕರ್ನಾಟಕ ರಾಜ್ಯ ಬಾಸ್ಕೆಟ್ಬಾಲ್ ಸಂಸ್ಥೆಯ ವತಿಯಿಂದ ಕಂಠೀರವ ಕ್ರೀಡಾಂಗಣದ ಕರ್ನಾಟಕ ಒಲಂಪಿಕ್ ಭವನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಚಾಂಪಿಯನ್ಶಿಪ್ಗಳಲ್ಲಿ ಸಾಧನೆ ಮಾಡಿದ ಕಿರಿಯ, ಯುವಕರ ಬಾಸ್ಕೆಟ್ಬಾಲ್ ತಂಡಗಳಿಗೆ ಅಭಿನಂದಿಸಿ ಅವರು ಮಾತನಾಡಿದರು.
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲಾಗಿತ್ತು. ತದನಂತರ ಅದನ್ನು ಶೇ.3ಕ್ಕೆ ಹೆಚ್ಚಿಸಲಾಗಿದೆ. ಹಲವು ಕ್ರೀಡಾಪಟುಗಳು ಪಿಎಸ್ಐ, ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕವಾಗಿದ್ದಾರೆ. ಪದಕ ವಿಜೇತ ಕ್ರೀಡಾಪಟುಗಳನ್ನು ನೇರ ನೇಮಕಾತಿ ಮಾಡಿಕೊಳ್ಳುವ ಪದ್ಧತಿಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ಸರಕಾರ 72,000 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು, ಈ ನೇಮಕಾತಿಗಳಲ್ಲಿಯೂ ಕ್ರೀಡಾಪಟುಗಳಿಗೆ ಶೇ.2ರಷ್ಟು ಮೀಸಲಾತಿ ಸೌಲಭ್ಯ ಸಿಗಲಿದೆ. ದೇಶದ ಎಲ್ಲ ರಾಜ್ಯಗಳಲ್ಲೂ ಇಂತಹ ಅವಕಾಶವಿಲ್ಲ. ಕರ್ನಾಟಕದಲ್ಲಿ ಕ್ರೀಡಾಪಟುಗಳಿಗೆ ವಿಶೇಷ ಪ್ರೋ ತ್ಸಾಹ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಕಾಮನ್ವೆಲ್ತ್ ಕ್ರೀಡಾ ಕೂಟದಲ್ಲಿ ಭಾಗವಹಿಸಿದ ಎಲ್ಲ ಕ್ರೀಡಾಪಟುಗಳಿಗೆ ತಲಾ 5ಲಕ್ಷ ರೂ.ಪ್ರೋ ತ್ಸಾಹ ಧನ ನೀಡಲಾಗಿದೆ. ಪದಕ ವಿಜೇತರಿಗೆ 15 ಲಕ್ಷ ರೂ.ಪ್ರೋತ್ಸಾಹಧನ ನೀಡಲು ಕ್ರಮ ಕೈಗೊಳ್ಳಲಾಗುವುದು. ಪ್ಯಾರಾ ಒಲಿಂಪಿಕ್ಸ್ ನಲ್ಲಿ ಮೈಸೂರು ಮೂಲದ ಶಿಲ್ಪಾ ಅವರು ಭಾಗವಹಿಸಿ ಕಂಚಿನ ಪದಕ ಗೆದ್ದಿರುವುದು ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿದೆ ಎಂದರು.
ಸರಕಾರ ಹಾಗೂ ಕ್ರೀಡಾ ಸಂಸ್ಥೆಗಳು ಪ್ರೋತ್ಸಾಹ ನೀಡುವುದು ಒಂದು ಭಾಗವಾಗಿದ್ದು, ಅದಕ್ಕೆ ಪೂರಕವಾಗಿ ಕ್ರೀಡಾಪಟುಗಳು ಶ್ರದ್ಧೆ, ಪರಿಶ್ರಮ ಮತ್ತು ಬದ್ಧತೆಯಿಂದ ತಮ್ಮನ್ನು ತಾವು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಶ್ರದ್ಧೆಯಿಂದ ಪ್ರಯತ್ನಿಸಿದರೆ ಯಾವುದೇ ಕ್ಷೇತ್ರದಲ್ಲೂ ಸಾಧನೆ ಮಾಡಬಹುದು. ಒಬ್ಬ ಕ್ರೀಡಾಪಟುವಿನ ಬದ್ಧತೆ ಇಡೀ ತಂಡಕ್ಕೆ ಸ್ಫೂರ್ತಿಯಾಗಲಿದೆ ಎಂದು ಕಿವಿಮಾತು ಹೇಳಿದರು.
ರಾಜ್ಯದಲ್ಲಿ ಕ್ರೀಡೆಗೆ ಉತ್ತೇಜನ ನೀಡಲು ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಉತ್ತಮ ತರಬೇತಿ ಪಡೆಯಲು ಕ್ರೀಡಾಪಟುಗಳನ್ನು ವಿದೇಶಗಳಿಗೆ ಕಳುಹಿಸುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಕೇಂದ್ರ ಸರಕಾರದ ‘ಖೇಲೋ ಇಂಡಿಯಾ’ ಕಾರ್ಯಕ್ರಮವೂ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆಯನ್ನು ಒದಗಿಸುತ್ತಿದೆ ಎಂದರು.
ದೇವನಹಳ್ಳಿ ಸಮೀಪ ಸುಮಾರು 60 ಎಕರೆ ಪ್ರದೇಶದಲ್ಲಿ ‘ಸ್ಪೋಟ್ರ್ಸ್ ಸಿಟಿ’ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ವಿವಿಧ ಕ್ರೀಡೆಗಳನ್ನು ಒಂದೇ ಸಮಗ್ರ ಕ್ರೀಡಾ ಮೂಲಸೌಕರ್ಯದಲ್ಲಿ ನಡೆಸಲು ಅನುಕೂಲವಾಗುವಂತೆ ನೀಲನಕ್ಷೆ ಸಿದ್ಧಪಡಿಸಲಾಗಿದೆ. ಕರ್ನಾಟಕವನ್ನು ದೇಶದ ಪ್ರಮುಖ ಕ್ರೀಡಾ ರಾಜ್ಯವಾಗಿ ರೂಪಿಸುವ ನಿಟ್ಟಿನಲ್ಲಿ ಸರಕಾರ ಕಾರ್ಯನಿರ್ವಹಿಸುತ್ತಿದೆ ಎಂದರು.
ಗುಜರಾತ್ನ ಅಹಮದಾಬಾದ್ನಲ್ಲಿ ಕಾಮನ್ವೆಲ್ತ್ ಗೇಮ್ಸ್ ನಡೆಯಲಿದ್ದು, ಈ ವೇಳೆ ಕಂಠೀರವ ಕ್ರೀಡಾಂಗಣವನ್ನು ಮೇಲ್ದರ್ಜೆಗೇರಿಸಲು ಸಾಧ್ಯವಾದರೆ ಕೆಲವು ಕ್ರೀಡಾ ಸ್ಪರ್ಧೆಗಳನ್ನು ಬೆಂಗಳೂರಿನಲ್ಲಿ ಆಯೋಜಿಸುವ ಅವಕಾಶ ದೊರೆಯಲಿದೆ. ಇದರಿಂದ ಕರ್ನಾಟಕದ ಕ್ರೀಡಾ ಸಾಮಥ್ರ್ಯವನ್ನು ದೇಶ-ವಿದೇಶಗಳಿಗೆ ಪರಿಚಯಿಸಲು ಸಾಧ್ಯವಾಗಲಿದೆ ಎಂದರು.
ಇದೇ ವೇಳೆ ವಿವಿಧ ಕ್ರೀಡಾ ತಂಡಗಳು ಹಾಗೂ ಆಟಗಾರರಿಗೆ ಒಟ್ಟು 30 ಲಕ್ಷ ರೂ. ನಗದು ಬಹುಮಾನವನ್ನು ನೀಡಲಾಯಿತು. 75ನೇ ಜೂನಿಯರ್ ರಾಷ್ಟ್ರೀಯ ಬ್ಯಾಸ್ಕೆಟ್ಬಾಲ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆದ್ದ ಕರ್ನಾಟಕದ ಬಾಲಕರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ, ವಿವಿಧ ರಾಷ್ಟ್ರೀಯ ಚಾಂಪಿಯನ್ಶಿಪ್ಗಳಲ್ಲಿ ಪದಕಗಳನ್ನು ಗೆದ್ದು ಕರ್ನಾಟಕಕ್ಕೆ ಕೀರ್ತಿ ತಂದ ಇತರ ತಂಡಗಳು ಹಾಗೂ ಪ್ರತಿಭಾನ್ವಿತ ಆಟಗಾರರಿಗೆ 20 ಲಕ್ಷ ರೂ. ನಗದು, ಕ್ರೀಡಾಪಟುಗಳಿಗೆ ವೈದ್ಯಕೀಯ ನೆರವು ಹಾಗೂ ವಿದ್ಯಾರ್ಥಿವೇತನ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷ ಕೆ.ಗೋವಿಂದರಾಜು, ಕ್ರೀಡಾ ಇಲಾಖೆಯ ಆಯುಕ್ತ ಎಂ.ಎನ್.ಅನುಚೇತ್ ಮತ್ತಿತರರು ಉಪಸ್ಥಿತರಿದ್ದರು.






